ADVERTISEMENT

ಜೂನ್‌ 27ಕ್ಕೆ ಸಾಮೂಹಿಕ ವಿವಾಹ

​ಪ್ರಜಾವಾಣಿ ವಾರ್ತೆ
Published 21 ಮೇ 2019, 14:18 IST
Last Updated 21 ಮೇ 2019, 14:18 IST

ಕೋಲಾರ: ‘ಬುದ್ಧ ಜಯಂತಿ ಪ್ರಯುಕ್ತ ಸಂಘಟನೆ ವತಿಯಿಂದ ನಗರದ ನಚಿಕೇತ ವಿದ್ಯಾರ್ಥಿನಿಲಯ ಆವರಣದಲ್ಲಿ ಜೂನ್‌ 27ರಂದು 3ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಹಮ್ಮಿಕೊಳ್ಳಲಾಗಿದೆ’ ಎಂದು ಭೀಮಸೇನೆ ರಾಜ್ಯ ಘಟಕದ ಅಧ್ಯಕ್ಷ ಪಂಡಿತ್‌ ಮುನಿವೆಂಕಟಪ್ಪ ತಿಳಿಸಿದರು.

ಇಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಹಾಗೂ ಬಡವರ ಅನುಕೂಲಕ್ಕಾಗಿ ಸಂಘಟನೆಯಿಂದ 5 ವರ್ಷಗಳವರೆಗೆ ಪ್ರಾಯೋಗಿಕವಾಗಿ ಸಾಮೂಹಿಕ ವಿವಾಹ ನಡೆಸಲು ತೀರ್ಮಾನಿಸಲಾಗಿದೆ’ ಎಂದರು.

‘ಮೊದಲನೇ ವರ್ಷ 21 ಜೋಡಿ, ಎರಡನೇ ವರ್ಷ 18 ಜೋಡಿಗಳಿಗೆ ಸಾಮೂಹಿಕ ವಿವಾಹ ಮಾಡಿಸಲಾಗಿದೆ. ಈ ವರ್ಷ 25 ಜೋಡಿಗಳಿಗೆ ಮದುವೆ ಮಾಡಿಸಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಧು ವರರಿಗೂ ವಿವಾಹಕ್ಕೆ ಅವಕಾಶ ಕಲ್ಪಿಸಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಹಿಂದಿನ 2 ವರ್ಷದಲ್ಲಿ ಮದುವೆಯಾಗಿದ್ದ 39 ಜೋಡಿಗಳಿಗೆ ಸರ್ಕಾರದಿಂದ ಪ್ರೋತ್ಸಾಹಧನವಾಗಿ ವಿತರಿಸಲಾಗುವ ₹ 50 ಸಾವಿರವು ಜೋಡಿಯ ಬ್ಯಾಂಕ್ ಖಾತೆಗೆ ಜಮಾ ಆಗಿದೆ. ಆರಂಭಿಕ ವರ್ಷದಲ್ಲಿ ಸರ್ಕಾರದಿಂದ ಕೋಲಾರ ಜಿಲ್ಲೆಗೆ ಬಿಡುಗಡೆಯಾಗಿದ್ದ ₹ 40 ಲಕ್ಷದಲ್ಲಿ ಸುಮಾರು ₹ 25 ಲಕ್ಷ ಸಮಾಜ ಕಲ್ಯಾಣ ಇಲಾಖೆಯಲ್ಲಿ ಉಳಿದಿದೆ’ ಎಂದು ಮಾಹಿತಿ ನೀಡಿದರು.

‘ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಸದ್ಯದಲ್ಲೇ ಪ್ರೋತ್ಸಾಹಧನ ವಿತರಿಸಲಾಗುತ್ತದೆ. ಹಿಂದುಳಿದ ವರ್ಗದ ಬಡವರು ಸಾಮೂಹಿಕವಾಗಿ ಸರಳ ವಿವಾಹವಾದರೆ ಅವರಿಗೂ ಪ್ರೋತ್ಸಾಹಧನ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ’ ಎಂದು ಹೇಳಿದರು.

‘ಸಾಮೂಹಿಕ ವಿವಾಹಕ್ಕೆ ನೋಂದಣಿ ಮಾಡಿಸುವ ವಧು ವರರಿಗೆ ಮೊದಲ ಬಾರಿಗೆ ಮದುವೆ ಆಗುತ್ತಿರಬೇಕು. ಹೆಣ್ಣಿಗೆ 18 ವರ್ಷ ಮತ್ತು ಗಂಡಿಗೆ 21 ವರ್ಷ ಪೂರ್ತಿಯಾಗಿರಬೇಕು. ಆಸಕ್ತರು ಹೆಚ್ಚಿನ ಮಾಹಿತಿಗೆ 9448663902 ಅಥವಾ 9880794744 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು’ ಎಂದು ತಿಳಿಸಿದರು.

ಸಂಘಟನೆಯ ರಾಜ್ಯ ಸಮಿತಿ ಸದಸ್ಯ ರಾಮಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟಸ್ವಾಮಿ, ಕಾರ್ಯದರ್ಶಿ ವೆಂಕಟರಾಮಯ್ಯ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಹಂಸಿಣಿ, ಕಾರ್ಯದರ್ಶಿ ನಾರಾಯಣಮ್ಮ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.