ADVERTISEMENT

ತೈಲೋತ್ಪನ್ನ ಬೆಲೆ ಏರಿಕೆ: ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಸರ್ಕಾರ–ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನಾಕಾರರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 14:39 IST
Last Updated 11 ಜೂನ್ 2021, 14:39 IST
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕೋಲಾರದಲ್ಲಿ ಶುಕ್ರವಾರ ಪೆಟ್ರೋಲ್‌ ಬಂಕ್‌ ಎದುರು ಪ್ರತಿಭಟನೆ ಮಾಡಿದರು.
ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕೋಲಾರದಲ್ಲಿ ಶುಕ್ರವಾರ ಪೆಟ್ರೋಲ್‌ ಬಂಕ್‌ ಎದುರು ಪ್ರತಿಭಟನೆ ಮಾಡಿದರು.   

ಕೋಲಾರ: ತೈಲೋತ್ಪನ್ನಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಇಲ್ಲಿ ಶುಕ್ರವಾರ ಬಂಗಾರಪೇಟೆ ರಸ್ತೆಯ ಪೆಟ್ರೋಲ್‌ ಬಂಕ್‌ ಎದುರು ಪ್ರತಿಭಟನೆ ಮಾಡಿದರು.

‘ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲೇ ಸಾಗಿದೆ. ಕೇಂದ್ರವು ಕೋವಿಡ್‌ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

‘ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನ, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಆರೋಪಿಸಿದರು.

ADVERTISEMENT

‘ಪ್ರಧಾನಿ ನರೇಂದ್ರ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ. ಜನರ ಮೇಲೆ ತೆರಿಗೆ ಹೊರೆ ಹೆಚ್ಚಿದೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದರು.

‘ಕೋವಿಡ್‌ನಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರಿಗೆ ಜೀವನ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಗಾಯದ ಮೇಲೆ ಬರೆ ಎಳೆದಂತೆ ತೈಲೋತ್ಪನ್ನಗಳ ಬೆಲೆ ಏರಿಕೆ ಮಾಡಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ತೈಲೋತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ತೈಲ ಕಂಪನಿಗಳು ಬಡ ಜನರ ಹಣ ಲೂಟಿ ಮಾಡುತ್ತಿವೆ’ ಎಂದು ಗುಡುಗಿದರು.

ಪ್ರಧಾನಿ ಸಬೂಬು: ‘ತೈಲೋತ್ಪನ್ನಗಳ ಬೆಲೆ ಏರಿಕೆ ಸಂಬಂಧ ಪ್ರತಿಪಕ್ಷಗಳು ಪ್ರಶ್ನೆ ಮಾಡಿದರೆ ತೈಲ ಕಂಪನಿಗಳು ತಮ್ಮ ನಿಯಂತ್ರಣದಲ್ಲಿ ಇಲ್ಲವೆಂದು ಪ್ರಧಾನಿ ಸಬೂಬು ಹೇಳುತ್ತಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯುವವರೆಗೂ ತೈಲೋತ್ಪನ್ನಗಳ ಬೆಲೆ ಹೆಚ್ಚಿಸಿರಲಿಲ್ಲ. ಚುನಾವಣೆ ಮುಗಿದ ಬೆನ್ನಲ್ಲೇ ಪ್ರತಿನಿತ್ಯ ಬೆಲೆ ಹೆಚ್ಚಿಸಲಾಗುತ್ತಿದೆ. ಬಿಜೆಪಿ ನಾಯಕರು ತೈಲೋತ್ಪನ್ನ ಕಂಪನಿಗಳ ಜತೆ ಶಾಮೀಲಾಗಿ ಹಣ ಮಾಡುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು. ತೈಲೋತ್ಪನ್ನ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ತೈಲೋತ್ಪನ್ನಗಳ ಮೇಲಿನ ಸೆಸ್ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಜನ ಬೀದಿಗಿಳಿದು ಹೋರಾಟ ಮಾಡುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಕೆ.ಜಯದೇವ್, ಎಸ್‍ಟಿ ಘಟಕದ ಅಧ್ಯಕ್ಷ ನಾಗರಾಜ್, ಕಾಂಗ್ರೆಸ್‌ ಕಿಸಾನ್‌ ಖೇತ್‌ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಎಸ್.ಮಂಜುನಾಥ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್‌ಬಾಬು, ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಉದಯಶಂಕರ್, ಪಕ್ಷದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟಪತೆಪ್ಪ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.