ADVERTISEMENT

ಜಿಲ್ಲೆಯಲ್ಲಿ ಕಳೆಗಟ್ಟಿದ ರಾಮನವಮಿ ಆಚರಣೆ

ಶ್ರೀರಾಮ ನಾಮ ಸ್ಮರಣೆ: ಪಾನಕ ಕೋಸಂಬರಿ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 14:50 IST
Last Updated 10 ಏಪ್ರಿಲ್ 2022, 14:50 IST
ಶ್ರೀರಾಮನವಮಿ ಅಂಗವಾಗಿ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭಕ್ತರಿಗೆ ಭಾನುವಾರ ಪಾನಕ ಮತ್ತು ಮಜ್ಜಿಗೆ ವಿತರಿಸಲಾಯಿತು
ಶ್ರೀರಾಮನವಮಿ ಅಂಗವಾಗಿ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಭಕ್ತರಿಗೆ ಭಾನುವಾರ ಪಾನಕ ಮತ್ತು ಮಜ್ಜಿಗೆ ವಿತರಿಸಲಾಯಿತು   

ಕೋಲಾರ: ಜಿಲ್ಲೆಯಾದ್ಯಂತ ಭಾನುವಾರ ರಾಮನವಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಶ್ರೀರಾಮ ದೇವಸ್ಥಾನ ಮತ್ತು ಆಂಜನೇಯ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆ ನಡೆಯಿತು. ಭಕ್ತರು ಶ್ರೀರಾಮ ಸ್ಮರಣೆಯಲ್ಲಿ ತೊಡಗಿದ್ದ ದೃಶ್ಯ ಎಲ್ಲೆಡೆ ಕಂಡುಬಂತು.

ದೊಡ್ಡಪೇಟೆಯ ಶ್ರೀರಾಮ ದೇವಸ್ಥಾನ, ವೆಂಕಟರಮಣಸ್ವಾಮಿ, ಬ್ರಾಹ್ಮಣರ ಬೀದಿಯ ಕೋದಂಡರಾಮ, ದೊಡ್ಡ ಆಂಜನೇಯಸ್ವಾಮಿ, ಕುರುಬರಪೇಟೆಯ ಪಂಚಮುಖಿ ಗಣಪತಿ, ಪಿ.ಸಿ ಬಡಾವಣೆಯ ಕೋದಂಡರಾಮಸ್ವಾಮಿ, ನಗರದೇವತೆ ಕೋಲಾರಮ್ಮ ದೇವಾಲಯ, ಕೊಂಡರಾಜನಹಳ್ಳಿ ಆಂಜನೇಯಸ್ವಾಮಿ ದೇವಾಲಯವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು.

ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಶ್ರೀರಾಮದೇವರ ಗುಡಿಯಲ್ಲಿ ಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಿತು. ಇಡೀ ದೇವಾಲಯವನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಭಕ್ತರು ದೇವಾಲಯಗಳಲ್ಲಿ ದೇವರ ದರ್ಶನಕ್ಕಾಗಿ ಮುಂಜಾನೆಯಿಂದಲೇ ಸಾಲುಗಟ್ಟಿ ನಿಂತಿದ್ದರು.

ADVERTISEMENT

ದೇವಾಲಯಗಳಲ್ಲಿ ಅಭಿಷೇಕ, ಮಹಾ ಸುದರ್ಶನ ಹೋಮ, ರಾಮತಾರಕ ಹೋಮ, ರಾಮಾಯಣ ಪಾರಾಯಣ, ವೇದ ಪಾರಾಯಣ, ಮಹಾ ಮಂಗಳಾರತಿ ನೆರವೇರಿತು. ಹಲವು ಭಕ್ತರು ಉಪವಾಸ ವ್ರತ ಆಚರಿಸಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಪಾನಕ, ಕೋಸಂಬರಿ, ಮಜ್ಜಿಗೆ ಸೇವಿಸಿದರು.

ಪಾನಕ ವಿತರಣೆ: ವಿವಿಧ ಸಂಘಟನೆಗಳ ಸದಸ್ಯರು ಹಾಗೂ ವ್ಯಾಪಾರಿಗಳು ನಗರದ ಪ್ರಮುಖ ವೃತ್ತ ಮತ್ತು ರಸ್ತೆಗಳಲ್ಲಿ ಪೆಂಡಾಲ್‌ ಹಾಕಿ ಸಾರ್ವಜನಿಕರಿಗೆ ಮಜ್ಜಿಗೆ, ಪಾನಕ, ಕೋಸಂಬರಿ ವಿತರಿಸಿದರು. ಬೇಸಿಗೆಯ ಸುಡು ಬಿಸಿಲಿನಲ್ಲಿ ಬಸವಳಿದಿದ್ದ ಜನ ಮಜ್ಜಿಗೆ, ಪಾನಕ ಸೇವಿಸಿ ಸಂತೃಪ್ತರಾದರು.

ಶ್ರೀರಾಮ ಭಜನೆ, ಹನುಮಾನ್ ಕೀರ್ತನೆ, ಸಂಗೀತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ದೇವಾಲಯಗಳ ಬಳಿ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.