ಮುಳಬಾಗಿಲು: ಭಾರಿ ಮಳೆಗೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಎಂಟು ಕೆರೆಕಟ್ಟೆಗಳು ಬಿರುಕು ಬಿಟ್ಟಿದ್ದವು. ಅವುಗಳನ್ನು ದುರಸ್ತಿ ಮಾಡಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಇಒ ಡಾ. ಸರ್ವೇಶ್ ತಿಳಿಸಿದರು.
ತಾಲ್ಲೂಕಿನ ಕಪ್ಪಲಮೊಡಗು ಗ್ರಾಮದಲ್ಲಿ ಗುರುವಾರ ಜಲಜೀವನ್ ಯೋಜನೆಯಡಿ ಪಿಡಿಒ ಮತ್ತು ಕಾರ್ಯದರ್ಶಿಗಳಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನದಿಂದ ಗ್ರಾಮೀಣ ಪ್ರದೇಶಗಳ ಪ್ರತಿ ಮನೆಗೆ ನಲ್ಲಿ ಮೂಲಕ ಕುಟುಂಬದ ಒಬ್ಬ ಸದಸ್ಯನಿಗೆ 55 ಲೀಟರ್ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಿಯಾ ಯೋಜನೆ ತಯಾರಿಸಲು ಸೂಚಿಸಿದರು.
ತಾಲ್ಲೂಕಿನ ಬೈರಸಂದ್ರ, ಗಂಜಿಗುಂಟೆ, ಚಿಕ್ಕನೆಗವಾರ, ಮುಷ್ಟೂರು, ಚೊಕ್ಕದೊಡ್ಡಿ ಕೆರೆ ಕಟ್ಟೆಗಳನ್ನು ದುರಸ್ತಿ ಮಾಡಲಾಗಿದೆ. ನರೇಗಾ ಕಾಮಗಾರಿಗಳಲ್ಲಿ ಶೇ 120ರಷ್ಟು ಸಾಧನೆ ಮಾಡಲಾಗಿದೆ ಎಂದು ವಿವರಿಸಿದರು.
ಗ್ರಾಮಮಟ್ಟದಲ್ಲಿ ಕ್ರಿಯಾ ಯೋಜನೆ ತಯಾರಿಸಿ ನ.30ರೊಳಗೆ ಸಲ್ಲಿಸಲು ಪಿಡಿಒಗಳಿಗೆ ಸೂಚಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.