ADVERTISEMENT

ಕೋಲಾರ | ಎತ್ತಿನಹೊಳೆಯಿಂದ 2.8 ಟಿಎಂಸಿ ನೀರು ಕೊಡಿ: ಎಂ.ಆರ್.‌ರವಿ

ವಿಧಾನ ಪರಿಷತ್ ಭರವಸೆಗಳ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 6:59 IST
Last Updated 18 ಅಕ್ಟೋಬರ್ 2025, 6:59 IST
ಕೋಲಾರದಲ್ಲಿ ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ.ಶರವಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರು, ಜಿಲ್ಲಾಧಿಕಾರಿ ಎಂ.ಆರ್‌.ರವಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು
ಕೋಲಾರದಲ್ಲಿ ಶುಕ್ರವಾರ ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ ಟಿ.ಎ.ಶರವಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮಿತಿ ಸದಸ್ಯರು, ಜಿಲ್ಲಾಧಿಕಾರಿ ಎಂ.ಆರ್‌.ರವಿ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು   

ಕೋಲಾರ: ‌ಎತ್ತಿನಹೊಳೆ ಯೋಜನೆಯಡಿ ಕೋಲಾರ ಜಿಲ್ಲೆಗೆ ಅಗತ್ಯವಿರುವ 2.8 ಟಿಎಂಸಿ ಅಡಿ ಕುಡಿಯುವ ನೀರನ್ನು ಒದಗಿಸುವಂತೆ ಜಿಲ್ಲಾಧಿಕಾರಿ ಎಂ.ಆರ್.‌ರವಿ, ಕರ್ನಾಟಕ ವಿಧಾನ ಪರಿಷತ್ತಿನ ಸರ್ಕಾರಿ ಭರವಸೆಗಳ ಸಮಿತಿಯನ್ನು ಒತ್ತಾಯಿಸಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಮಿತಿ ಸಭೆಯಲ್ಲಿ ಅವರು ಈ ಬೇಡಿಕೆ ಮಂಡಿಸಿದರು.

ಸಮಿತಿಯ ಅಧ್ಯಕ್ಷ‌, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ಮತ್ತು ಸದಸ್ಯರ ತಂಡ ಜಲಸಂಪನ್ಮೂಲ ಹಾಗೂ ಸಹಕಾರ ಇಲಾಖೆಗಳ ಭರವಸೆಗಳ ಕುರಿತು ಚರ್ಚೆ ನಡೆಸಲು ಕೋಲಾರಕ್ಕೆ ಭೇಟಿ ನೀಡಿತ್ತು.

ADVERTISEMENT

ಪೂರ್ವ ನಿಗದಿಯಂತೆ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆ ಮತ್ತು ಕೃಷಿ ಮಾರುಕಟ್ಟೆ ಪ್ರಾಂಗಣಕ್ಕೆ ನಿವೇಶನ ಮಂಜೂರು ಮಾಡುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

‘ಜಿಲ್ಲೆಯಲ್ಲಿ ಯಾವುದೇ ನೈಸರ್ಗಿಕ ಹರಿಯುವ ಜಲಮೂಲಗಳಿಲ್ಲ. ಮೂರು ಸಾವಿರಕ್ಕೂ ಹೆಚ್ಚು ಕೆರೆಗಳಲ್ಲಿ ಸಂಗ್ರಹವಾಗುವ ನೀರನ್ನೇ ಕೃಷಿ ಮತ್ತು ಜೀವನಕ್ಕೆ ಅವಲಂಬಿಸಲಾಗಿದೆ. ಪ್ರಸ್ತುತ ಕೆ.ಸಿ ವ್ಯಾಲಿ ಯೋಜನೆಯಡಿ ಕೆರೆಗಳನ್ನು ತುಂಬಿಸಲಾಗುತ್ತಿದೆಯಾದರೂ ಅಂತರ್ಜಲ ವೃದ್ಧಿಗೆ ಸಹಾಯಕವಾಗಿದೆ. ಕುಡಿಯುವ ನೀರಿನ ಸಮಸ್ಯೆ ಹಾಗೆಯೇ ಉಳಿದಿದೆ. ಜಿಲ್ಲೆಯಾದ್ಯಂತ ಕುಡಿಯುವ ನೀರು ಒದಗಿಸಲು ಕನಿಷ್ಠ 2.8 ಟಿಎಂಸಿ ಅಡಿ ನೀರಿನ ಅಗತ್ಯವಿದ್ದು, ಎತ್ತಿನಹೊಳೆ ಯೋಜನೆಯಡಿ ನೀರು ಒದಗಿಸಿ’ ಎಂದು ಕೋರಿದರು.

ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿಯು ಎತ್ತಿನಹೊಳೆ ಯೋಜನೆಯ ಪ್ರಗತಿ ಕುರಿತು ಮಾಹಿತಿ ನೀಡಿದರು.

2014ರಲ್ಲಿ ಪ್ರಾರಂಭವಾದ ಈ ಯೋಜನೆ ಒಟ್ಟು ₹ 24 ಸಾವಿರ ಕೋಟಿ ವೆಚ್ಚದ್ದಾಗಿದೆ. ಜಲಾಶಯದಲ್ಲಿ ಗರಿಷ್ಠ 24 ಟಿಎಂಸಿ ಅಡಿ ನೀರು ಸಂಗ್ರಹವಾಗುವ ನಿರೀಕ್ಷೆ ಇದ್ದು, ಅದರಲ್ಲಿ 18 ಟಿಎಂಸಿ ಅಡಿ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲು ಚಿಂತಿಸಲಾಗಿದೆ. ಉಳಿದ 10 ಟಿಎಂಸಿ ಅಡಿ ನೀರನ್ನು ಏಳು ಜಿಲ್ಲೆಗಳ ಕೆರೆಗಳನ್ನು ತುಂಬಿಸಲು ಬಳಸಲಾಗುವುದು ಎಂದು ತಿಳಿಸಿದರು.

ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದರೆ 2027ರ ಅಕ್ಟೋಬರ್‌ ವೇಳೆಗೆ ಕೋಲಾರಕ್ಕೆ ಕುಡಿಯುವ ನೀರು ಪೂರೈಕೆ ಸಾಧ್ಯವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಸಮಿತಿ ಸದಸ್ಯರಾದ ನಿರಾಣಿ ಹಣಮಂತ ರುದ್ರಪ್ಪ, ಕೆ.ಪ್ರತಾಪಾಸಿಂಹ ನಾಯಕ್, ಕೆ.ಎಸ್.ನವೀನ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ. ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಸ್ಥಾಪಕ ನಿರ್ದೇಶಕ ಶಿವಾನಂದ್, ಮುಖ್ಯ ಎಂಜಿನಿಯರ್‌ ಆನಂದ್ ಇದ್ದರು.

ಕುಡಿಯುವ ನೀರಿನ ಬವಣೆ: ಡಿ.ಸಿ ಮನವಿ ಯೋಜನೆ ಪ್ರಗತಿ: 2027ಕ್ಕೆ ನೀರು ಪೂರೈಕೆ ನಿರೀಕ್ಷೆ ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ ನೇತೃತ್ವದ ಸಮಿತಿ

ಎಪಿಎಂಸಿಗೆ 100 ಎಕರೆ ಜಾಗಕ್ಕೆ ಮನವಿ
ಹೊಸ ಕೃಷಿ ಮಾರುಕಟ್ಟೆಗೆ 100 ಎಕರೆ ಜಾಗದ ಅವಶ್ಯವಿದ್ದು ಇದಕ್ಕಾಗಿ ಐದು ಬಾರಿ ಪ್ರಯತ್ನ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಹೇಳಿದರು. ಪ್ರಸ್ತುತ ಮಾರುಕಟ್ಟೆಗೆ ಸೂಕ್ತವಾದ 60 ಎಕರೆ ಕಂದಾಯ ಜಾಗವನ್ನು ಗುರುತಿಸಲಾಗಿದೆ. ಇದಕ್ಕೆ ಹೊಂದಿಕೊಂಡಿರುವ 20 ಎಕರೆ ಅರಣ್ಯ ಪ್ರದೇಶವನ್ನು ಪರಿವರ್ತಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ. ಗುರುತಿಸಲಾದ 60 ಎಕರೆ ಜಾಗ ಮಂಜೂರಾತಿಗಾಗಿ ರಾಜ್ಯ ಸರ್ಕಾರಕ್ಕೆ ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. ಪ್ರಸ್ತಾವನೆಯ ಎಲ್ಲಾ ವಿವರಗಳನ್ನು ಸಮಿತಿಗೆ ಸಲ್ಲಿಸಿದರೆ ಸಂಸದರ ನಿಯೋಗವನ್ನು ಕಳುಹಿಸಿ ಜಾಗ ಮಂಜೂರಾತಿಗೆ ಪ್ರಯತ್ನಿಸುವುದಾಗಿ ಸಮಿತಿ ಅಧ್ಯಕ್ಷರು ಭರವಸೆ ನೀಡಿದರು.
ಇಚ್ಛಾಶಕ್ತಿ ಇದ್ದರೆ ಕಾರ್ಯಸಾಧು
ಪಕ್ಕದ ರಾಜ್ಯಗಳಲ್ಲಿ 500ಕ್ಕೂ ಹೆಚ್ಚು ಕಿ.ಮೀ. ದೂರದಿಂದ ಕೃಷ್ಣಾ ನದಿಯ ನೀರನ್ನು ತರಲಾಗಿದೆ. ಕೋಲಾರಕ್ಕೆ ನೀರು ತರಲು ಕೇವಲ 252 ಕಿ.ಮೀ. ಕ್ರಮಿಸಬೇಕಿದೆ. ಅಧಿಕಾರಿಗಳಲ್ಲಿ ಇಚ್ಛಾಶಕ್ತಿ ಇದ್ದರೆ ಇಂತಹ ಕಾರ್ಯಗಳನ್ನು ಸಾಧಿಸಬಹುದು ಎಂದು ಸಮಿತಿ ಅಧ್ಯಕ್ಷ ಟಿ.ಎ.ಶರವಣ ಹೇಳಿದರು. ಇದಕ್ಕೆ ಉತ್ತರಿಸಿದ ಕಾರ್ಯದರ್ಶಿಗಳು ಈಗಾಗಲೇ 32.5 ಕಿ.ಮೀ. ಕಾಮಗಾರಿ ಪೂರ್ಣಗೊಂಡಿದ್ದು ಉಳಿದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲು ಸರ್ಕಾರ ಉತ್ಸುಕವಾಗಿದೆ ಎಂದು ಸಭೆಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.