ಕೋಲಾರ: ಕಕ್ಷಿದಾರರು ಹಾಗೂ ವಕೀಲರಿಗೆ ಕೊರೊನಾ ಸೋಂಕು ಹರಡದಂತೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲೂ ಬುಧವಾರದಿಂದ ಮುನ್ನೆಚ್ಚರಿಕೆ ವಹಿಸಲಾಗಿದೆ.
ನ್ಯಾಯಾಧೀಶರೇ ಖುದ್ದು ಮುಂದೆ ನಿಂತರ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕಕ್ಷಿದಾರರು ಮತ್ತು ವಕೀಲರಿಗೆ ಸಲಹೆ ಸೂಚನೆ ನೀಡಿದರು.
ನ್ಯಾಯಾಲಯ ಸಂಕೀರ್ಣ ಪ್ರಾಂಗಣದ ಪ್ರವೇಶ ಭಾಗದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯು ಪ್ರತಿಯೊಬ್ಬರ ದೇಹದ ಉಷ್ಣತೆ ಹಾಗೂ ರಕ್ತದೊತ್ತಡ ಪರೀಕ್ಷೆ ಮಾಡಿದರು. ಅಲ್ಲದೇ, ನ್ಯಾಯಾಲಯಕ್ಕೆ ಬರುವ ಪ್ರತಿ ವ್ಯಕ್ತಿಯ ಆರೋಗ್ಯ ತಪಾಸಣೆ ಮಾಡಿದರು. ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರ ಆರೋಗ್ಯದ ಬಗ್ಗೆ ನ್ಯಾಯಾಧೀಶರು ತೋರಿದ ಕಾಳಜಿ ಮೆಚ್ಚುಗೆಗೆ ಪಾತ್ರವಾಯಿತು.
ನ್ಯಾಯಾಲಯಕ್ಕೆ ಬರುವ ಪ್ರತಿಯೊಬ್ಬರೂ ಕೈ ಶುದ್ಧೀಕರಿಸಿಕೊಳ್ಳಲು ಲೋಷನ್ ವ್ಯವಸ್ಥೆ ಮಾಡಲಾಗಿದೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ಅತಿ ತುರ್ತು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ.
ಬಹುತೇಕ ಪ್ರಕರಣಗಳಲ್ಲಿ ಕಕ್ಷಿದಾರರನ್ನು ಹೆಚ್ಚು ಹೊತ್ತು ಕಾಯಿಸದೆ ವಿಚಾರಣೆಯ ಮುಂದಿನ ದಿನಾಂಕ ನೀಡಲಾಗುತ್ತಿದೆ. ಅವಶ್ಯವೆನಿಸಿದ ಪ್ರಕರಣಗಳಲ್ಲಿ ಮಾತ್ರ ಸಾಕ್ಷಿಗಳ ವಿಚಾರಣೆ ನಡೆದಿದ್ದು, ನ್ಯಾಯಾಲಯ ಆವರಣದಲ್ಲಿ ಸಾಧ್ಯವಾದಷ್ಟು ಜನದಟ್ಟಣೆ ಕಡಿಮೆ ಮಾಡಲು ನ್ಯಾಯಾಧೀಶರು ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.