ADVERTISEMENT

ಗರ್ಭಿಣಿ–ಮಗು ಸಾವು: ನಿರ್ಲಕ್ಷ್ಯ ಆರೋಪ

ಜಾಲಪ್ಪ ಆಸ್ಪತ್ರೆ ಎದುರು ಮೃತರ ಕುಟುಂಬ ಸದಸ್ಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 16:18 IST
Last Updated 27 ಫೆಬ್ರುವರಿ 2021, 16:18 IST
ಅನುಷಾ
ಅನುಷಾ   

ಕೋಲಾರ: ಹೆರಿಗೆಗಾಗಿ ನಗರದ ಆರ್‌.ಎಲ್‌.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿದ್ದ ಅನುಷಾ (24) ಎಂಬ ಗರ್ಭಿಣಿ ಹಾಗೂ ಮಗು ಮೃತಪಟ್ಟಿದ್ದರಿಂದ ಆಕ್ರೋಶಗೊಂಡ ಕುಟುಂಬ ಸದಸ್ಯರು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಬಳಿ ಶನಿವಾರ ಪ್ರತಿಭಟನೆ ಮಾಡಿದರು.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ನಿಡಗುರ್ಕಿ ಗ್ರಾಮದ ಅನುಷಾ ಅವರನ್ನು ಶುಕ್ರವಾರ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಹೆರಿಗೆಗೂ ಮುನ್ನವೇ ಅವರು ಶುಕ್ರವಾರ ತಡರಾತ್ರಿ ಮೃತಪಟ್ಟರು. ಹೊಟ್ಟೆಯಲ್ಲಿದ್ದ ಮಗು ಸಹ ಮೃತಪಟ್ಟಿತು ಎಂದು ಪೊಲೀಸರು ತಿಳಿಸಿದ್ದಾರೆ.

ಎದೆ ನೋವು ಮತ್ತು ಉಸಿರಾಟ ಸಮಸ್ಯೆಯಿಂದಾಗಿ ಅನುಷಾ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಆದರೆ, ವೈದ್ಯರ ಹೇಳಿಕೆ ಒಪ್ಪದ ಮೃತರ ಕುಟುಂಬ ಸದಸ್ಯರು ಅನುಷಾ ಸಾವಿಗೆ ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ADVERTISEMENT

‘ವೈದ್ಯಕೀಯ ಸಿಬ್ಬಂದಿ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಪ್ರಕರಣ ದಾಖಲಿಸಿ ಬಂಧಿಸಬೇಕು. ಬೇರೆ ಆಸ್ಪತ್ರೆಯಲ್ಲಿ ಅನುಷಾ ಅವರ ಮರಣೋತ್ತರ ಪರೀಕ್ಷೆ ಮಾಡಿಸಬೇಕು. ಆವರೆಗೆ ಶವ ತೆಗೆದುಕೊಳ್ಳುವುದಿಲ್ಲ’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಇದರಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಬಳಿಕ ಪೊಲೀಸರು ಶಿಸ್ತುಕ್ರಮದ ಭರವಸೆ ನೀಡಿ ಧರಣಿನಿರತರ ಮನವೊಲಿಸಿದರು. ನಂತರ ಅನುಷಾ ಮತ್ತು ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.