ಬಂಗಾರಪೇಟೆ: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಲ್ಲಿ ಮೂಲ ಜಾತಿ ಮತ್ತು ಉಪಜಾತಿಗಳನ್ನು ನಮೂದಿಸುವ ಮೂಲಕ ಬಲಗೈ ಸಮುದಾಯದ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.
ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಬುಧವಾರ ಆಯೋಜಿಸಿದ್ದ ಬಲಗೈ ಸಮುದಾಯದ ಮುಖಂಡರ ಸಮಾಲೋಚನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ ಜನರಿಗೆ ಜನಸಂಖ್ಯೆ ಪ್ರಮಾಣಕ್ಕೆ ಅನುಗುಣವಾಗಿ ಮೀಸಲಾತಿ ಅವಕಾಶ ಸಿಗಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರವು ಸದಾಶಿವ ಆಯೋಗದ ವರದಿಯಂತೆ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಕೈಗೊಂಡಿದೆ ಎಂದರು.
ಬಲಗೈ ಸಮುದಾಯದಕ್ಕೆ ಸೇರಿರುವ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಯಾವುದೇ ಹೆಸರಲ್ಲಿ ಇರಲಿ ಉಪ ಜಾತಿಯನ್ನು ಹೊಲೆಯ ಎಂದು ನಮೂದಿಸಬೇಕು. ಯಾರೊಬ್ಬರು ಸಮೀಕ್ಷೆಯಿಂದ ಹೊರಗೆ ಉಳಿಯದಂತೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಈಗ ನಡೆಯುತ್ತಿರುವ ಸಮೀಕ್ಷೆಯಲ್ಲಿ ನಾವು ಕಡ್ಡಾಯವಾಗಿ, ಮುಜುಗರವಿಲ್ಲದೆ ನಮ್ಮ ಮೂಲ ಜಾತಿಯಾಗಿರುವ ‘ಹೊಲೆಯ’ ಎಂದು ನಮೂದಿಸಬೇಕು ಎಂದು ಸಲಹೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಪ್ರತಾಪ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷಿನಾರಾಯಣ ಪ್ರಸಾದ್, ನಿವೃತ್ತ ಶಿಕ್ಷಕ ಸೀತಾರಾಮಪ್ಪ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.