ಕೋಲಾರ: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಎಂ.ಎಲ್.ಅನಿಲ್ಕುಮಾರ್ ಮಂಗಳವಾರ ಬರಿಗಾಲಲ್ಲಿ ಚುನಾವಣಾಧಿಕಾರಿ ಕಚೇರಿಗೆ ಬಂದು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ನಗರದ ಹೊರವಲಯದ ಹೋಟೆಲ್ನಲ್ಲಿ ಅವಳಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರೊಂದಿಗೆ ಸಭೆ ನಡೆಸಿದ ಅನಿಲ್ಕುಮಾರ್ ಜ್ಯೋತಿಷಿಗಳ ಸಲಹೆಯಂತೆ ಚಪ್ಪಲಿ ಹಾಕದೆ ಬರಿಗಾಲಲ್ಲಿ ಜಿಲ್ಲಾಡಳಿತ ಭವನಕ್ಕೆ ಬಂದರು. ಆಗ ಮುಖಾಮುಖಿಯಾದ ಜೆಡಿಎಸ್ನ ವಿಧಾನ ಪರಿಷತ್ ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ ಅವರು ಕಾಂಗ್ರೆಸ್ ಅಭ್ಯರ್ಥಿ ಅನಿಲ್ಕುಮಾರ್ ಹಾಗೂ ಮುಖಂಡರಿಗೆ ಹಸ್ತಲಾಘವ ನೀಡಿ ಶುಭ ಕೋರಿದ್ದು ವಿಶೇಷವಾಗಿತ್ತು.
ಪ್ಯಾಂಟ್ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಬಂದಿದ್ದ ಅನಿಲ್ಕುಮಾರ್ ಮಧ್ಯಾಹ್ನ 12.30ಕ್ಕೆ ಉಮೇದುವಾರಿಕೆ ಸಲ್ಲಿಸಿದರು. ಬಳಿಕ ಮಧ್ಯಾಹ್ನ 2 ಗಂಟೆಗೆ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದರು. ಇನ್ನೂ ಜೆಡಿಎಸ್ ಅಭ್ಯರ್ಥಿ ವಕ್ಕಲೇರಿ ರಾಮು ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಕೆ.ಎನ್.ವೇಣುಗೋಪಾಲ್ ಗೆಲುವಿಗಾಗಿ ನಗರದ ಶಕ್ತಿ ದೇವತೆ ಕೋಲಾರಮ್ಮನ ಮೊರೆ ಹೋದರು. ಈ ಇಬ್ಬರೂ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಕೋಲಾರಮ್ಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.