ADVERTISEMENT

ಕೋಲಾರ| ನಸೀರ್ ಇಡೀ ದೇಶದ ಜನರ ಕ್ಷಮೆಯಾಚಿಬೇಕು: ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 5:55 IST
Last Updated 9 ಫೆಬ್ರುವರಿ 2026, 5:55 IST
ಕೋಲಾರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ಮಾತನಾಡಿದರು
ಕೋಲಾರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ಮಾತನಾಡಿದರು    

ಕೋಲಾರ: ’ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇಶದ್ರೋಹಿ ಎಂದು ಹೇಳಿರುವ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಕೂಡಲೇ ರಾಜ್ಯ ಹಾಗೂ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಎನ್.ಎಸ್.ಪ್ರವೀಣ್ ಗೌಡ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಿಂದನಾತ್ಮಕ ಪದ ಬಳಕೆಗೆ ನಸೀರ್ ವಿಷಾದ ವ್ಯಕ್ತಪಡಿಸಿರುವುದಾಗಿ ಹೇಳಿದ್ದಾರೆಯೇ ಹೊರತು ಕ್ಷಮೆ ಕೇಳಿಲ್ಲ. ಹೀಗಾಗಿ, ರಾಜ್ಯ ಹಾಗೂ ದೇಶದ ಜನರ ಬಳಿ ಕ್ಷಮೆಯಾಚಿಸಬೇಕು’ ಎಂದರು.

ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಅವರೇ ಸ್ಪಷ್ಟನೆ ನೀಡಿದ್ದರೂ ಕಾಂಗ್ರೆಸ್ ಮುಖಂಡರು ಅದನ್ನು ವಿರೋಧಿಸಿ ನೈತಿಕತೆ ಪ್ರಶ್ನೆ ಮಾಡುತ್ತಿದ್ದಾರೆ. ಅರಸೀಕರೆ ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಯಾವ ರೀತಿ ನಡೆದುಕೊಂಡಿದ್ದಾರೆ ಎನ್ನುವುದು ಗೊತ್ತಿದ್ದು, ಬಿಜೆಪಿಯವರ ನೈತಿಕತೆ ಪ್ರಶ್ನಿಸಲು ಕಾಂಗ್ರೆಸ್ ನವರಿಗೆ ಅರ್ಹತೆಯಿಲ್ಲ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್‌ನ ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್ ಸಮ್ಮುಖದಲ್ಲಿ ವಿಧಾನಸೌಧದ ಕಾರಿಡಾರ್‌ನಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದವರಿಂದ ನೈತಿಕತೆ ಕಲಿಯಬೇಕೇ’ ಎಂದು ಪ್ರಶ್ನಿಸಿದರು.

ನಸೀರ್ ಅಹಮದ್ ಉದ್ದೇಶಪೂರ್ವಕವಾಗಿ ಆ ರೀತಿ ಮಾತನಾಡಿದ್ದಾರೆ. ಅವರ ನಾಯಕರನ್ನು ಮೆಚ್ಚಿಸಲು ಹಾಗೂ ಪುನಃ ತಮ್ಮನ್ನು ಪರಿಷತ್ತಿಗೆ ಆಯ್ಕೆ ಮಾಡಲಿ ಎನ್ನುವ ಸಲುವಾಗಿ ಮೋದಿ ವಿರುದ್ಧ ಪದ ಬಳಸಿದ್ದಾರೆ ಎಂದು ಆರೋಪಿಸಿದರು.

ಮಾಜಿ ಸಂಸದ ಎಸ್.ಮುನಿಸ್ವಾಮಿ ಅವರ ಹೆಸರು ಪ್ರಸ್ತಾಪಿಸಿದರೆ ಮತಗಳು ಬರುತ್ತವೆ ಎಂದು ಕಾಂಗ್ರೆಸ್‍ನ ಕೆಲ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಮುನಿಸ್ವಾಮಿ ಕೋಲಾರದ ಕ್ಲಾಕ್ ಟವರ್‌ನಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಿಸಿದ್ದಾರೆಯೇ ಹೊರತು ಯಾವುದೇ ರೀತಿಯಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಲಿಲ್ಲ. ಆದರೂ ಅವರ ಮೇಲೆ ವಿನಾಕಾರಣ ಹೇಳಿಕೆಗಳನ್ನು ನೀಡುವುದು ಕಾಂಗ್ರೆಸ್‍ನವರಿಗೆ ಚಾಳಿಯಾಗಿದೆ ಎಂದು ಕಿಡಿಕಾರಿದರು.

ಫೆ.17 ರಂದು ಬೆಂಗಳೂರಿನ ಫ್ರೀಡಂ ಪಾರ್ಕಿಗೆ ಬಂದು ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಆರ್‍ಎಸ್‍ಎಸ್‍ನ 10 ಮಂದಿ ಹೆಸರು ಹೇಳಲು ಕಾಂಗ್ರೆಸ್‍ನವರು ಆಹ್ವಾನಿಸಿರುವುದಕ್ಕೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಹಿರಿಯರ ಗಮನಕ್ಕೆ ತರಲಾಗುವುದು ಎಂದರು.

ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಾತನಾಡಿ, ‘ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ ಇದ್ದಿದ್ದು, ಅದನ್ನು ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಇತ್ತೀಚೆಗೆ ಸದನದಲ್ಲಿ ಶಾಸಕ ಶಿವಲಿಂಗೇಗೌಡ ವರ್ತನೆ ಸರಿ ಇಲ್ಲ. ಅಲ್ಲದೆ, ಶಾಸಕರ ಪತ್ನಿಯ ಬಗ್ಗೆ ಮಾತನಾಡಿರುವುದು ಆಕ್ಷೇಪಾರ್ಹ. ಕಾಂಗ್ರೆಸ್‍ನವರು ಬಿಜೆಪಿಯವರನ್ನು ಮುಸ್ಲಿಂ ವಿರೋಧಿ ಎಂದು ಮತ ಬ್ಯಾಂಕ್ ಮಾಡಿಕೊಳ್ಳುವುದು ಯಾವ ನ್ಯಾಯ’ ಎಂದು ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಸ್.ಬಿ.ಮುನಿವೆಂಕಟಪ್ಪ, ಕೆಂಬೋಡಿ ನಾರಾಯಣಸ್ವಾಮಿ, ಹಾರೋಹಳ್ಳಿ ವೆಂಕಟೇಶ್, ಬಾಲಾಜಿ, ಅಮಿನ್‌, ಹನುಮಂತಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.