ADVERTISEMENT

ಅಂಕಪಟ್ಟಿ ಅದಾಲತ್‌ಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2020, 10:49 IST
Last Updated 30 ಅಕ್ಟೋಬರ್ 2020, 10:49 IST
ಜಯರಾಮರೆಡ್ಡಿ
ಜಯರಾಮರೆಡ್ಡಿ   

ಮಾಲೂರು: ‘ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಂಕಪಟ್ಟಿ ಅದಾಲತ್ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಾಂಶುಪಾಲ ಜಯರಾಮರೆಡ್ಡಿ ತಿಳಿಸಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಕಚೇರಿ ಆವರಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸರ್ಕಾರಿ ಕಾಲೇಜುಗಳಿಗೆ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ. ಆದ್ದರಿಂದ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಅಂಕಪಟ್ಟಿ ಅದಾಲತ್‌ ಹಮ್ಮಿಕೊಳ್ಳಲಾಗಿದೆ. 2007-08ರಿಂದ ಇಲ್ಲಿಯವರೆಗೂ ವಿದ್ಯಾರ್ಥಿಗಳಿಗೆ ಅಂಕಪಟ್ಟಿಗಳನ್ನು ವಿತರಣೆ ಮಾಡಿಲ್ಲ. ಸುಮಾರು 20 ಸಾವಿರ ಅಂಕಪಟ್ಟಿಗಳು ಉಳಿದುಕೊಂಡಿವೆ ಎಂದು ವಿವರಿಸಿದರು.

ADVERTISEMENT

11 ಉಪನ್ಯಾಸಕರು ಅಂಕಪಟ್ಟಿ ನಮೂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಒಂದು ವಾರದೊಳಗೆ ಅಂಕಪಟ್ಟಿ ಅದಾಲತ್‌ ಹಮ್ಮಿಕೊಳ್ಳಲಾಗುವುದು. ಇದರಿಂದ ಅಂಕಪಟ್ಟಿಗಾಗಿ ವಿದ್ಯಾರ್ಥಿಗಳು ಕಾಲೇಜಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.

ಯಾವುದೇ ಖಾಸಗಿ ಕಾಲೇಜುಗಳಿಗೆ ಕಡಿಮೆ ಇಲ್ಲದಂತೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಕೊಠಡಿಗಳು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಉತ್ತಮ ಗುಣಮಟ್ಟದ ಗ್ರಂಥಾಲಯವೂ ಇದೆ. ನುರಿತ ಉಪನ್ಯಾಸಕರನ್ನು ಒಳಗೊಂಡಿರುವ ಸರ್ಕಾರಿ ಕಾಲೇಜನ್ನು ಸರ್ಕಾರದ ಅನುದಾನ ಸೇರಿದಂತೆ ದಾನಿಗಳ ಸಹಕಾರದಿಂದ ಯಾವುದೇ ಖಾಸಗಿ ಕಾಲೇಜಿಗಿಂತ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಲಾಗಿದೆ ಎಂದರು.

ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶಾತಿ ಪಡೆಯುತ್ತಿದ್ದಾರೆ. ಬಿಎ, ಬಿಕಾಂ, ಮತ್ತು ಬಿಎಸ್ಸಿ ತರಗತಿಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.