ಶ್ರೀನಿವಾಸಪುರ: ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗಿದೆ. ಅಧಿಕಾರಿಗಳು ಈ ಬಗ್ಗೆ ಹೆಚ್ಚು ಗಮನ ನೀಡಬೇಕು. ಯಾವುದೇ ಸಮಸ್ಯೆ ಉಂಟಾಗದಂತೆ ಎಚ್ಚರಿಕೆವಹಿಸಬೇಕು ಎಂದು ಶಾಸಕ ಕೆ.ಆರ್. ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಕಾರಂಗಿ-ಕನಂಪಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಎರಡೂ ಗ್ರಾಮಗಳನ್ನು ಸಂಪರ್ಕಿಸುವ 4.5 ಕಿ.ಮೀ ದೂರದ ರಸ್ತೆಯನ್ನು ಲೋಕೋಪಯೋಗಿ ಇಲಾಖೆಯಿಂದ ₹ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಗ್ರಾಮೀಣ ರಸ್ತೆಗಳ ನಿರ್ಮಾಣದಿಂದ ರೈತ ಸಮುದಾಯಕ್ಕೆ ಹೆಚ್ಚು ಪ್ರಯೋಜನವಾಗುತ್ತದೆ. ವ್ಯವಸಾಯೋತ್ಪನ್ನಗಳನ್ನು ಸುಲಭವಾಗಿ ದೂರದ ಮಾರುಕಟ್ಟೆಗಳಿಗೆ ಸಾಗಿಸಲು ಸಾಧ್ಯವಾಗುತ್ತದೆ. ಸ್ಥಳೀಯವಾಗಿ ಸುತ್ತಮುತ್ತಲಿನ ಗ್ರಾಮಗಳ ಸಂಪರ್ಕ ಸಾಧಿಸುವುದು ಸುಲಭವಾಗುತ್ತದೆ ಎಂದರು.
ಪ್ರತಿ ಗ್ರಾಮಕ್ಕೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಈಗಾಗಲೇ, ಹಲವು ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಪಕ್ಕದ ಗ್ರಾಮಗಳ ಜನರೂ ಅವುಗಳ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಚರಂಡಿ ಹಾಗೂ ಮೋರಿಗಳನ್ನು ನಿರ್ಮಾಣ ಮಾಡುವುದರಿಂದ ಸ್ವಚ್ಛ ಪರಿಸರ ಇರಲು ಸಾಧ್ಯವಾಗುತ್ತದೆ. ನಾಗರಿಕರು ತಮ್ಮ ಗ್ರಾಮಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸಂಭವನೀಯ ರೋಗರುಜಿನಗಳಿಂದ ಪಾರಾಗಬೇಕು ಎಂದು
ಹೇಳಿದರು.
ಗುತ್ತಿಗೆದಾರರು ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಕಳಪೆ ಕಾಮಗಾರಿಗೆ ಅವಕಾಶ ನೀಡಬಾರದು. ಮಾಡಿದ ಕೆಲಸ ಹೆಚ್ಚು ಕಾಲ ಉಳಿಯಬೇಕು. ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಗಳ ಗುಣಮಟ್ಟದ ಪರಿಶೀಲನೆ ಮಾಡಬೇಕು
ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಸ್. ಆನಂದ್, ಪಿಡಿಒ ಮಂಜುನಾಥ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೋವಿಂದಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ವಿ. ಸುಧಾಕರ್, ಮಾಜಿ ಸದಸ್ಯ ಕೆ.ಕೆ. ಮಂಜು, ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸದಸ್ಯ ಹರೀಶ್ ರೆಡ್ಡಿ, ಮುಖಂಡರಾದ ಕೃಷ್ಣಾರೆಡ್ಡಿ, ಗುರಪ್ಪ, ಶ್ರೀನಾಥ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ಗಳಾದ ಎಂ.ಕೆ. ಹುಸೇನ್ ಸಾಬ್, ಚಂದ್ರಶೇಖರ್, ಎಂಜಿನಿಯರ್ ಎಲ್.ಎಂ. ನಾಗರಾಜ್, ಗೋವಿಂದಪ್ಪ, ಎಸ್.ಜಿ.ವಿ. ವೆಂಕಟೇಶ್
ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.