ADVERTISEMENT

ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಪ್ರತಿಭಟನೆ

ಕಾಯ್ದೆ ಹಿಂಪಡೆಯಲು ಅಂಬೇಡ್ಕರ್‌ ಸೇವಾ ಸಮಿತಿ ಸದಸ್ಯರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 12:47 IST
Last Updated 23 ಫೆಬ್ರುವರಿ 2021, 12:47 IST
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಂಬೇಡ್ಕರ್‌ ಸೇವಾ ಸಮಿತಿ ಸದಸ್ಯರು ಕೋಲಾರದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.
ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಂಬೇಡ್ಕರ್‌ ಸೇವಾ ಸಮಿತಿ ಸದಸ್ಯರು ಕೋಲಾರದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.   

ಕೋಲಾರ: ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಂಬೇಡ್ಕರ್‌ ಸೇವಾ ಸಮಿತಿ ಸದಸ್ಯರು ಇಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.

ನಚಿಕೇತನ ವಿದ್ಯಾರ್ಥಿನಿಲಯದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಕಾಯ್ದೆಯ ಪ್ರತಿ ಸುಟ್ಟು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ತರಾತುರಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿರುವುದು ಪ್ರಜಾಪ್ರಭುತ್ವ ವಿರೋಧಿ ನಡೆ. ಹೈನುಗಾರಿಕೆಯನ್ನೇ ಜೀವಾಳವಾಗಿಸಿಕೊಂಡಿರುವ ರೈತ ಕುಟುಂಬಗಳ ಆರ್ಥಿಕತೆಗೆ ಸರ್ಕಾರದ ಕ್ರಮದಿಂದ ದೊಡ್ಡ ಹೊಡೆತ ಬಿದ್ದಿದೆ. ಸರ್ಕಾರ ಜನರ ಆಹಾರದ ಹಕ್ಕನ್ನೇ ಕಸಿದುಕೊಂಡಿದೆ’ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಕೆ.ಎಂ.ಸಂದೇಶ್‌ ಕಿಡಿಕಾರಿದರು.

ADVERTISEMENT

‘ಬಿಜೆಪಿ ಸರ್ಕಾರ ರೈತ ವಿರೋಧಿ ನಡೆ ಅನುಸರಿಸುತ್ತಿದೆ. ಉತ್ತರಪ್ರದೇಶ, ಮಧ್ಯಪ್ರದೇಶ, ಗುಜರಾತ್‌ನಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಿದ್ದರಿಂದ ಅಲ್ಲಿನ ರೈತರು ಅನುಪಯುಕ್ತ ಹಸು, ಎಮ್ಮೆಗಳನ್ನು ಬೀದಿಯಲ್ಲಿ ಬಿಟ್ಟಿದ್ದಾರೆ. ಸಾಕಷ್ಟು ರೈತರು ಹೈನುಗಾರಿಕೆಯಿಂದ ವಿಮುಖರಾಗಿದ್ದಾರೆ’ ಎಂದು ಹೇಳಿದರು.

‘ಗೋಮಾಂಸ ನಿಷೇಧಿಸಿರುವ ಸರ್ಕಾರಗಳು ಗೋಮಾಂಸ ರಫ್ತು ಮಾಡಲು ಕಾರ್ಪೊರೇಟ್‌ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಿವೆ. ಗೋಮಾಂಸ ನಿಷೇಧದಿಂದ ಕೋಳಿ ಮಾಂಸದ ಬೆಲೆ ಏರಿಕೆಯಾಗುತ್ತದೆ. ಸರ್ಕಾರದ ಈ ಅವೈಜ್ಞಾನಿಕ ನೀತಿಗಳಿಂದ ಶ್ರೀಮಂತ ವ್ಯಾಪಾರಿಗಳಿಗೆ ಅನುಕೂಲ ಆಗುತ್ತದೆ’ ಎಂದು ಅಭಿಪ್ರಾಯಪಟ್ಟರು.

ಆರ್‌ಎಸ್ಎಸ್ ಅಜೆಂಡಾ: ‘ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ಆರ್‌ಎಸ್ಎಸ್ ಅಜೆಂಡಾದಂತೆ ಸರ್ಕಾರ ನಡೆಸುತ್ತಿದೆ. ದೇಶದಲ್ಲಿ ಮನುವಾದಿಗಳು ಹೆಚ್ಚುತ್ತಿದ್ದಾರೆ. ಸಂವಿಧಾನ ತೆಗೆದು ಮನುವಾದ ಜಾರಿಗೊಳಿಸುವ ಹುನ್ನಾರ ಸದ್ದಿಲ್ಲದೆ ನಡೆಯುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ರೈತರು ಹೈನುಗಾರಿಕೆಯನ್ನು ಉಪ ಕಸುಬಾಗಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಅನುಪಯುಕ್ತ ಜಾನುವಾರು, ಬಂಜೆತನದ ರಾಸುಗಳು ಮತ್ತು ಗಂಡು ಕರುಗಳ ಮಾರಾಟದಿಂದ ರೈತರಿಗೆ ಆರ್ಥಿಕವಾಗಿ ಸಹಾಯವಾಗುತ್ತಿತ್ತು. ಗೋಹತ್ಯೆ ನಿರ್ಬಂಧದಿಂದ ರೈತರಿಗೆ ಆರ್ಥಿಕ ಹೊರೆ ಬೀಳಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಖಂಡನೀಯ: ‘ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಗೋಮಾಂಸದ ಕೊರತೆ ಉಂಟಾಗಿ ಗೋವುಗಳು ಮತ್ತು ಗೋಮಾಂಸ ಪೂರೈಸುವಂತೆ ಅಲ್ಲಿನ ಸರ್ಕಾರ ಇತರೆ ರಾಜ್ಯಗಳಿಗೆ ಮನವಿ ಮಾಡಿದೆ. ಕರ್ನಾಟಕದಲ್ಲಿ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಬಿಟ್ಟು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಗೋಹತ್ಯೆ ನಿಷೇಧಿಸಿರುವುದು ಖಂಡನೀಯ. ಗೋಹತ್ಯ ನಿಷೇಧ ಕಾಯ್ದೆ ವಾಪಸ್‌ ಪಡೆಯದಿದ್ದರೆ ರಾಜ್ಯದೆಲ್ಲೆಡೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಶ್ರೀನಿವಾಸಯ್ಯ, ಸಂಚಾಲಕ ಬಿ.ಎನ್‌.ದಾಸ್‌, ಕಾರ್ಯದರ್ಶಿ ಬಿ.ಕುಪೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್‌, ಉಪಾಧ್ಯಕ್ಷ ನಾಗರಾಜ್‌, ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಸಿ.ನಾರಾಯಣಸ್ವಾಮಿ, ಸದಸ್ಯರಾದ ಅಶೋಕ್‌, ಹೇಮಂತ್‌, ಮುರಳಿ ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.