ಕೋಲಾರ: ತಾಲ್ಲೂಕಿನ ನರಸಾಪುರ ಗ್ರಾಮದ ಮುಖ್ಯರಸ್ತೆ ವಿಸ್ತರಣೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಾಹನ ಸಂಚಾರ ಹಾಗೂ ಪಾದಚಾರಿಗಳು ನಡೆದಾಡಲು ನಿತ್ಯ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ.
ರಸ್ತೆ ವಿಸ್ತರಣೆಯ ಗುತ್ತಿಗೆ ಪಡೆದವರು, ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ. ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ. ನಿರಂತರವಾಗಿ ಸುರಿದ ಭಾರಿ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು ಗುಂಡಿಗಳು ನಿರ್ಮಾಣವಾಗಿವೆ. ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ತೊಂದರೆ ಆಗಿದೆ ಎಂದು ಗ್ರಾಮಸ್ಥರು, ಸಾರ್ವಜನಿಕರು ದೂರಿದ್ದಾರೆ.
ನರಸಾಪುರ ಗ್ರಾಮದ ಮುಖಂಡರು ಮಾತನಾಡಿ, ‘ಗ್ರಾಮದ ಮುಖ್ಯರಸ್ತೆಯ ವಿಸ್ತರಣೆಯ ಕಾಮಗಾರಿಯ ಗುತ್ತಿಗೆ ಪಡೆದಂತಹ ಗುತ್ತಿಗೆದಾರರರ ವಿಳಂಬ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ. ಗ್ರಾಮದ ಒಳಗಿನ ಈ ರಸ್ತೆಯು ಕೆಸರು ಗದ್ದೆಯಂತಾಗಿದೆ. ವಾಹನಗಳು ಸುರಕ್ಷಿತವಾಗಿ ಸಂಚಾರ ಮಾಡಲು ಆಗುತ್ತಿಲ್ಲ ತುಂಬಾ ಕಷ್ಟವಾಗಿದೆ’ ಎಂದಿದ್ದಾರೆ.
ರಸ್ತೆಯ ವಿಸ್ತರಣೆ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ, ಗುಂಡಿಗಳಲ್ಲಿ ನೀರು ನಿಂತುಕೊಂಡಿದೆ. ಕಾಮಗಾರಿ ಇತ್ತೀಚೆಗೆ ಪ್ರಾರಂಭವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೇ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಒತ್ತಾಯಿಸಿದ್ದಾರೆ,
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.