ಕೆಜಿಎಫ್: ರಾಬರ್ಟ್ಸನ್ಪೇಟೆಯ ನಗರಸಭೆ ಬಸ್ ನಿಲ್ದಾಣದಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ಗಳನ್ನು ಹೊರತುಪಡಿಸಿ ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ ಎಂಬ ಸೂಚನೆಯನ್ನು ನಗರಸಭೆ ಶುಕ್ರವಾರ ಹೊರಡಿಸಿದೆ.
ನಗರದ ಕುವೆಂಪು ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ತಮ್ಮ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ನಿಲುಗಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಅಲ್ಲದೆ, ಸರ್ಕಾರಿ ಮತ್ತು ಖಾಸಗಿ ಬಸ್ಗಳು ಬಸ್ ನಿಲ್ದಾಣ ಪ್ರವೇಶಿಸಲು ದುಸ್ತರವಾಗಿದೆ. ಹೀಗಾಗಿ, ಅನಧಿಕೃತ ವಾಹನಗಳ ದಟ್ಟಣೆ ತಡೆದು, ಸ್ವಚ್ಛತೆ ನಿರ್ವಹಣೆಗಾಗಿ ಗುರುವಾರದಿಂದ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು ನಿಲ್ದಾಣದಲ್ಲಿ ನಿಲ್ಲಿಸಬಾರದು ಎಂದು ಸೂಚಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ, ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಗರಸಭೆ ಆಯುಕ್ತ ಪವನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಗರಸಭೆ ಅಧ್ಯಕ್ಷೆ ಇಂದಿರಾಗಾಂಧಿ, ಸ್ಥಾಯಿ ಸಮಿತಿ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ ಮತ್ತು ಪೌರಾಯುಕ್ತ ಪವನ್ಕುಮಾರ್ ಶುಕ್ರವಾರ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಸಭೆಯ ಆದೇಶ ಪಾಲಿಸುವಂತೆ ಮತ್ತು ಪ್ರಸ್ತುತ ಉಂಟಾಗಿರುವ ವಾಹನ ದಟ್ಟಣೆ ನಿವಾರಣೆಗೆ ಸಹಕರಿಸಬೇಕು ಎಂದು ವರ್ತಕರಲ್ಲಿ ಮನವಿ ಮಾಡಿದರು.
ಬಸ್ ನಿಲ್ದಾಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಾಹನ ದಟ್ಟಣೆ ಮತ್ತು ಅಸ್ತವ್ಯಸ್ತ ಸಂಚಾರದ ಬಗ್ಗೆ ಪ್ರಜಾವಾಣಿಯ ಸೋಮವಾರ ಸಂಚಿಕೆಯಲ್ಲಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.