ADVERTISEMENT

ಹಾಲಿನ ಪುಡಿ: ಕಲಿಕಾಸಕ್ತಿ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2020, 14:31 IST
Last Updated 11 ಮಾರ್ಚ್ 2020, 14:31 IST
ಕೋಲಾರದ ಟಮಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಡಿಡಿಪಿಐ ಕೆ.ರತ್ನಯ್ಯ ವಿಟಮಿನ್‌ ಪುಡಿ ಮಿಶ್ರಿತ ಹಾಲನ್ನು ಮಕ್ಕಳಿಗೆ ವಿತರಿಸಿದರು.
ಕೋಲಾರದ ಟಮಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಡಿಡಿಪಿಐ ಕೆ.ರತ್ನಯ್ಯ ವಿಟಮಿನ್‌ ಪುಡಿ ಮಿಶ್ರಿತ ಹಾಲನ್ನು ಮಕ್ಕಳಿಗೆ ವಿತರಿಸಿದರು.   

ಕೋಲಾರ: ‘ಸರ್ಕಾರ ಕ್ಷೀರಭಾಗ್ಯ ಯೋಜನೆಯಡಿ ನೀಡುತ್ತಿರುವ ಹಾಲಿನ ಪುಡಿಯು ಮಕ್ಕಳ ಆರೋಗ್ಯ ವೃದ್ಧಿಸಿ ಕಲಿಕಾಸಕ್ತಿ ಹೆಚ್ಚಿಸುತ್ತದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಅಭಿಪ್ರಾಯಪಟ್ಟರು.

ಶಿಕ್ಷಕ ಗೆಳೆಯರ ಬಳಗ ಹಾಗೂ ಶ್ರೀ ಸತ್ಯಸಾಯಿ ಟ್ರಸ್ಟ್ ಸಹಯೋಗದಲ್ಲಿ ನಗರದ ಟಮಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಲೆಗಳಿಗೆ ಉಚಿತವಾಗಿ ನೀಡುತ್ತಿರುವ ಚಾಕೊಲೇಟ್ ಸ್ವಾದದ ‘ಸಾಯಿ ಶೂರ್’ ವಿಟಮಿನ್‌ ಪುಡಿ ಬಿಡುಗಡೆಗೊಳಿಸಿ ಮಾತನಾಡಿದರು.

‘ಸಂಘ ಸಂಸ್ಥೆಗಳು ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಉಚಿತವಾಗಿ ನೀಡುತ್ತಿರುವ ರುಚಿಕರ ವಿಟಮಿನ್‌ ಪುಡಿಯು ಸದೃಢ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ನಾಂದಿಯಾಡುತ್ತದೆ. ಪ್ರಾಯೋಗಿಕವಾಗಿ ಈ ಸೌಲಭ್ಯವನ್ನು ತಾಲ್ಲೂಕಿನ 17 ಶಾಲೆಗಳ ಮಕ್ಕಳಿಗೆ ನೀಡಲಾಗುತ್ತಿದೆ. ಇದರ ಸಾಧಕ-ಬಾಧಕ ಗಮನಿಸಿ ಜಿಲ್ಲೆಯಾದ್ಯಂತ ವಿಸ್ತರಿಸುವ ಬಗ್ಗೆ ನಿರ್ಧರಿಸುತ್ತೇವೆ’ ಎಂದು ಹೇಳಿದರು.

ADVERTISEMENT

‘ಅನೇಕ ಮಕ್ಕಳು ಹಾಲು ಕುಡಿಯುವುದಿಲ್ಲ. ಈ ಕಾರಣಕ್ಕಾಗಿ ಶ್ರೀ ಸಾಯಿ ಟ್ರಸ್ಟ್ ವತಿಯಿಂದ ಶಾಲೆಗಳಿಗೆ ಸಾಯಿ ಶೂರ್ ವಿಟಮಿನ್ ಪುಡಿ ವಿತರಿಸಲಾಗುತ್ತಿದೆ. ಈಗಾಗಲೇ ರಾಜ್ಯದ 4 ಲಕ್ಷ ಮಕ್ಕಳು ಈ ಪುಡಿ ಸೇವಿಸುತ್ತಿದ್ದಾರೆ. ಪ್ರತಿನಿತ್ಯ ಶಾಲೆ ಅವಧಿಗೆ ಮುನ್ನಾ ಬೆಳಿಗ್ಗೆ ಹಾಲಿನ ಜತೆ ಪ್ರತಿ ವಿದ್ಯಾರ್ಥಿಗೆ 10 ಗ್ರಾಂ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ನೀಡಬೇಕು’ ಎಂದು ಶಿಕ್ಷಕರು ಮತ್ತು ಅಡುಗೆ ಸಿಬ್ಬಂದಿಗೆ ಸೂಚಿಸಿದರು.

‘ತಾಲ್ಲೂಕಿನ ಎಲ್ಲಾ ಶಾಲೆಗಳ ಮಕ್ಕಳಿಗೆ ವಿಟಮಿನ್‌ ಪುಡಿ ನೀಡಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿ ಜತೆಗೆ ಸರ್ಕಾರಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಗೆ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಕರ ಗೆಳೆಯರ ಬಳಗದ ಕಾರ್ಯದರ್ಶಿ ವೀರಣ್ಣಗೌಡ, ಕೋಶಾಧ್ಯಕ್ಷ ಚಂದ್ರಪ್ಪ, ಮುದ್ದೇನಹಳ್ಳಿಯ ಶ್ರೀ ಸಾಯಿ ಸೇವಾ ಸಂಸ್ಥೆ ಮುಖ್ಯಸ್ಥ ಕಿರಣ್, ಶಿಕ್ಷಣ ಸಂಯೋಜಕ ಆರ್ ಶ್ರೀನಿವಾಸನ್. ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್, ಟಮಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಮಂಜುಳಾ, ಶಿಕ್ಷಕರಾದ ಹೇಮಾವತಿ, ಜಯಂತಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.