ಮಾಲೂರು: ತಾಲ್ಲೂಕಿನ ಎಟ್ಟಿಕೊಡಿ ಗ್ರಾಮದಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಸಿಸಿ ರಸ್ತೆಯಲ್ಲಿ ಮಳೆ ನೀರು ತುಂಬಿಕೊಂಡಿದ್ದು, ಗ್ರಾಮಸ್ಥರು ಸಂಚರಿಸಲು ಪರದಾಡುವಂತಾಗಿದೆ.
ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿಯ ಎಟ್ಟಿಕೊಡಿ ಗ್ರಾಮದಲ್ಲಿ ಸುಮಾರು 400 ಕುಟುಂಬಗಳು ವಾಸವಿದ್ದು, ಸುಮಾರು 680 ಮತದಾರರಿದ್ದಾರೆ.
₹ 3 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸಿಸಿ ರಸ್ತೆ ಪಕ್ಕದಲ್ಲಿ ಚರಂಡಿ ನಿರ್ಮಾಣ ಮಾಡದ ಕಾರಣ ಮಳೆಯ ನೀರು ರಸ್ತೆಯಲ್ಲೇ ನಿಲ್ಲುತ್ತದೆ. ಮಳೆ ಬಂದು ವಾರದ ನಂತರವೂ ನೀರು ರಸ್ತೆಯಲ್ಲಿಯೇ ನಿಲ್ಲುತ್ತದೆ ಎಂದು ಮುಖಂಡ ಎಲ್. ಜಯರಾಂ ಹೇಳಿದರು.
ಎಟ್ಟಿಕೊಡಿ ಗ್ರಾಮದಲ್ಲಿ ಸಮರ್ಪಕ ಚರಂಡಿ ಇಲ್ಲದೆ ಕೊಳಚೆ ನೀರು ಮನೆಗಳ ಮುಂದೆ ಹರಿದು ಹೋಗುತ್ತದೆ. ಚರಂಡಿಗಳು ಸ್ವಚ್ಛತೆ ಇಲ್ಲದೆ ಗಿಡ ಗೆಂಟೆಗಳು ಬೆಳೆದಿವೆ. ನೀರು ಹರಿಯದಿರುವುದರಿಂದ ಸೊಳ್ಳೆ ಕಾಟ ಹೆಚ್ಚಿದೆ. ಜನರಲ್ಲಿ ಸಾಂಕ್ರಾಮಿಕ ರೋಗ ಭೀತಿಯು ಹೆಚ್ಚಿದೆ. ಈ ಬಗ್ಗೆ ಅನೇಕ ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿ ಆರ್. ಮುನಿರಾಜು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.