ಕೋಲಾರ: ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು ಮತ್ತು ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿ ರೈತ ಸಂಘ ಸದಸ್ಯರು ತಾಲ್ಲೂಕಿನ ರೋಜರಪಲ್ಲಿ ಕ್ರಾಸ್ ಬಳಿ ಬುಧವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಮನವಿ ಸಲ್ಲಿಸಿದರು.
ಬಯಲುಸೀಮೆಯ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜು ಇದೆ. ಆದರೆ ಸರ್ಕಾರಿ ಮೆಡಿಕಲ್ ಕಾಲೇಜು ಇಲ್ಲ. ಅನೇಕ ಬಾರಿ ಈ ವಿಚಾರವು ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿದ್ದರೂ ಈವರೆಗೆ ಯಾವುದೇ ರೀತಿಯಲ್ಲಿಯೂ ಪ್ರಯೋಜನವಾಗಿಲ್ಲ. ಕೂಡಲೇ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ನಕಲಿ ಕ್ಲಿನಿಕ್ಗಳ ಹಾವಳಿ ಮಿತಿ ಮೀರಿದೆ. ಜಿಲ್ಲೆಯ ಮುಳಬಾಗಿಲು, ಕೆಜಿಎಫ್ ತಾಲ್ಲೂಕುಗಳ ಗಡಿಗಳಲ್ಲಿ ಆಂಧ್ರದ ವೈದ್ಯರ ಹಾವಳಿ ಹೆಚ್ಚಾಗಿದ್ದು, ಗ್ರಾಮೀಣ ಜನರ ಆರೋಗ್ಯದ ಜತೆ ಚೆಲ್ಲಾಟವಾಡುತ್ತಿದ್ದಾರೆ. ಆದರೂ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದು, ಕೂಡಲೇ ನಕಲಿ ಕ್ಲಿನಿಕ್ಗಳಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡಬೇಕೆಂದು ಕೋರಲಾಯಿತು.
ಮನವಿ ಸ್ವೀಕರಿಸಿ ಮಾತನಾಡಿದ ಆರೋಗ್ಯ ಸಚಿವರು, ಮೆಡಿಕಲ್ ಕಾಲೇಜು ಆರಂಭ ಸಂಬಂಧ ಶೀಘ್ರ ಕ್ರಮಕೈಗೊಳ್ಳಲಾಗುವುದು ಹಾಗೂ ಹುದ್ದೆಗಳ ಭರ್ತಿಗೂ ಆದ್ಯತೆ ನೀಡಲಾಗುವುದಾಗಿ ಭರವಸೆ ನೀಡಿದರು.
ಮುಖಂಡರಾದ ಎ.ನಳಿನಿಗೌಡ, ನಾಗರಾಜಗೌಡ, ಆಂಜಿನಪ್ಪ, ಲೋಕೇಶ್, ರವಿಕುಮಾರ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.