
ನಂಜೇಗೌಡ, ಕೆ.ಎಸ್.ಮಂಜುನಾಥಗೌಡ
ಕೋಲಾರ: ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕ್ರಿಯೆ ಭಾರಿ ಬಿಗಿ ಬಂದೋಬಸ್ತ್ನಲ್ಲಿ ಮಂಗಳವಾರ ಯಶಸ್ವಿಯಾಗಿ ನಡೆದಿದ್ದು, ಫಲಿತಾಂಶದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂಬುದು ಗೊತ್ತಾಗಿದೆ.
ರಾತ್ರಿ 8 ಗಂಟೆಗೆ ಸುಮಾರಿಗೆ ಎಣಿಕೆ ಕೇಂದ್ರದಿಂದ ಹೊರಬಂದ ಶಾಸಕ ಕೆ.ವೈ.ನಂಜೇಗೌಡ, ‘ಮರು ಮತ ಎಣಿಕೆಯಲ್ಲಿ ಯಾವುದೇ ವ್ಯತ್ಯಾಸ ಕಂಡಿಲ್ಲ. ನಾವು ಅಂಬೇಡ್ಕರ್ ಸಂವಿಧಾನದಲ್ಲಿ ವಿಶ್ವಾಸವಿಟ್ಟಿದ್ದು, ನ್ಯಾಯ ದೊರಕಿದೆ ’ ಎಂದು ಖುಷಿ ವ್ಯಕ್ತಪಡಿಸಿದರು.
ಫಲಿತಾಂಶದ ಬಗ್ಗೆ ತಕರಾರರು ಅರ್ಜಿ ಸಲ್ಲಿಸಿದ್ದ ಪರಾಜಿತ ಅಭ್ಯರ್ಥಿ ಹಾಗೂ ಬಿಜೆಪಿ ಮುಖಂಡ ಕೆ.ಎಸ್.ಮಂಜುನಾಥಗೌಡ ಮರು ಮತ ಎಣಿಕೆ ಬಗ್ಗೆ ಆಕ್ಷೇಪ ಹಾಗೂ ಅಸಮಾಧಾನ ವ್ಯಕ್ತಪಡಿಸಿದರು. ಎಲ್ಲಾ ವಿಚಾರವನ್ನು ಸುಪ್ರೀಂ ಕೋರ್ಟ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.
ಅಲ್ಲದೇ, ಗೆದ್ದಿರುವ ಶಾಸಕರಿಗೆ ಅಭಿನಂದನೆ ಸಲ್ಲಿಸೋಣ ಎಂದರು.
ಈ ಮೂಲಕ ಅವರ ಶಾಸಕ ಸ್ಥಾನ ಅಬಾಧಿತವಾಗಿದೆ ಎಂಬುದು ತಿಳಿದು ಬಂದಿದೆ. ‘ಮರು ಮತ ಎಣಿಕೆಯಲ್ಲೂ ನಂಜೇಗೌಡರು ಗೆದ್ದಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ಕೆಲ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡು ಸಂಭ್ರಮಿಸಿದರು.
ಮರು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹೀಗಾಗಿ, ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುವಂತಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.