
ಕೋಲಾರ: ಬದಲಾಗುತ್ತಿರುವ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಉಂಟಾಗುತ್ತಿರುವ ಮಧುಮೇಹ ಹಾಗೂ ರಕ್ತದೊತ್ತಡದಂತಹ ಕಾಯಿಲೆಗಳನ್ನು ತಡೆಗಟ್ಟಲು ಸಾರ್ವಜನಿಕರು ಸಿರಿಧಾನ್ಯಗಳ ಬಳಸಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಸಲಹೆ ನೀಡಿದರು.
ಕೃಷಿ ಇಲಾಖೆಯ ಸಮಗ್ರ ಕೃಷಿ ಪದ್ಧತಿಯ ಉತ್ಕೃಷ್ಟ ಕೇಂದ್ರದ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಾಗೂ ಮರೆತು ಹೋದ ಖಾದ್ಯಗಳ ಪಾಕಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಿರಿಧಾನ್ಯಗಳು ಕೇವಲ ಆಹಾರವಲ್ಲ; ಅವು ಪೌಷ್ಟಿಕಾಂಶಗಳ ಆಗರ. ಅಕ್ಕಿ ಮತ್ತು ಗೋಧಿಗೆ ಹೋಲಿಸಿದರೆ ಇವುಗಳಲ್ಲಿ ಕ್ಯಾಲ್ಸಿಯಂ, ಕಬ್ಬಿಣದಂಶ, ವಿಟಮಿನ್ ಹಾಗೂ ನಾರಿನಂಶ ಹೇರಳವಾಗಿದೆ. ಜಂಕ್ ಫುಡ್, ಬೇಕರಿ ಪದಾರ್ಥಗಳ ವ್ಯಾಮೋಹದಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಎಚ್ಚರಿಸಿದರು.
ಜಿಲ್ಲೆಯಲ್ಲಿ ಸುಮಾರು 10 ಸಾವಿರ ಸ್ವಸಹಾಯ ಗುಂಪುಗಳಿದ್ದು, 1 ಲಕ್ಷ ಸದಸ್ಯರಿದ್ದಾರೆ. ಇವರ ಮೂಲಕ ಸಿರಿಧಾನ್ಯಗಳ ಮಹತ್ವವನ್ನು ಮನೆ ಮನೆಗೆ ತಲುಪಿಸುವುದು ಸುಲಭ ಎಂದರು.
ಜಂಟಿ ಕೃಷಿ ನಿರ್ದೇಶಕಿ ಜಾವೇದಾ ನಸೀಮಾ ಖಾನಮ್ ಮಾತನಾಡಿ, ‘ಸಿರಿಧಾನ್ಯಗಳಲ್ಲಿ ವೈವಿಧ್ಯಮಯ ಖಾದ್ಯಗಳನ್ನು ತಯಾರಿಸಲಾಗುತ್ತದೆ. ರಾಗಿ ಎಂದರೆ ಕೇವಲ ಮುದ್ದೆ ಅಥವಾ ರೊಟ್ಟಿಯಷ್ಟೇ ಅಲ್ಲದೆ, ಅದರಿಂದ ಶಾವಿಗೆ, ಚಕ್ಕುಲಿ, ಕೋಡುಬಳೆ ಹಾಗೂ ವಿವಿಧ ಸಿಹಿ ತಿಂಡಿಗಳನ್ನು ತಯಾರಿಸಬಹುದು’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ತೋಟಗಾರಿಕೆ ಉಪನಿರ್ದೇಶಕ ಕುಮಾರಸ್ವಾಮಿ, ಕೃಷಿ ಉಪನಿರ್ದೇಶಕ ನಾಗರಾಜ್, ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳು, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎನ್.ಕವನಾ ಹಾಗೂ ಕೃಷಿ ಇಲಾಖೆಯ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.