ಕೋಲಾರ: ‘ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಕೃಷಿ, ಕೂಲಿ ಕಾರ್ಮಿಕರ ಗುರುತಿನ ಚೀಟಿಯನ್ನು ಗ್ರಾಮೀಣ ಪ್ರದೇಶದ ಪ್ರತಿಯೊಬ್ಬ ಕೃಷಿ ಕಾರ್ಮಿಕರಿಗೆ ತಲುಪಿಸುವ ಮೂಲಕ ಸಾಮಾಜಿಕ ಭದ್ರತೆ ಕಲ್ಪಿಸಬೇಕು’ ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.
ತಾಲ್ಲೂಕಿನ ಕ್ಯಾಲನೂರು ಗ್ರಾಮ ಪಂಚಾಯಿತಿಯಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಅಸಂಘಟಿತ ಕಾರ್ಮಿಕರಿಗೆ ಇ–ಶ್ರಮ ಪೋರ್ಟಲ್ ಮೂಲಕ ಗುರುತಿನ ಚೀಟಿ ವಿತರಿಸಿ ಮಾತನಾಡಿ, ‘ಗುರುತಿನ ಚೀಟಿ ಪಡೆಯುವ ಮೂಲಕ ಜೀವ ಭದ್ರತೆಯೊಂದಿಗೆ ಪಿಂಚಣಿ ಸಹ ಪಡೆಯಬಹುದು. ಪ್ರತಿಯೊಬ್ಬ ಕೃಷಿ ಕಾರ್ಮಿಕರು ಈ ಯೋಜನೆಗೆ ಹೆಸರು ನೋಂದಾಯಿಸಬೇಕು’ ಎಂದು ಸಲಹೆ ನೀಡಿದರು.
‘ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿ ಕೂಲಿ, ಕೃಷಿ ಕೈಗಾರಿಕಾ ವಾಹನ ದುರಸ್ತಿ, ಹೈನುಗಾರಿಕೆ, ಕುಕ್ಕುಟ ಉದ್ಯಮ, ಮೀನು ಸಾಕಾಣಿಕೆ ಬಗ್ಗೆ ಕೌಶಲಾಭಿವೃದ್ಧಿ ತರಬೇತಿ ಉಚಿತವಾಗಿ ನೀಡಲಾಗುತ್ತದೆ. ತರಬೇತಿ ಪಡೆದ ಫಲಾನುಭವಿಗಳಿಗೆ ಆರ್ಥಿಕ ಸೌಲಭ್ಯ ಸಹ ಕಲ್ಪಿಸುತ್ತೇವೆ’ ಎಂದು ರಾಜ್ಯ ಪ್ರದೇಶ ಅಸಂಘಟಿತ ಕಾರ್ಮಿಕರ ಪರಿಷತ್ ಅಧ್ಯಕ್ಷ ಕೆ.ವಿ ಸುರೇಶ್ಕುಮಾರ್ ಭರವಸೆ ನೀಡಿದರು.
ಆಟೊ ಚಾಲಕರು, ಕೃಷಿ ಕೂಲಿ ಕಾರ್ಮಿಕರು, ಕ್ಷೌರಿಕರು ಹಾಗೂ ದೋಬಿಗಳಿಗೆ ದಿನಸಿ ವಿತರಿಸಲಾಯಿತು. ಕ್ಯಾಲನೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರತ್ನಮ್ಮ, ಮುಖಂಡರಾದ ಸುರೇಶ್, ಕೆಪಿಎಸ್ ಶಾಲೆ ಉಪಾಧ್ಯಕ್ಷ ಆಂಜಿನಪ್ಪ, ಅಡುಗೆ ಕಾರ್ಮಿಕರ ಸಂಘದ ಉಪಾಧ್ಯಕ್ಷ ಮಂಜು ಪಾಲ್ಗೊಂಡರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.