ADVERTISEMENT

ಕೋಲಾರ | ಮಳೆ: ನಿಯಂತ್ರಣ ಕೊಠಡಿ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 15:43 IST
Last Updated 26 ನವೆಂಬರ್ 2020, 15:43 IST

ಕೋಲಾರ: ‘ನಿವಾರ್’ ಚಂಡಮಾರುತದ ಹಿನ್ನೆಲೆಯಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ.

ನಿವಾರ್ ಚಂಡಮಾರುತದಿಂದ ಜಿಲ್ಲೆಯಲ್ಲಿ 3 ದಿನಗಳ ಕಾಲ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ. ಹೀಗಾಗಿ ಪರಿಸ್ಥಿತಿ ನಿರ್ವಹಣೆಗೆ ನಿಯಂತ್ರಣ ಕೊಠಡಿ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿ ಈಗಾಗಲೇ ದಿನದ 24 ತಾಸೂ ಕಾರ್ಯ ನಿರ್ವಹಿಸುತ್ತಿದೆ. ತಹಶೀಲ್ದಾರ್‌ಗಳು ಮಳೆಯಿಂದ ಸಾರ್ವಜನಿಕ ಆಸ್ತಿ, ಜನ ಹಾಗೂ ಜಾನುವಾರುಗಳ ಜೀವಕ್ಕೆ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ಆದ ಹಾನಿಯ ಬಗ್ಗೆ ಪ್ರತಿನಿತ್ಯ ವರದಿ ಸಲ್ಲಿಸಬೇಕು ಎಂದು ಆದೇಶಿಸಿದ್ದಾರೆ.

ADVERTISEMENT

ಮಳೆಯಿಂದ ಅಪಾಯಕ್ಕೆ ಸಿಲುಕಿದ ಸಾರ್ವಜನಿಕರು ನೆರವಿಗಾಗಿ ನಿಯಂತ್ರಣ ಕೊಠಡಿ ಸಂಖ್ಯೆ 1077 ಅಥವಾ ದೂರವಾಣಿ ಸಂಖ್ಯೆ 08152 243506ಕ್ಕೆ ಕರೆ ಮಾಡಬಹುದು. ನಿಯಂತ್ರಣ ಕೊಠಡಿ ಸಿಬ್ಬಂದಿ ಎನ್.ಗೋವಿಂದರಾಜು ಅವರ ಮೊಬೈಲ್ ಸಂಖ್ಯೆ 9740050061 ಅಥವಾ ವಿ.ಮಂಜುನಾಥ್ ಅವರ ಮೊಬೈಲ್ ಸಂಖ್ಯೆ 9141577499ಕ್ಕೂ ಕರೆ ಮಾಡಬಹುದು ಎಂದು ಹೇಳಿದ್ದಾರೆ.

ತಹಶೀಲ್ದಾರ್‌ ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಆರಂಭಿಸಿ ಮಳೆ ಅನಾಹುತಕ್ಕೆ ಸಂಬಂಧಿಸಿದ ದೂರಿಗೆ ತಕ್ಷಣವೇ ಸ್ಪಂದಿಸಬೇಕು. ತಹಶೀಲ್ದಾರ್‌ಗಳು, ಉಪ ತಹಶೀಲ್ದಾರ್‌ಗಳು, ಗ್ರಾಮ ಲೆಕ್ಕಾಧಿಕಾರಿಗಳು, ರಾಜಸ್ವ ನಿರೀಕ್ಷಕರು ಕೇಂದ್ರ ಸ್ಥಾನದಲ್ಲಿ ಇರಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಒಳಗೊಂಡು ರಕ್ಷಣಾ ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.