ಕೋಲಾರ: ‘ನಗರಸಭೆಯ ವಾರ್ಡ್ಗಳಲ್ಲಿ ಜನರು ವಿಶ್ವಾಸವಿಟ್ಟು ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ನೂತನ ಸದಸ್ಯರು ಬಡಾವಣೆ ಸಮಸ್ಯೆ ಪರಿಹರಿಸುವ ಜತೆಗೆ ಜನರ ಕೈಗೆ ಸಿಗುವಂತಾಗಲಿ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕಿವಿಮಾತು ಹೇಳಿದರು.
ನಗರಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಗೆದ್ದಿರುವ ಸದಸ್ಯರು ಮುನ್ಸಿಪಲ್ ಕಾಯ್ದೆ ಪ್ರಕಾರ ಜವಾಬ್ದಾರಿ ಅರಿತು ತ್ವರಿತವಾಗಿ ಜನರ ಸಮಸ್ಯೆ ಪರಿಹರಿಸಬೇಕು’ ಎಂದು ಸಲಹೆ ನೀಡಿದರು.
‘ಕೋಲಾರ ನಗರಸಭೆ ವ್ಯಾಪ್ತಿಯಲ್ಲಿ ಮುಖ್ಯವಾಗಿ ರಸ್ತೆ, ಕುಡಿಯುವ ನೀರು ಮತ್ತು ಕಸದ ಸಮಸ್ಯೆ ತೀವ್ರವಾಗಿದೆ. ತಾತ್ಕಾಲಿಕವಾಗಿ ನಗರಸಭೆ ಮತ್ತು ಲೋಕೋಪಯೋಗಿ ಇಲಾಖೆಯಿಂದ ನಗರದ ಪ್ರಮುಖ 4 ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿಸಲಾಗಿದೆ. ಉಳಿದ ರಸ್ತೆಗಳನ್ನು ಸದ್ಯದಲ್ಲೇ ದುರಸ್ತಿ ಮಾಡುತ್ತೇವೆ’ ಎಂದು ಭರವಸೆ ನೀಡಿದರು.
‘ಪೈಪ್ಲೈನ್ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಿ ಯರಗೋಳ್ ಯೋಜನೆ ಮೂಲಕ ಜಿಲ್ಲಾ ಕೇಂದ್ರಕ್ಕೆ ನೀರಿನ ಸೌಕರ್ಯ ಕಲ್ಪಿಸುತ್ತೇವೆ. ನಗರದಲ್ಲಿ ಪ್ರತಿನಿತ್ಯ ಸುಮಾರು 70 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ತ್ಯಾಜ್ಯ ವಿಲೇವಾರಿಗೆ ಮುಳಬಾಗಿಲು ತಾಲ್ಲೂಕಿನ ಪೊಂಬರಹಳ್ಳಿ ಬಳಿ ಜಾಗ ಗುರುತಿಸಲಾಗಿದೆ. 35 ವಾರ್ಡ್ಗಳಲ್ಲಿ ಜನರ ಮನೆ ಬಾಗಿಲಲ್ಲೇ ಆಟೊಗಳ ಮೂಲಕ ಕಸ ಸಂಗ್ರಹಿಸಲಾಗುತ್ತಿದೆ’ ಎಂದು ವಿವರಿಸಿದರು.
‘ನಗರಸಭೆಯ ವ್ಯಾಪ್ತಿಯ ತೆರಿಗೆದಾರರ ಪಟ್ಟಿ ಮಾಡಿ ಬಾಕಿ ತೆರಿಗೆ ಪಾವತಿಸುವಂತೆ ನೋಟಿಸ್ ನೀಡಲಾಗಿತ್ತು. ಬಾಕಿ ತೆರಿಗೆ ವಸೂಲಿ ಮಾಡಬೇಕು. ನಗರಸಭೆಗೆ ಬರುವ ಅನುದಾನ ಬಳಸಿಕೊಂಡು ನಗರ ಅಭಿವೃದ್ಧಿಪಡಿಸಲು ಸದಸ್ಯರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.