ADVERTISEMENT

ಸುಗ್ಗಿ ಹಬ್ಬಕ್ಕೆ ಸಿದ್ಧತೆ: ಮಾರುಕಟ್ಟೆಯಲ್ಲಿ ಜನಜಾತ್ರೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 13:18 IST
Last Updated 13 ಜನವರಿ 2021, 13:18 IST
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೋಲಾರದ ಹಳೆ ಬಸ್‌ ನಿಲ್ದಾಣದ ಬಳಿಯ ಮಾರುಕಟ್ಟೆಯಲ್ಲಿ ಬುಧವಾರ ಹೂವಿನ ವಹಿವಾಟು ಜೋರಾಗಿತ್ತು.
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಕೋಲಾರದ ಹಳೆ ಬಸ್‌ ನಿಲ್ದಾಣದ ಬಳಿಯ ಮಾರುಕಟ್ಟೆಯಲ್ಲಿ ಬುಧವಾರ ಹೂವಿನ ವಹಿವಾಟು ಜೋರಾಗಿತ್ತು.   

ಕೋಲಾರ: ಸುಗ್ಗಿ ಹಬ್ಬ ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಗ್ರಾಹಕರು ಪೂಜಾ ಸಾಮಗ್ರಿ ಖರೀದಿಸಲು ನಗರದ ಮಾರುಕಟ್ಟೆಗಳಿಗೆ ಬುಧವಾರ ಮುಗಿಬಿದ್ದರು. ವಸ್ತುಗಳ ಬೆಲೆ ಏರಿಕೆ ನಡುವೆಯೂ ಮಾರುಕಟ್ಟೆಯಲ್ಲಿ ವಹಿವಾಟು ಜೋರಾಗಿತ್ತು.

ಹಳೆ ಬಸ್‌ ನಿಲ್ದಾಣ, ಎಂ.ಜಿ.ರಸ್ತೆ, ಎಂ.ಬಿ.ರಸ್ತೆ, ಟೇಕಲ್‌ ರಸ್ತೆ, ದೊಡ್ಡಪೇಟೆ, ವಾಸವಿ ದೇವಸ್ಥಾನ ರಸ್ತೆ, ಕಾಳಮ್ಮ ಗುಡಿ ರಸ್ತೆ, ಅಮ್ಮವಾರಿಪೇಟೆ ಸೇರಿದಂತೆ ಪ್ರಮುಖ ವಾಣಿಜ್ಯ ಸ್ಥಳಗಳ ಸುತ್ತಮುತ್ತ ಜನಜಂಗುಳಿಯೇ ಕಂಡುಬಂತು. ಬೆಳಿಗ್ಗೆಯಿಂದ ರಾತ್ರಿವರೆಗೂ ವಹಿವಾಟು ಭರ್ಜರಿಯಾಗಿ ನಡೆಯಿತು.

ಹಣ್ಣು, ತರಕಾರಿ, ದಿನಸಿ ಹಾಗೂ ಹೂವಿನ ಅಂಗಡಿಗಳು ಗ್ರಾಹಕರಿಂದ ತುಂಬಿ ಹೋಗಿದ್ದವು. ಪ್ರಮುಖ ರಸ್ತೆಗಳ ಬದಿಯಲ್ಲಿ ಹಾಗೂ ಪಾದಚಾರಿ ಮಾರ್ಗದಲ್ಲಿ ವರ್ತಕರು ಹೂವು, ಹಣ್ಣು, ಕಬ್ಬಿನ ಜಲ್ಲೆ, ಎಳ್ಳು–ಬೆಲ್ಲ, ಗೆಣಸು, ಕಡಲೆಕಾಯಿ, ಅವರೆ ಕಾಯಿ ಮಾರುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ADVERTISEMENT

ಕೆಲ ವ್ಯಾಪಾರಿಗಳು ತಳ್ಳುಗಾಡಿಗಳಲ್ಲಿ ಹಬ್ಬದ ಸಾಮಗ್ರಿ ಮಾರುತ್ತಿದ್ದ ದೃಶ್ಯ ಬಡಾವಣೆಗಳಲ್ಲಿ ಕಂಡುಬಂತು. ರೈತರು ಜಾನುವಾರುಗಳನ್ನು ಸಿಂಗರಿಸಲು ಕರಿ ಹುರಿ, ಗೆಜ್ಜೆ, ಹಾರ, ಕುಚ್ಚು, ಬಣ್ಣದ ಪೇಪರ್, ಮೂಗುದಾರ ಖರೀದಿಸಿದರು.

ಬೆಲೆ ಏರಿಕೆ ಬಿಸಿ: ಹಬ್ಬದ ಹಿನ್ನೆಲೆಯಲ್ಲಿ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದವು. ಏಲಕ್ಕಿ ಬಾಳೆ ಹಾಗೂ ಕಿತ್ತಳೆ ಹಣ್ಣು ಕೆ.ಜಿಗೆ ₹ 60, ಪಚ್ಚ ಬಾಳೆ ₹ 30, ಮೋಸಂಬಿ ₹ 90, ಸೇಬು ₹ 200, ದಾಳಿಂಬೆ ₹ 250, ಕಪ್ಪು ದ್ರಾಕ್ಷಿ ₹ 320, ಸಪೋಟ ಹಾಗೂ ಸೀಬೆ ₹ 70 ಇತ್ತು. ಕಬ್ಬಿನ ಜಲ್ಲೆ ಒಂದಕ್ಕೆ ₹ 60, ತೆಂಗಿನಕಾಯಿ ಒಂದಕ್ಕೆ ₹ 30, ಗೆಣಸು ಮತ್ತು ಅವರೆ ಕಾಯಿ ಕೆ.ಜಿಗೆ ₹ 40, ಕಡಲೆ ಕಾಯಿ ₹ 100 ಇತ್ತು.

ಕನಕಾಂಬರ ಹೂವು ಕೆ.ಜಿಗೆ ₹ 1,500, ಮಲ್ಲಿಗೆ ₹ 1,600 ಸಾವಿರ, ಕಾಕಡ ₹ 600, ಗುಲಾಬಿ ಮತ್ತು ಸೇವಂತಿಗೆ ₹ 200, ಮಾರಿ ಗೋಲ್ಡ್‌ ₹ 190, ಸುಗಂಧ ರಾಜ ₹ 160, ಚೆಂಡು ಹೂವು ₹ 40 ಇತ್ತು. ಹೂವು, ಹಣ್ಣಿನ ಜತೆಗೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯಾಗಿದ್ದವು. ಪೂಜಾ ಸಾಮಗ್ರಿ ಖರೀದಿಗಾಗಿ ಮಾರುಕಟ್ಟೆಗೆ ಬಂದಿದ್ದ ಗ್ರಾಹಕರಿಗೆ ವಸ್ತುಗಳ ಬೆಲೆ ಏರಿಕೆ ಬಿಸಿ ತಟ್ಟಿತು.

ಸಂಚಾರ ನಿರ್ಬಂಧ: ಸಂಜೆಯಾದಂತೆ ಮಾರುಕಟ್ಟೆಗೆ ಬರುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಾ ಹೋಯಿತು. ಇದರಿಂದ ಪ್ರಮುಖ ವಾಣಿಜ್ಯ ಸ್ಥಳಗಳಲ್ಲಿ ವಾಹನ ದಟ್ಟಣೆ ಉಂಟಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಹಲವೆಡೆ ರಸ್ತೆಗಳಲ್ಲಿ ವಾಹನ ಸಂಚಾರ ಮತ್ತು ಭಾರಿ ವಾಹನಗಳ ಓಡಾಟ ನಿರ್ಬಂಧಿಸಲಾಗಿತ್ತು.

ಮಾರುಕಟ್ಟೆ ಪ್ರದೇಶದ ಸುತ್ತಮುತ್ತ ಸಂಚಾರ ನಿರ್ವಹಣೆಗೆ ಹೆಚ್ಚಿನ ಪೊಲೀಸರು ಹಾಗೂ ಗೃಹರಕ್ಷಕ ದಳ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಪರಸ್ಥಳದ ಸಾರ್ವಜನಿಕರು ಹಬ್ಬದ ಆಚರಣೆಗಾಗಿ ಸ್ವಂತ ಊರುಗಳಿಗೆ ಹೋಗಲು ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದ ದೃಶ್ಯ ಕಂಡುಬಂತು. ಸಂಜೆ ವೇಳೆಗೆ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಪ್ರಯಾಣಿಕರ ದೊಡ್ಡ ದಂಡೇ ಇತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.