ಕೋಲಾರ: ‘ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆ ನಂತರ ರಾಜಕೀಯ ಬದಲಾವಣೆ ಆರಂಭವಾಗಿದ್ದು, ರಾಜ್ಯದಲ್ಲಿ ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಎಷ್ಟೇ ಪ್ರಯತ್ನಪಟ್ಟರೂ ವಿಫಲವಾಗುತ್ತದೆ’ ಎಂದು ಬಿಜೆಪಿ ನೂತನ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ವೈಫಲ್ಯದಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಿದೆ’ ಎಂದರು.
‘ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ ಜಿಲ್ಲೆಯ ವಿಪಕ್ಷಗಳಲ್ಲಿನ ಕೆಲ ಶಾಸಕರು ಸಹ ಸರ್ಕಾರ ರಚನೆಗೆ ಬೆಂಬಲ ನೀಡಲು ಮುಂದಾಗಿದ್ದಾರೆ. ಅವರ ಹೆಸರನ್ನು ಈಗಲೇ ಬಹಿರಂಗಪಡಿಸುವುದಿಲ್ಲ. ಮುಂದೆ ಅಗುವ ಬದಲಾವಣೆ ನೋಡಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರೇ ಅಚ್ಚರಿಪಡುತ್ತಾರೆ’ ಎಂದು ಹೇಳಿದರು.
‘ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲು ಜಿಲ್ಲೆಯ ಹಲವು ಶಾಸಕರು ಬೆಂಬಲ ನೀಡುತ್ತಾರೆ. ಸದ್ಯ ಸಂಪರ್ಕದಲ್ಲಿರುವ ಶಾಸಕರು ಸೇರಿದಂತೆ 6 ಮಂದಿ ಬಿಜೆಪಿ ಬೆಂಬಲಿಸುತ್ತಾರೆ. ಮಾಜಿ ಸಂಸದ ಮುನಿಯಪ್ಪ ವಿರೋಧಿ ಬಣದಲ್ಲಿನ ಸಾಕಷ್ಟು ಮಂದಿ ಬಿಜೆಪಿಗೆ ಬರುತ್ತಾರೆ’ ಎಂದು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.