ADVERTISEMENT

ಸಿದ್ಧಗಂಗಾಶ್ರೀ ಆರೋಗ್ಯ ಸುಧಾರಣೆಗೆ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 18 ಜನವರಿ 2019, 14:22 IST
Last Updated 18 ಜನವರಿ 2019, 14:22 IST
ವಿವಿಧ ಸಂಘಟನೆಗಳ ಸದಸ್ಯರು ಸಿದ್ಧಗಂಗಾಶ್ರೀಯವರ ಆರೋಗ್ಯ ಸುಧಾರಣೆಗಾಗಿ ಕೋಲಾರದ ಕೋಲಾರಮ್ಮ ದೇವಾಲಯದಲ್ಲಿ ಶುಕ್ರವಾರ ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.
ವಿವಿಧ ಸಂಘಟನೆಗಳ ಸದಸ್ಯರು ಸಿದ್ಧಗಂಗಾಶ್ರೀಯವರ ಆರೋಗ್ಯ ಸುಧಾರಣೆಗಾಗಿ ಕೋಲಾರದ ಕೋಲಾರಮ್ಮ ದೇವಾಲಯದಲ್ಲಿ ಶುಕ್ರವಾರ ಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.   

ಕೋಲಾರ: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಗುಣಮುಖರಾಗಲೆಂದು ಪ್ರಾರ್ಥಿಸಿ ವಿವಿಧ ಸಂಘಟನೆಗಳ ಸದಸ್ಯರು ಇಲ್ಲಿನ ಕೋಲಾರಮ್ಮ ದೇವಾಲಯದಲ್ಲಿ ಶುಕ್ರವಾರ 111 ತೆಂಗಿನಕಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಿದರು.

ಸಂಘಟನೆಗಳ ಮುಖಂಡರು ದೇವಾಲಯದ ಆವರಣದಲ್ಲಿ ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ‘ನಡೆದಾಡುವ ದೇವರು ಬೇಗನೆ ಚೇತರಿಸಿಕೊಳ್ಳಬೇಕು’ ಎಂದು ಪ್ರಾರ್ಥಿಸಿದರು.

ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ‘ಶತಾಯುಷಿ ಶಿವಕುಮಾರ ಸ್ವಾಮೀಜಿ ಸಮಾಜಕ್ಕೆ ಅನನ್ಯ ಸೇವೆ ಸಲ್ಲಿಸಿದ್ದಾರೆ. ಶಾಲಾ ಕಾಲೇಜು ಆರಂಭಿಸಿ ಬಡ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದಾರೆ. ಅವರ ಸೇವೆ ಪರಿಗಣಿಸಿ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಶಿವಕುಮಾರ ಸ್ವಾಮೀಜಿಯುವರು 2 ವರ್ಷಗಳಿಂದ ಸ್ವಲ್ಪ ಮಟ್ಟಿಗೆ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಇದರಿಂದ ಮಠದ ಭಕ್ತರು ಹಾಗೂ ರಾಜ್ಯದ ಜನತೆ ಆತಂಕಗೊಂಡಿದ್ದಾರೆ. ಮಠದ ಮಕ್ಕಳು ಚಿಂತಾಕ್ರಾಂತರಾಗಿದ್ದಾರೆ. ಸ್ವಾಮೀಜಿಯವರಿಗೆ ಭಾರತರತ್ನ ಪ್ರಶಸ್ತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ಹೇಳಿದರು.

‘ಸರಳ ಸಜ್ಜನಿಕೆಯ ಶಿವಕುಮಾರ ಸ್ವಾಮೀಜಿಯವರು ತ್ರಿವಿಧ ದಾಸೋಹಿಯಾಗಿ ಶೈಕ್ಷಣಿಕ ಮತ್ತು ಆರೋಗ್ಯ ಸೇವೆ ಸಲ್ಲಿಸಿದ್ದಾರೆ. ಜತೆಗೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೂ ಕೊಡುಗೆ ನೀಡಿದ್ದಾರೆ. ನಿಜಕ್ಕೂ ಅವರು ಪವಾಡ ಪುರುಷರು’ ಎಂದು ಬಣ್ಣಿಸಿದರು.

‘ರಾಜಕಾರಣಿಗಳು ಶಿವಕುಮಾರ ಸ್ವಾಮೀಯವರ ತತ್ವಾದರ್ಶ ಮೈಗೂಡಿಸಿಕೊಳ್ಳಬೇಕು. ದೇಶಕ್ಕೆ ಸಿದ್ಧಗಂಗಾ ಮಠದ ಸೇವೆ ಅಗತ್ಯವಾಗಿದ್ದು, ಸ್ವಾಮೀಜಿಯು ಬೇಗನೆ ಗುಣಮುಖರಾಗಬೇಕು. ಜನರಿಗೆ ಅವರ ಸೇವೆ ಸಿಗಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್‌ ಹೇಳಿದರು.

ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ನಳಿನಿಗೌಡ, ರೈತ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್, ಯುವ ಶಕ್ತಿ ಸಂಘಟನೆ ತಾಲ್ಲೂಕು ಘಟಕದ ಅಧ್ಯಕ್ಷ ಪುಟ್ಟರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.