ADVERTISEMENT

ವರುಣ ದೇವನ ಕೃಪೆ: ಅನ್ನದಾತರ ಮೊಗದಲ್ಲಿ ಸಂತಸ

ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆ: ಕೃಷಿ ಚಟುವಟಿಕೆ ಚುರುಕು

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 13:14 IST
Last Updated 9 ಜೂನ್ 2021, 13:14 IST
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿಗಾಗಿ ಕೋಲಾರದ ಅಂಗಡಿಯೊಂದರ ಮುಂದೆ ಸಾಲುಗಟ್ಟಿ ನಿಂತಿರುವುದು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದ್ದು, ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿಗಾಗಿ ಕೋಲಾರದ ಅಂಗಡಿಯೊಂದರ ಮುಂದೆ ಸಾಲುಗಟ್ಟಿ ನಿಂತಿರುವುದು.   

ಕೋಲಾರ: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ವರುಣ ದೇವನ ಕೃಪೆಯಿಂದ ಅನ್ನದಾತರ ಮೊಗದಲ್ಲಿ ಸಂತಸ ಮೂಡಿದೆ.

ಬರಪೀಡಿತ ಪ್ರದೇಶವೆಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಜಿಲ್ಲೆಯು ಕೃಷಿ ಪ್ರಧಾನ ಜಿಲ್ಲೆಯಾಗಿದೆ. ಇಲ್ಲಿ ನದಿ, ಹೊಳೆಯಂತಹ ಮೇಲ್ಮೈ ನೀರಿನ ಮೂಲಗಳಿಲ್ಲ. ಹೀಗಾಗಿ ಮಳೆ ನೀರೇ ಕೃಷಿಗೆ ಪ್ರಮುಖ ಆಧಾರ. ಪ್ರತಿ ವರ್ಷ ಮುಂಗಾರಿನಲ್ಲಿ ಕಣ್ಣಾಮುಚ್ಚಾಲೆ ಆಡುವ ಮಳೆರಾಯ ಈ ಬಾರಿ ಜಿಲ್ಲೆಯ ರೈತರಲ್ಲಿ ಮಂದಹಾಸ ಮೂಡಿಸಿದ್ದಾನೆ.

ಜಿಲ್ಲೆಯಲ್ಲಿ ಜೂನ್‌ ತಿಂಗಳಿಂದ ಆಗಸ್ಟ್‌ ಅಂತ್ಯದವರೆಗಿನ ಅವಧಿಯನ್ನು ಮುಂಗಾರು ಹಂಗಾಮು ಎಂದು ಪರಿಗಣಿಸಲಾಗಿದ್ದು, ಸಾಮಾನ್ಯವಾಗಿ ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗುತ್ತದೆ. ಹೀಗಾಗಿ ಈ ಮೂರು ತಿಂಗಳಲ್ಲಿ ಬಿತ್ತನೆ ಚಟುವಟಿಕೆ ಬಿರುಸಾಗಿರುತ್ತದೆ.

ADVERTISEMENT

ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ರಾಗಿ, ಮುಸುಕಿನ ಜೋಳ, ಮೇವಿನ ಜೋಳ, ತೊಗರಿ, ಹುರಳಿ, ಹೆಸರುಕಾಳು, ಅಲಸಂದೆ, ಅವರೆ, ಉದ್ದು, ನೆಲಗಡಲೆ, ಸೂರ್ಯಕಾಂತಿ, ಎಳ್ಳು, ಸಾಸಿವೆ, ಹರಳು, ಸೋಯಾ ಅವರೆ ಹಾಗೂ ಹುಚ್ಚೆಳ್ಳು ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೇ, ವಾಣಿಜ್ಯ ಬೆಳೆಗಳಾದ ಭತ್ತ, ಕಬ್ಬು ಹಾಗೂ ಹತ್ತಿ ಬೆಳೆಯಲಾಗುತ್ತದೆ.

ಜಿಲ್ಲೆಯ ವಾರ್ಷಿಕ ವಾಡಿಕೆ ಮಳೆ ಪ್ರಮಾಣ 724 ಮಿ.ಮೀ ಇದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಆರು ತಾಲ್ಲೂಕುಗಳಿಂದ 97,900 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯಿದೆ. ಜೂನ್‌ ಆರಂಭದಲ್ಲೇ ಮಳೆರಾಯ ಗುಡುಗು ಮಿಂಚು ಸಹಿತ ಆರ್ಭಟಿಸಿದ್ದು, ರೈತರು ಬಿತ್ತನೆಗೆ ಭೂಮಿ ಹದಗೊಳಿಸಲು ಆರಂಭಿಸಿದ್ದಾರೆ.

ಬೀಜ–ಗೊಬ್ಬರಕ್ಕೆ ಬೇಡಿಕೆ: ರೈತರ ಅಗತ್ಯಕ್ಕೆ ಅನುಗುಣವಾಗಿ ಕೃಷಿ ಇಲಾಖೆಯು ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೃಷಿ ಉಪಕರಣ ವಿತರಿಸಲು ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯಾದ್ಯಂತ ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಿದ್ದು, ಗೊಬ್ಬರ ಮತ್ತು ಬೀಜದ ಅಂಗಡಿಗಳ ಮುಂದೆ ರೈತರು ಸಾಲುಗಟ್ಟಿ ನಿಲ್ಲುವ ದೃಶ್ಯ ಸಾಮಾನ್ಯವಾಗಿದೆ.

ಲಾಕ್‌ಡೌನ್‌ ನಡುವೆಯೂ ರೈತರ ಅನುಕೂಲಕ್ಕಾಗಿ ಜಿಲ್ಲಾಡಳಿತವು ಕೃಷಿ ಚಟುವಟಿಕೆ, ಕೃಷಿ ಸಂಬಂಧಿತ ಅಂಗಡಿಗಳು ಹಾಗೂ ಕೈಗಾರಿಕೆಗಳಿಗೆ ವಿನಾಯಿತಿ ನೀಡಿದೆ. ಬೆಳಿಗ್ಗೆ 6 ಗಂಟೆಯಿಂದ 10ರವರೆಗೆ ಮಾತ್ರ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಮಳಿಗೆಗಳು ವಹಿವಾಟು ನಡೆಸುತ್ತಿವೆ.

ಅಂಗಡಿಗಳು ಸೀಮಿತ ಅವಧಿಗೆ ಮಾತ್ರ ತೆರೆದಿರುವುದರಿಂದ ರೈತರು ಬಿತ್ತನೆ ಬೀಜ ಮತ್ತು ರಸಗೊಬ್ಬರ ಖರೀದಿಸಲು ಮುಗಿಬೀಳುತ್ತಿದ್ದಾರೆ. ಅಂಗಡಿಗಳು ಬಾಗಿಲು ತೆರೆಯುವುದಕ್ಕೂ ಮುನ್ನವೇ ನಸುಕಿನಿಂದಲೇ ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ದಾಸ್ತಾನು ವಿವರ: ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ ರಸಗೊಬ್ಬರದ ಬೇಡಿಕೆ 10,475 ಮೆಟ್ರಿಕ್‌ ಟನ್‌ ಇತ್ತು. ಈ ಪೈಕಿ 9,138 ಮೆಟ್ರಿಕ್‌ ಟನ್‌ ಪೂರೈಕೆಯಾಗಿದ್ದು, ಇದರಲ್ಲಿ 4,624 ಮೆಟ್ರಿಕ್‌ ಟನ್‌ ಗೊಬ್ಬರವನ್ನು ರೈತರಿಗೆ ಮಾರಾಟ ಮಾಡಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರುಕಟ್ಟೆ ಒಕ್ಕೂಟದಲ್ಲಿ (ಕೆಎಸ್‌ಸಿಎಂಎಫ್‌) 546 ಮೆಟ್ರಿಕ್‌ ಟನ್‌ ಮತ್ತು ಖಾಸಗಿಯವರ ಬಳಿ 4,514 ಮೆಟ್ರಿಕ್‌ ಟನ್‌ ಸೇರಿದಂತೆ 5,060 ಮೆಟ್ರಿಕ್‌ ಟನ್‌ ರಸಗೊಬ್ಬರ ದಾಸ್ತಾನು ಇದೆ.

ಜಿಲ್ಲೆಗೆ ರಾಗಿ, ತೊಗರಿ, ಅಲಸಂದೆ, ನೆಲಗಡಲೆ ಸೇರಿದಂತೆ ಜೂನ್‌ 2ರವರೆಗೆ 887 ಕ್ವಿಂಟಾಲ್‌ ಬಿತ್ತನೆ ಬೀಜ ಪೂರೈಕೆಯಾಗಿದ್ದು, 5.10 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.