ADVERTISEMENT

ಬೌದ್ಧ ದೀಕ್ಷಾ ಕಾರ್ಯಕ್ರಮ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2020, 16:10 IST
Last Updated 21 ಅಕ್ಟೋಬರ್ 2020, 16:10 IST

ಕೋಲಾರ: ‘ಕೋವಿಡ್‌–19 ಕಾರಣಕ್ಕೆ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮವನ್ನು 2021ರ ಅಕ್ಟೋಬರ್‌ ತಿಂಗಳಿಗೆ ಮುಂದೂಡಲಾಗಿದೆ’ ಎಂದು ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ (ಆರ್‌ಪಿಐ) ರಾಜ್ಯ ಯುವ ಘಟಕದ ಅಧ್ಯಕ್ಷ ಎಂ.ಅಂಬರೀಶ್ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈ ಬಾರಿ ನವೆಂಬರ್‌ ತಿಂಗಳಲ್ಲಿ ಬೌದ್ಧ ಧಮ್ಮ ದೀಕ್ಷಾ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಎಲ್ಲೆಡೆ ಕೋವಿಡ್‌ ಆತಂಕ ಹೆಚ್ಚಿರುವ ಕಾರಣ ಕಾರ್ಯಕ್ರಮ ಮುಂದೂಡುವ ನಿರ್ಧಾರ ಮಾಡಲಾಗಿದೆ’ ಎಂದು ವಿವರಿಸಿದರು.

‘ಮುಂದಿನ ವರ್ಷ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಮಹಾ ದೀಕ್ಷಾ ಸಮಾರಂಭ ಯಶಸ್ವಿಗೊಳಿಸಬೇಕು. ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಪೂರ್ವಭಾವಿಯಾಗಿ ದೀಕ್ಷಾ ಕಾರ್ಯಕ್ರಮ ನಡೆಸುತ್ತೇವೆ. ಪ್ರತಿ ತಿಂಗಳು ಹುಣ್ಣಿಮೆ ದಿನದಂದು ದೀಕ್ಷಾ ಕಾರ್ಯಕ್ರಮ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಜಿಲ್ಲಾ ಮಟ್ಟದ ಪ್ರಥಮ ದೀಕ್ಷಾ ಕಾರ್ಯಕ್ರಮವನ್ನು ಮಲ್ಲಗಾನಹಳ್ಳಿಯಲ್ಲಿ ನ.12ರಂದು ನಡೆಸುತ್ತೇವೆ. ಕೇಂದ್ರ ಸಚಿವ ರಾಮದಾಸ್ ಅಠಾವಳೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಬುದ್ಧ ಮಂಟಪ ಅನಾವರಣಗೊಳಿಸಲಾಗುತ್ತದೆ. ಅದೇ ದಿನ ಕೊಳ್ಳೇಗಾಲದ ಹಿರಿಯ ಬಿಕ್ಕು ಮನೋರಕ್ಕಿತ ಅವರು ಸುಮಾರು 5 ಸಾವಿರ ಮಂದಿಗೆ ಬೌದ್ಧ ಧರ್ಮದ ದೀಕ್ಷೆ ನೀಡುತ್ತಾರೆ’ ಎಂದು ಹೇಳಿದರು.

‘ಬೌದ್ಧ ಬಿಕ್ಕುಗಳು, ಸಾಹಿತಿಗಳು, ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ಸಂಸದ ಎಸ್‌.ಮುನಿಸ್ವಾಮಿ, ಶಾಸಕ ಕೆ.ಆರ್‌.ರಮೇಶ್‌ಕುಮಾರ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಬರುತ್ತಾರೆ’ ಎಂದರು.

ಸಮತಾ ಸೈನಿಕ ದಳ ಜಿಲ್ಲಾ ಘಟಕದ ಅಧ್ಯಕ್ಷ ಕೃಷ್ಣಯ್ಯ, ಆರ್‌ಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮುನೀಶ್, ಜಿಲ್ಲಾ ಯುವ ಘಟಕದ ಅಧ್ಯಕ್ಷ ಬೇಟಪ್ಪ, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್‌ಪಾಷಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.