
ಕೋಲಾರ: ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು ₹ 738 ಕೋಟಿ ಠೇವಣಿ ಇದ್ದು, ಸಮುದಾಯದ ನಾಯಕರಾದ ಎಚ್.ಡಿ.ದೇವೇಗೌಡರ ಹೆಸರಲ್ಲಿ ವೈದ್ಯಕೀಯ ಕಾಲೇಜು ಮತ್ತು ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ತುಮಕೂರಿನ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಮಠದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಹೇಳಿದರು.
ನಗರ ಹೊರವಲಯದ ನಂದಿನಿ ಪ್ಯಾಲೇಸ್ನಲ್ಲಿ ರಾಜ್ಯ ಒಕ್ಕಲಿಗರ ಸಂಘದ (ಕೋಲಾರ-ಚಿಕ್ಕಬಳ್ಳಾಪುರ ಕ್ಷೇತ್ರ) ಆಶ್ರಯದಲ್ಲಿ ಬುಧವಾರ ನಡೆದ ಸಮುದಾಯದ ಬಾಲಕಿಯರ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಹಾಗೂ ನೂತನ ಸದಸ್ಯರಿಗೆ ಗುರುತಿನ ಚೀಟಿ ವಿತರಿಸುವ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.
ಸಮುದಾಯದ ಹಲವರು ಸಂಘಕ್ಕಾಗಿ ಜೀವ ಒತ್ತೆ ಇಟ್ಟು ದುಡಿಯುತ್ತಿದ್ದಾರೆ. ಆದರೆ, ಸಂಘದಲ್ಲಿ ಪ್ರಗತಿ ತೋರಬೇಕು. ಕೇವಲ ಪುರಸ್ಕಾರ, ಸನ್ಮಾನಕ್ಕೆ ಸೀಮಿತವಾಗಬಾರದು. ಒಕ್ಕಲಿಗರ ಸಂಘ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ನಿಲ್ಲಬೇಕು. ಬಡ ವೈದ್ಯಕೀಯ ವಿದ್ಯಾರ್ಥಿಗಳಿಗೆ ₹ 5 ಲಕ್ಷದಿಂದ ₹10 ಲಕ್ಷ ರಿಯಾಯಿತಿ ಕೊಡಬೇಕು. 100 ಎಕರೆ ಭೂಮಿ ಖರೀದಿಸಿ ಎಸ್.ಎಂ.ಕೃಷ್ಣ ಹೆಸರಲ್ಲಿ ಎಂಜಿನಿಯರಿಂಗ್ ಕಾಲೇಜು ಮಾಡಿ, ದೇವೇಗೌಡರ ಹೆಸರಲ್ಲಿ ವೈದ್ಯಕೀಯ ಕಾಲೇಜು ತೆರೆಯಿರಿ ಎಂಬುದಾಗಿ ಬಹಳ ಹಿಂದೆಯೇ ಹೇಳಿದ್ದೆ. ಬೆಂಗಳೂರಿಗೆ ಇವರ ಕೊಡುಗೆ ಬಹಳಷ್ಟಿದೆ. ಆದರೆ, ಇನ್ನೂ ಏಕೆ ಸಾಧ್ಯವಾಗುತ್ತಿಲ್ಲವೋ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಕೋಲಾರದಲ್ಲಿ ರಾಜ್ಯ ಒಕ್ಕಲಿಗರ ಸಂಘದಿಂದ ₹10 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ. ಸಂಘದಿಂದ ಕೈಗೊಳ್ಳುವ ಕಾಮಗಾರಿಗಳನ್ನು ಟೆಂಡರ್ ಕರೆದು ಸಮುದಾಯದ ಅರ್ಹರಿಗೆ ಕೊಡಿ. ಮಾದರಿ ಸಂಘವಾಗಿ ಕಟ್ಟಬೇಕು ಎಂದರು.
ಕೋಲಾರದಲ್ಲಿ ನಿರ್ಮಿಸುತ್ತಿರುವ ವಾಣಿಜ್ಯ ಸಂಕೀರ್ಣಕ್ಕೆ ರಾಜ್ಯ ಒಕ್ಕಲಿಗರ ಸಂಘದ ಸಭೆಯಲ್ಲಿ ಚರ್ಚಿಸಿ ₹ 50 ಲಕ್ಷ ಕೊಡಿಸುವುದಾಗಿ ಸ್ವಾಮೀಜಿ ತಿಳಿಸಿದರು.
ಸಮುದಾಯದ ರೈತರು, ಯುಪಿಎಸ್ಸಿ ಸಾಧಕರು, ಜಾನಪದ ಗಾಯಕ ಗೋ.ನಾ.ಸ್ವಾಮಿ ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಸಿ.ಬೈರೇಗೌಡ ನಗರದಲ್ಲಿ ನಡೆದ ಹಾಸ್ಟೆಲ್ ಕಟ್ಟಡ ನಿರ್ಮಾಣದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಶಾಸಕ ಕೆ.ವೈ.ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಮುಖಂಡರು ಭಾಗವಹಿಸಿದ್ದರು.
ಕೆಂಗೇರಿಯ ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ, ಪ್ರಧಾನ ಕಾರ್ಯದರ್ಶಿ ಟಿ.ಕೋನಪ್ಪ ರೆಡ್ಡಿ, ಗೌರವಾಧ್ಯಕ್ಷ ಯಲುವಳ್ಳಿ ಎನ್.ರಮೇಶ್, ನಿರ್ದೇಶಕರಾದ ಡಾ.ಡಿ.ಕೆ.ರಮೇಶ್, ಎಸ್.ಕೆ.ಧರ್ಮೇಶ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕೆ.ವಿ.ಶಂಕರಪ್ಪ, ಮುಖಂಡರಾದ ಸಿಎಂಆರ್ ಶ್ರೀನಾಥ್, ಸೀತಿಹೊಸೂರು ಮುರಳಿಗೌಡ, ವಿ.ಕೃಷ್ಣಾರೆಡ್ಡಿ, ಡೆಕ್ಕನ್ ರಾಮಕೃಷ್ಣ, ಬಿಸಪ್ಪಗೌಡ, ಅ.ಮು.ಲಕ್ಷ್ಮಿನಾರಾಯಣ, ಲಕ್ಷ್ಮಣ್ ಗೌಡ, ಪ್ರಭಾಕರ್, ಪವನ್ ನಾರಾಯಣಸ್ವಾಮಿ, ಮಾಗೇರಿ ನಾರಾಯಣಸ್ವಾಮಿ, ನಗರಸಭೆ ಸದಸ್ಯರಾದ ಮುರಳಿಗೌಡ, ಪ್ರವೀಣಗೌಡ, ದಳಸನೂರು ಗೋಪಾಲಕೃಷ್ಣ, ಮುಖಂಡರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಗುಂಪುಗಾರಿಕೆಗೆ ಕಡಿವಾಣ ಹಾಕಿ
ರಾಜ್ಯ ಒಕ್ಕಲಿಗರ ಸಂಘದಲ್ಲಿ ಮತ್ತೆ ಕಿತ್ತಾಟ ಗುಂಪುಗಾರಿಕೆ ಮೇಲಾಟ ನಡೆಯಬಾರದು. ಸರ್ಕಾರವು ಆಡಳಿತಾಧಿಕಾರಿ ನೇಮಿಸುವುದನ್ನು ಸಮುದಾಯವು ಅವಮಾನ ಎಂದು ಭಾವಿಸುತ್ತದೆ. ಹಿಂದೆ ಕಾರ್ಯಕಾರಿ ಸಮಿತಿ ಸಭೆ ನಡೆಯುವಾಗ ಹೊರಗಡೆ ಪೊಲೀಸರನ್ನು ಇಟ್ಟುಕೊಂಡು ನಡೆಸಬೇಕಾದ ಪರಿಸ್ಥಿತಿ ಇತ್ತು. ಅಂಥ ವಾತಾವರಣ ನಿರ್ಮಿಸಬೇಡಿ ಗುಂಪುಗಾರಿಕೆಗೆ ಕಡಿವಾಣ ಹಾಕಿ ಎಂದು ನಂಜಾವಧೂತ ಸ್ವಾಮೀಜಿ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.