ADVERTISEMENT

ಸೆ.13ಕ್ಕೆ ರಾಷ್ಟ್ರೀಯ ಲೋಕ ಅದಾಲತ್

90 ದಿನಗಳ ವಿಶೇಷ ಮಧ್ಯಸ್ಥಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ: ನ್ಯಾಯಾಧೀಶ ನಟೇಶ್

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 7:44 IST
Last Updated 24 ಆಗಸ್ಟ್ 2025, 7:44 IST
ಕೋಲಾರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್.ಆರ್ ಮಾತನಾಡಿದರು. ಎಲ್‌.ಶ್ರೀನಿವಾಸ್‌, ಕೆ.ವಿ.ಆದರ್ಶ, ಸತೀಶ್‌, ಸುಜಾತಾ ಪಾಲ್ಗೊಂಡಿದ್ದರು
ಕೋಲಾರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್.ಆರ್ ಮಾತನಾಡಿದರು. ಎಲ್‌.ಶ್ರೀನಿವಾಸ್‌, ಕೆ.ವಿ.ಆದರ್ಶ, ಸತೀಶ್‌, ಸುಜಾತಾ ಪಾಲ್ಗೊಂಡಿದ್ದರು    

ಕೋಲಾರ: ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ತಕ್ಷಣ ಇತ್ಯರ್ಥಪಡಿಸುವ ಸಲುವಾಗಿ ಇಡೀ ಜಿಲ್ಲೆಗೆ ಸಂಬಂಧಿಸಿದಂತೆ ಸೆ.13 ರಂದು ರಾಷ್ಟ್ರೀಯ ಲೋಕ ಅದಾಲತ್‌ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನಟೇಶ್ ಆರ್. ತಿಳಿಸಿದರು.

ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ‘ದೇಶಕ್ಕಾಗಿ 90 ದಿನಗಳ ಮಧ್ಯಸ್ಥಿಕೆ’ ವಿಶೇಷ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇದರ ಜೊತೆಗೆ ಲೋಕ ಅದಾಲತ್‌ ಕೂಡ ನಡೆಯಲಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬೇಕು' ಎಂದರು.

ಪ್ರತೀ ವರ್ಷ ನಾಲ್ಕು ಬಾರಿ ರಾಷ್ಟ್ರೀಯ ಲೋಕ ಅದಾಲತ್‍ ಹಮ್ಮಿಕೊಳ್ಳಲಾಗುತ್ತಿದೆ. ಈಗ ನಡೆಯುತ್ತಿರುವ ಮೂರನೆಯದ್ದು. ಮೊದಲನೇ ಲೋಕ ಅದಾಲತ್ ಮಾರ್ಚ್ 8 ರಂದು, ಎರಡನೇ ಲೋಕ ಅದಾಲತ್ ಜುಲೈ 12 ರಂದು ನಡೆದಿವೆ ಎಂದು ಹೇಳಿದರು.

ADVERTISEMENT

ಜಿಲ್ಲೆಯ ಎಲ್ಲಾ ಆರು ತಾಲ್ಲೂಕುಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಆಯಾಯ ನ್ಯಾಯಾಲಯಗಳಲ್ಲಿ ರಾಜಿ ಸಂಧಾನದ ಮೂಲಕ ವಿಲೇವಾರಿ ಮಾಡಲಾಗುವುದು. ಮೋಟಾರು ವಾಹನ ಅಪಘಾತ, ಜೀವನಾಂಶ, ಆಸ್ತಿ ವಿಭಾಗದ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳನ್ನು ಈ ಅದಾಲತ್‍ನಲ್ಲಿ ವಿಲೇವಾರಿ ಮಾಡಬಹುದು ಎಂದು ತಿಳಿಸಿದರು.

ಲೋಕ ಅದಾಲತ್‍ನಲ್ಲಿ ತೀರ್ಮಾನ ಮಾಡುವುದಾದರೆ ಪ್ರಕರಣಗಳು ಅತೀ ಶೀಘ್ರ ಇತ್ಯರ್ಥವಾಗುತ್ತವೆ. ನ್ಯಾಯಾಲಯದ ಶುಲ್ಕ ಇರುವುದಿಲ್ಲ. ಕೆಲವರಿಗೆ ವಕೀಲರನ್ನು ನೇಮಕ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಆದರೆ ಲೋಕ ಅದಾಲತ್‍ನಲ್ಲಿ ನುರಿತ ವಕೀಲರು ಸಂಧಾನಕಾರರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಜೊತೆಗೆ ಸಮಯವೂ ಉಳಿತಾಯವಾಗಲಿದ್ದು, ಕಕ್ಷಿದಾರರು ಅವರ ತೀರ್ಪನ್ನು ಅವರೇ ಪಡೆದುಕೊಳ್ಳಬಹುದು. ಇಲ್ಲಿ ಇತ್ಯರ್ಥವಾದ ಪ್ರಕರಣಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ. ಉಭಯಕಡೆಯ ಕಕ್ಷಿದಾರರ ನಡುವೆ ಬಾಂಧವ್ಯವೂ ಉಳಿಯುತ್ತದೆ. ಈ ನಿಟ್ಟಿನಲ್ಲಿ ಕಕ್ಷಿದಾರರು ಈ ಅದಾಲತ್‍ನ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ವಿಶೇಷ ಅಭಿಯಾನ: ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕಾನೂನು ಸೇವಾ ಪ್ರಾಧಿಕಾರದಿಂದ ಹಮ್ಮಿಕೊಂಡಿರುವ ‘ದೇಶಕ್ಕಾಗಿ 90 ದಿನಗಳ ಮಧ್ಯಸ್ಥಿಕೆ’ ವಿಶೇಷ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಮಧ್ಯಸ್ಥಿಕೆಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ವಕೀಲರೇ ಮಧ್ಯಸ್ಥಿಕೆ ವಹಿಸಿದ್ದು ಅಪಘಾತ ಪ್ರಕರಣ, ಕೌಟುಂಬಿಕ ದೌರ್ಜನ್ಯ, ಚೆಕ್‍ ಬೌನ್ಸ್ ಪ್ರಕರಣ, ವಾಣಿಜ್ಯ ಕಲಹ ಪ್ರಕರಣ, ಸೇವಾ ವಿಷಯದ ಪ್ರಕರಣ, ರಾಜಿ ಮಾಡಿಕೊಳ್ಳಬಹುದಾದ ಕ್ರಿಮಿನಲ್ ಪ್ರಕರಣ, ಗ್ರಾಹಕರ ವ್ಯಾಜ್ಯ, ಸಾಲ ಮರುಪಾವತಿ ವ್ಯಾಜ್ಯ, ವಿಭಾಗದ ದಾವೆ, ಎವಿಕ್ಷನ್ ದಾವೆ, ಭೂಸ್ವಾಧೀನ ದಾವೆ, ಇತರ ಸಿವಿಲ್ ವ್ಯಾಜ್ಯಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ಜುಲೈ 7ರಂದು ಈ ಅಭಿಯಾನ ಆರಂಭವಾಗಿದ್ದು, ಅ.7 ರವರೆಗೆ ನಡೆಯಲಿದೆ. ಪ್ರಕರಣಗಳ ಸ್ವರೂಪವನ್ನು ಗುರುತಿಸಿ ಅವುಗಳನ್ನು ಮಧ್ಯಸ್ಥಿಕೆದಾರರಿಗೆ ಕಳುಹಿಸಲಾಗುತ್ತದೆ. ಮಧ್ಯಸ್ಥಿಕೆದಾರರಿಂದ ಪಕ್ಷಗಾರರಿಗೆ ನೋಟಿಸು ಜಾರಿಯಾಗುತ್ತದೆ’ ಎಂದರು.

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಜಿ.ಎ.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಲೋಕ್ ಅದಾಲತ್‍ ನಡೆಯಲಿದೆ ಎಂದು ತಿಳಿಸಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್‌.ಶ್ರೀನಿವಾಸ್‌ ಮಾತನಾಡಿ, ಲೋಕ ಅದಾಲತ್ ಮೂಲಕ ರಾಜಿ ಸಂಧಾನ, ಮಧ್ಯಸ್ಥಿಕೆ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಕಕ್ಷಿದಾರರು ಹಣ, ಸಮಯ ಉಳಿತಾಯ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಕೆ.ವಿ.ಆದರ್ಶ, ವಕೀಲರಾದ ಸತೀಶ್‌, ಸುಜಾತಾ ಇದ್ದರು.

ವಿಶೇಷ ಮಧ್ಯಸ್ಥಿಕೆ ಅಭಿಯಾನ ಮೂಲಕ ರಾಜಿಯಾಗಬಲ್ಲ ಪ್ರಕರಣ ಇತ್ಯರ್ಥ ಮಾಡಲಾಗುತ್ತಿದ್ದು ವಕೀಲರೇ ಮಧ್ಯಸ್ಥಿಕೆ ವಹಿಸುತ್ತಾರೆ. 15 ವರ್ಷಕ್ಕೂ ಅಧಿಕ ಕಾಲ ವಕೀಲರಾಗಿದ್ದವರು ಇರುತ್ತಾರೆ
ನಟೇಶ್ ಆರ್. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

ಮಧ್ಯಸ್ಥಿಕೆಯಲ್ಲಿ 130 ಪ್ರಕರಣ ರಾಜಿ

ವಿಶೇಷ ಮಧ್ಯಸ್ಥಿಕೆ ಅಭಿಯಾನದಡಿ 1462 ಪ್ರಕರಣಗಳು ಮಧ್ಯಸ್ಥಿಕೆ ಕೇಂದ್ರಕ್ಕೆ ಬಂದಿವೆ. 432 ಪ್ರಕರಣಗಳಲ್ಲಿ ಮಧ್ಯಸ್ಥಿಕೆ ನಡೆದು ರಾಜಿಯಾಗಿಲ್ಲ 130 ಪ್ರಕರಣಗಳು ರಾಜಿಯಾಗಿವೆ. 800 ಪ್ರಕರಣಗಳಲ್ಲಿ ಮಧ್ಯಸ್ಥಿಕೆ ನಡೆಯಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಟೇಶ್ ಆರ್. ತಿಳಿಸಿದರು.

ಮಧ್ಯಸ್ಥಿಕೆ–ಅದಾಲತ್‌ ವ್ಯತ್ಯಾಸ

ಮಧ್ಯಸ್ಥಿಕೆದಾರರು ಮಧ್ಯಸ್ಥಿಕೆ ಕೇಂದ್ರದಲ್ಲಿ ಯಾವುದೇ ಸಲಹೆ ಸೂಚನೆ ನೀಡುವಂತಿಲ್ಲ. ಪಕ್ಷಗಾರರೇ ತಮ್ಮ ರಾಜೀ ಸೂತ್ರ ಕಂಡುಕೊಳ್ಳಬೇಕು. ಲೋಕ ಅದಾಲತ್‌ನಲ್ಲಿ ಇಬ್ಬರು ಪಕ್ಷಗಾರರು ಕುಳಿತು ಮಾತನಾಡುವಾಗ ರಾಜೀ ಮಾಡಲು ಮಧ್ಯಸ್ಥಿಕೆದಾರರು ಸಲಹೆ ಸೂಚನೆ ನೀಡಬಹುದು ಎಂದು ನಟೇಶ್‌ ಆರ್‌. ಹೇಳಿದರು. ಎರಡೂ ಕಡೆ ಪಕ್ಷಗಾರರಿಗೆ ಯಾವುದೇ ರೀತಿಯ ಬಲವಂತವಾಗಿ ರಾಜೀ ಮಾಡುವಂತಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.