ADVERTISEMENT

ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ

ಲೋಪವೆಸಗುವ ಅಧಿಕಾರಿಗಳ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2026, 5:22 IST
Last Updated 4 ಮಾರ್ಚ್ 2026, 5:22 IST
ಕೋಲಾರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್‌.ರವಿ ನೇತೃತ್ವದಲ್ಲಿ ಸಭೆ ನಡೆಯಿತು
ಕೋಲಾರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಎಂ.ಆರ್‌.ರವಿ ನೇತೃತ್ವದಲ್ಲಿ ಸಭೆ ನಡೆಯಿತು   

ಕೋಲಾರ: ‌ಸಾರ್ವಜನಿಕರಿಗೆ ಪೂರೈಕೆಯಾಗುವ ಕುಡಿಯುವ ನೀರು ಕಲುಷಿತವಾಗದಂತೆ ಅತ್ಯಂತ ಜಾಗರೂಕತೆ ವಹಿಸಬೇಕು. ನೀರಿನ ಗುಣಮಟ್ಟ ಪರೀಕ್ಷೆಯಲ್ಲಿ ಲೋಪವೆಸಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಆರ್. ರವಿ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸೋಮವಾರ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ನಡೆದ 'ಕುಡಿಯುವ ನೀರು ಮತ್ತು ಬೇಸಿಗೆ ಸಿದ್ಧತಾ ಪರಿಶೀಲನಾ ಸಭೆ'ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ನೀರಿನ ಗುಣಮಟ್ಟದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಪ್ರತಿ ವಾರವೂ ಕಡ್ಡಾಯವಾಗಿ ನೀರಿನ ಮಾದರಿಗಳನ್ನು ಪರೀಕ್ಷಿಸಬೇಕು ಎಂದು ಸೂಚಿಸಿದರು.

ADVERTISEMENT

ಪೈಪ್‍ಲೈನ್‍ಗಳಲ್ಲಿ ಸೋರಿಕೆ ಉಂಟಾಗಿ ಒಳಚರಂಡಿ ನೀರು ಮಿಶ್ರಣವಾಗದಂತೆ ನೋಡಿಕೊಳ್ಳುವುದು ಸ್ಥಳೀಯ ಸಂಸ್ಥೆಗಳ ಜವಾಬ್ದಾರಿ. ಪ್ರತಿ 10 ದಿನಕ್ಕೊಮ್ಮೆ ಎಫ್‍ಟಿಕೆ ಕಿಟ್‍ಗಳ ಮೂಲಕ ಪರೀಕ್ಷೆ ನಡೆಸಬೇಕು ಮತ್ತು ಎಲ್ಲಾ ಓವರ್‌ಹೆಡ್ ಟ್ಯಾಂಕ್‍ಗಳನ್ನು ನಿಯಮಿತವಾಗಿ ಕ್ಲೋರಿನೇಷನ್ ಮಾಡಬೇಕು ಎಂದು ಆದೇಶಿಸಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳು ಮತ್ತು ಕ್ಯಾನ್ ನೀರು ಪೂರೈಸುವ ವೆಂಡರ್‌ಗಳ ಮೇಲೆ ನಿಗಾವಹಿಸಲು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಅನಧಿಕೃತವಾಗಿ ನೀರು ಮಾರಾಟ ಮಾಡುವವರ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ. ಸಾರ್ವಜನಿಕರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಘಟಕಗಳನ್ನು ತಕ್ಷಣವೇ ಬಂದ್ ಮಾಡಿ ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಒಟ್ಟು 1,239 ಗ್ರಾಮೀಣ ಮತ್ತು 118 ನಗರ ಆರ್.ಒ ಘಟಕಗಳಿದ್ದು, ದುರಸ್ತಿಯಲ್ಲಿರುವ ಘಟಕಗಳನ್ನು ಕೂಡಲೇ ಸರಿಪಡಿಸುವಂತೆ ಆದೇಶ ನೀಡಿದರು.

ಜಿಲ್ಲೆಯ ಗ್ರಾಮೀಣ ಭಾಗದ 176 ಗ್ರಾಮಗಳು ಹಾಗೂ ನಗರ ಪ್ರದೇಶದ 52 ವಾರ್ಡ್‍ಗಳಲ್ಲಿ ಮುಂಬರುವ ಮೂರು ತಿಂಗಳಲ್ಲಿ ನೀರಿನ ಕೊರತೆ ಉಂಟಾಗುವ ಸಾಧ್ಯತೆ ಇದೆ ಎಂದು ಗುರುತಿಸಲಾಗಿದೆ. ನೀರಿನ ಕೊರತೆ ಎದುರಾದಲ್ಲಿ ತಕ್ಷಣವೇ ನೀರು ಪೂರೈಸಲು ಜಿಲ್ಲೆಯಲ್ಲಿ 70 ಖಾಸಗಿ ಬೋರ್‌ವೆಲ್‍ಗಳನ್ನು ಗುರುತಿಸಲಾಗಿದೆ. ಪ್ರಸ್ತುತ ಬಂಗಾರಪೇಟೆ, ಕೆ.ಜಿ.ಎಫ್ ಮತ್ತು ಮಾಲೂರು ತಾಲೂಕಿನ ಒಟ್ಟು 11 ಹಳ್ಳಿಗಳಿಗೆ ಬಾಡಿಗೆ ಬೋರ್‌ವೆಲ್‍ಗಳ ಮೂಲಕ ನೀರು ಪೂರೈಸಲಾಗುತ್ತಿದೆ ಎಂದರು.

ಯರಗೋಳ್ ಅಣೆಕಟ್ಟೆಯಲ್ಲಿ ನೀರು ಲಭ್ಯವಿದ್ದು, ಕೋಲಾರ, ಬಂಗಾರಪೇಟೆ ಮತ್ತು ಮಾಲೂರು ಪಟ್ಟಣಗಳ ಸುಮಾರು 59 ವಾರ್ಡ್‍ಗಳಿಗೆ ದಿನನಿತ್ಯ ನೀರು ಪೂರೈಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವೀಣ್. ಪಿ. ಬಾಗೇವಾಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ರವಿಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ. ಮಂಗಳ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ. ಜಿ.ಎಂ.ರಮೇಶ್, ಹಿರಿಯ ಭೂವಿಜ್ಞಾನಿ ತಿಪ್ಪೆಸ್ವಾಮಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕಿ ಅಂಬಿಕಾ, ನಗರಸಭೆ ಆಯುಕ್ತ ನವೀನ್ ಚಂದ್ರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಚಂದನ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.