ಕೋಲಾರ: ಪದವಿ ತರಗತಿಯ 2ನೇ ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಹಾಗೂ ಪರೀಕ್ಷಾ ಶುಲ್ಕ ಪಾವತಿಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸದಸ್ಯರು ಇಲ್ಲಿ ಶುಕ್ರವಾರ ಬೆಂಗಳೂರು ಉತ್ತರ ವಿ.ವಿ ಕುಲಸಚಿವ ಪ್ರೊ.ಜನಾರ್ದನಮ್ ಅವರಿಗೆ ಮನವಿ ಸಲ್ಲಿಸಿದರು.
‘ಕೋವಿಡ್ ಹಾಗೂ ಲಾಕ್ಡೌನ್ ಹಿನ್ನೆಲೆಯಲ್ಲಿ ಹಿಂದಿನ ವರ್ಷ 2ನೇ ಮತ್ತು 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಉತ್ತೀರ್ಣ ಮಾಡುವಂತೆ ಸರ್ಕಾರ ಆದೇಶಿಸಿದೆ. ಲಾಕ್ಡೌನ್ ಕಾರಣಕ್ಕೆ ಆಗ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕ ಪಾವತಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ವಿ.ವಿ ಫಲಿತಾಂಶ ಪ್ರಕಟಿಸಿಲ್ಲ’ ಎಂದು ಎಬಿವಿಪಿ ಸದಸ್ಯರು ಹೇಳಿದರು.
‘ಫಲಿತಾಂಶ ಪ್ರಕಟವಾಗದ ಕಾರಣ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ. ಫಲಿತಾಂಶ ಬಾರದೆ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಸಮಸ್ಯೆಯಾಗಿದೆ. ವಿದ್ಯಾರ್ಥಿವೇತನಕ್ಕೆ ಹಾಗೂ ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ತೊಂದರೆಯಾಗಿದೆ’ ಎಂದು ತಿಳಿಸಿದರು.
ಮನವಿಗೆ ಸ್ಪಂದಿಸಿದ ಜನಾರ್ದನಮ್, ‘ಶುಲ್ಕ ಕಟ್ಟಲು ಕಾಲಾವಕಾಶ ಕೊಡುತ್ತೇವೆ’ ಎಂದು ಭರವಸೆ ನೀಡಿದರು. ಎಬಿವಿಪಿಯ ಹಲವು ಮುಖಂಡರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.