
ಮುಳಬಾಗಿಲು: ನಗರಸಭೆಯ ಕೋಲಾರಮ್ಮ ಸ್ವಚ್ಛತಾ ಕಾರ್ಯ ಪಡೆಯ ಸದಸ್ಯರು ಹಾಗೂ ಅಧಿಕಾರಿಗಳು ಮಂಗಳವಾರ ನಗರದ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ ಸುಮಾರು 150 ಕೆ.ಜಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಮುತ್ಯಾಲಪೇಟೆ, ಬಜಾರು ರಸ್ತೆ, ಸೋಮೇಶ್ವರ ಪಾಳ್ಯ, ಬೈಯಪ್ಪನಹಳ್ಳಿ ರಸ್ತೆ, ಕುರುಬರ ಪೇಟೆ ಮತ್ತಿತರರ ಕಡೆ ಅಧಿಕಾರಿಗಳು ದಾಳಿ ನಡೆಸಿ ಅಂಗಡಿಯಲ್ಲಿ ದಾಸ್ತಾನು ಮಾಡಿದ್ದ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದು ₹6,500 ದಂಡ ವಿಧಿಸಿದ್ದಾರೆ. ಇದೇ ರೀತಿ ಮುಂದುವರೆದರೆ ವಾಣಿಜ್ಯ ಪರವಾನಗಿ ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರಸಭೆಯ ಅಧಿಕಾರಿ ಸುನಿಲ್ ಕುಮಾರ್ ಮಾತನಾಡಿ, ಈಗಾಗಲೇ ಅನೇಕ ಬಾರಿ ನಗರದಲ್ಲಿ ಅಂಗಡಿ ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಸದಂತೆ ಅರಿವು, ಜಾಥಾ ನಡೆಸಿ ದಂಡ ವಿಧಿಸಿದರೂ ಪ್ಲಾಸ್ಟಿಕನ್ನು ಕಾನೂನು ಬಾಹಿರವಾಗಿ ಬಳಸುತ್ತಲೇ ಇದ್ದಾರೆ. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಸಿಕ್ಕಿದರೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕೋಲಾರಮ್ಮ ಕಾರ್ಯಪಡೆಯ ಹರ್ಷವರ್ಧನ್, ಹಿರಿಯ ಆರೋಗ್ಯ ನಿರೀಕ್ಷಕಿ ವಿ.ಪ್ರತಿಭ, ಪೌರ ಕಾರ್ಮಿಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.