ADVERTISEMENT

ಸಾರಿಗೆ ನೌಕರರ ಮೇಲೆ ಲಾಠಿ ಪ್ರಹಾರ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 12:25 IST
Last Updated 20 ಏಪ್ರಿಲ್ 2021, 12:25 IST
ಕೋಲಾರ ಗ್ರಾಮಾಂತರ ಠಾಣೆಗೆ ಮಂಗಳವಾರ ಮುತ್ತಿಗೆ ಹಾಕಲೆತ್ನಿಸಿದ ಕೆಎಸ್‌ಆರ್‌ಟಿಸಿ ನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.
ಕೋಲಾರ ಗ್ರಾಮಾಂತರ ಠಾಣೆಗೆ ಮಂಗಳವಾರ ಮುತ್ತಿಗೆ ಹಾಕಲೆತ್ನಿಸಿದ ಕೆಎಸ್‌ಆರ್‌ಟಿಸಿ ನೌಕರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದರು.   

ಕೋಲಾರ: ಠಾಣೆಗೆ ಮುತ್ತಿಗೆ ಹಾಕಲೆತ್ನಿಸಿದ ಕೆಎಸ್‌ಆರ್‌ಟಿಸಿ ನೌಕರರ ಮೇಲೆ ಪೊಲೀಸರು ಇಲ್ಲಿ ಮಂಗಳವಾರ ಲಾಠಿ ಪ್ರಹಾರ ನಡೆಸಿದ್ದು, 31 ನೌಕರರನ್ನು ಬಂಧಿಸಲಾಗಿದೆ.

ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸಿ 14 ದಿನಗಳಿಂದ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರು ಜಿಲ್ಲಾ ಕೇಂದ್ರದಲ್ಲಿನ ಕೆಎಸ್‌ಆರ್‌ಟಿಸಿ ಡಿಪೊ ಹಾಗೂ ಗಲ್‌ಪೇಟೆ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡಲು ಮುಂದಾದರು.

ಆದರೆ, ಕೋವಿಡ್‌ ಹಿನ್ನೆಲೆಯಲ್ಲಿ ಸಾರ್ವಜನಿಕರ ಸಭೆ ಸಮಾರಂಭ ಹಾಗೂ ಪ್ರತಿಭಟನೆ ನಡೆಸದಂತೆ ಸರ್ಕಾರ ಆದೇಶ ಹೊರಡಿಸಿರುವ ಕಾರಣಕ್ಕೆ ಪೊಲೀಸರು ಸಾರಿಗೆ ನೌಕರರ ಪ್ರತಿಭಟನೆಗೆ ಅನುಮತಿ ನಿರಾಕರಿಸಿದರು. ಆದರೂ ಸಾರಿಗೆ ನೌಕರರು ಸಂಗೊಂಡಹಳ್ಳಿಯ ಗಣೇಶ ದೇವಸ್ಥಾನದ ಬಳಿ ಪ್ರತಿಭಟನೆ ಮಾಡಲು ಯತ್ನಿಸಿದರು. ಸರ್ಕಾರದ ಆದೇಶ ಉಲ್ಲಂಘಿಸಿದ ಕಾರಣಕ್ಕೆ ಪೊಲೀಸರು ಕೆಲ ಸಾರಿಗೆ ನೌಕರರನ್ನು ವಶಕ್ಕೆ ತೆಗೆದುಕೊಂಡು ಕೋಲಾರ ಗ್ರಾಮಾಂತರ ಠಾಣೆಗೆ ಕರೆತಂದರು.

ADVERTISEMENT

ಈ ಸುದ್ದಿ ತಿಳಿದ ಇತರೆ ಸಾರಿಗೆ ನೌಕರರು ನೂರಾರು ಸಂಖ್ಯೆಯಲ್ಲಿ ಠಾಣೆ ಎದುರು ಜಮಾಯಿಸಿದರು. ವಶಕ್ಕೆ ತೆಗೆದುಕೊಂಡಿರುವವರನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪೊಲೀಸರು ಸಾರಿಗೆ ನೌಕರರ ಮೇಲೆ ಲಾಠಿ ಪ್ರಹಾರ ನಡೆಸಿದರು. ಅಲ್ಲದೇ, 31 ನೌಕರರನ್ನು ಬಂಧಿಸಿ ಪರಿಸ್ಥಿತಿ ನಿಯಂತ್ರಿಸಿದರು.

ಬಂಧಿತ ನೌಕರರ ವಿರುದ್ಧ ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಉಲ್ಲಂಘನೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಕಾನೂನುಬಾಹಿರವಾಗಿ ಗುಂಪುಗೂಡುವಿಕೆ, ಶಾಂತಿ ಕದಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.