ಮಾಲೂರು: ‘ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ 78 ಕಾಂಗ್ರೆಸ್ ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ₹ 19 ಸಾವಿರ ಕೋಟಿ ಅನುದಾನ ನೀಡಲಾಗಿತ್ತು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಸಂಜೆ ತಾಲ್ಲೂಕು ಜೆಡಿಎಸ್ ಘಟಕದಿಂದ ಹಮ್ಮಿಕೊಂಡಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆಯ ಪ್ರಚಾರ ಸಭೆ ಉದ್ಘಾಟಿಸಿ ಅವರು
ಮಾತನಾಡಿದರು.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರಕ್ಕೆ ₹ 220 ಕೋಟಿ ಅನುದಾನ ನೀಡಲಾಗಿದೆ. ಇದನ್ನು ಕಾಂಗ್ರೆಸ್ ಶಾಸಕರು ಮರೆತಿದ್ದಾರೆ ಎಂದು ಟೀಕಿಸಿದರು.
‘ರಾಜ್ಯದಲ್ಲಿ ಎರಡು ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ಜೊತೆ ಅಧಿಕಾರಿ ನಡೆಸಿದ ಅನುಭವದಿಂದ ರಾಜ್ಯದ ಜನತೆಗೆ ಜೆಡಿಎಸ್ನಿಂದ ಐದು ಅಂಶಗಳ ಕಾರ್ಯಕ್ರಮ ನೀಡಲು ತೀರ್ಮಾನಿಸಿದ್ದೇನೆ. ಉಚಿತ ಶಿಕ್ಷಣ, ಉಚಿತ ಆರೋಗ್ಯ ಮತ್ತು ಉಚಿತ ಸೂರು ಕಲ್ಪಿಸಲಾಗುವುದು. 2023ರಲ್ಲಿ ನಡೆಯುವ ವಿಧಾನ ಸಭೆ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಆಡಳಿತ ನಡೆಸಲು 124 ಶಾಸಕರನ್ನು ಗೆಲ್ಲಿಸಬೇಕು’ ಎಂದು ಕೋರಿದರು.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಸದೃಢವಾಗಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಜಿ.ಇ. ರಾಮೇಗೌಡ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.
ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ವಕ್ಕಲೇರಿ ರಾಮು, ಜಿ.ಇ. ರಾಮೇಗೌಡ ಮಾತನಾಡಿದರು. ಚಿಂತಾಮಣಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಇಂಚರ ಗೋವಿಂದರಾಜು, ಮಾಜಿ ಶಾಸಕ ವೆಂಕಟಶಿವಾರೆಡ್ಡಿ, ತೂಪಲ್ಲಿ ಚೌಡರೆಡ್ಡಿ, ಮುಖಂಡರಾದ ಚಂದ್ರಶೇಖರ್ ಗೌಡ, ನಾರಾಯಣಸ್ವಾಮಿ, ರಾಮಸ್ವಾಮಿ, ವಕೀಲ ಆನಂದಕುಮಾರ್, ದಿನೇಶ್ ಗೌಡ, ಮಂಜುನಾಥ್ ಗೌಡ , ಜಿ.ಪಂ. ಮಾಜಿ ಅಧ್ಯಕ್ಷೆ ಚೌಡೇಶ್ವರಿ, ಸಿಎಂಆರ್ ಶ್ರೀನಿವಾಸ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.