ಕೋಲಾರ: ‘ಸರ್ಕಾರ ಜನರ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನ ಆಗಬೇಕು. ಜತೆಗೆ ಯೋಜನೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಾಲ್ಲೂಕಿನ ಹರಟಿ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಸಿ.ಆರ್.ಅಶೋಕ್ ಹೇಳಿದರು.
ಹರಟಿ ಗ್ರಾಮ ಪಂಚಾಯಿತಿಯಲ್ಲಿ ಶನಿವಾರ ನಡೆದ ವಾರ್ಷಿಕ ಕ್ರಿಯಾ ಯೋಜನೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಅಗತ್ಯವಿರುವ ಕೃಷಿ, ತೋಟಗಾರಿಕೆ, ಜಾನುವಾರಗಳ ಶೆಡ್ ಸೇರಿದಂತೆ ಇತರೆ ಸೌಲಭ್ಯ ತಲುಪಿಸಿ. ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಿ’ ಎಂದು ಸೂಚಿಸಿದರು.
‘ಪ್ರತಿ ಕಾಮಗಾರಿಯ ಅಂದಾಜು ವೆಚ್ಚ ಸೇರಿದಂತೆ ಬೇಡಿಕೆ ಪಟ್ಟಿ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ. ಜನರು ಸರ್ಕಾರಿ ಕಾರ್ಯದ ನೆರವಿಗೆ ಧಾವಿಸುವ ಮೂಲಕ ಸ್ವಯಂಸೇವಕರಾಗಿ ದೇಶ ಕಟ್ಟುವ ಕೆಲಸದಲ್ಲಿ ಭಾಗಿಯಾಗಬೇಕು. ರೈತರು ಮತ್ತು ಕೃಷಿ ಕಾರ್ಮಿಕರು ಅಗತ್ಯಕ್ಕೆ ಅನುಗುಣವಾಗಿ ನರೇಗಾ ಯೋಜನೆಯಡಿ ಹೆಸರು ನೋಂದಾಯಿಸಿ ಸ್ವಉದ್ಯೋಗಿಗಳಾಗಬೇಕು’ ಎಂದು ಸಲಹೆ ನೀಡಿದರು.
‘ಶಾಲೆಗಳಿಗೆ ಲಭ್ಯ ಅನುದಾನದಲ್ಲಿ ಮೂಲಸೌಕರ್ಯ ಕಲ್ಪಿಸಬೇಕು. ಜತೆಗೆ ಕುಡಿಯುವ ನೀರು ಮತ್ತು ಕಾಂಪೌಂಡ್ ವ್ಯವಸ್ಥೆ ಮಾಡಬೇಕು’ ಎಂದು ಜಿಲ್ಲಾ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಕೋರಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ನಾಗರಾಜ್, ಗ್ರಾ.ಪಂ ಕಾರ್ಯದರ್ಶಿ ರತ್ನಮ್ಮ, ಸರ್ಕಾರಿ ಪ್ರೌಢ ಶಾಲೆ ಮುಖ್ಯ ಶಿಕ್ಷಕ ರಾಮಚಂದ್ರಪ್ಪ ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.