ಶ್ರೀನಿವಾಸಪುರ: ಕೇಂದ್ರ ಬಿಜೆಪಿ ಸರ್ಕಾರ ಸುಂಕ ರಹಿತ ಹಾಲು ಹಾಗೂ ಹಾಲಿನ ಉತ್ಪನ್ನಗಳ ಆಮದಿಗೆ ಒಪ್ಪಿಗೆ ಸೂಚಿಸುವುದರ ಮೂಲಕ, ದೇಶದ ಹಾಲು ಉತ್ಪಾದಕರು ಬೀದಿ ಪಾಲಾಗುವಂತೆ ಮಾಡಿದೆ. ಯಾವುದೇ ಕಾರಣಕ್ಕೂ ಆರ್ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು ಎಂದು ಒತ್ತಾಯಿಸಿ, ನ.4 ರಂದು ದೇಶದಾದ್ಯಂತ ಎಲ್ಲ ತಾಲ್ಲೂಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗಳ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ತಿಳಿಸಿದರು.
ಪಟ್ಟಣದಲ್ಲಿ ಗುರುವಾರ ಏರ್ಪಡಿಸಿದ್ದ ಪ್ರಾಂತ ರೈತ ಸಂಘದ ಜಿಲ್ಲಾ ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ ಒಪ್ಪಂದ ಜಾರಿಯಾದರೆ, ರಾಜ್ಯದ 35 ಲಕ್ಷ ಕುಟುಂಬಗಳು ಸೇರಿದಂತೆ, ದೇಶದ 10 ಕೋಟಿಗಿಂತ ಹೆಚ್ಚಿನ ಸಂಖ್ಯೆಯ ಹಾಲು ಉತ್ಪಾದರು, ಕೃಷಿ ಕೂಲಿಕಾರರು ಹಾಗೂ ಈ ಕ್ಷೇತ್ರದಲ್ಲಿ ತೊಡಗಿರುವ ನೌಕರರು ಅನ್ನದ ಆಸರೆ ಕಳೆದುಕೊಳ್ಳುತ್ತಾರೆ ಎಂದು ಹೇಳಿದರು.
ದೇಶದಲ್ಲಿ ಕ್ಷೀರೋತ್ಪಾದನೆ ಈಗಾಗಲೇ ನಷ್ಟದ ಉದ್ಯಮವಾಗಿ ಪರಿಣಮಿಸಿದೆ. ಉತ್ಪಾದನಾ ವೆಚ್ಚವೂ ಸಿಗುತ್ತಿಲ್ಲ. ಆದ್ದರಿಂದ ಹಾಲಿನ ಬೆಲೆಯನ್ನು ಹೆಚ್ಚಿಸುವಂತೆ ಒತ್ತಾಯಿಸುತ್ತಿರುವಾಗ, ಶೇ 64 ರಷ್ಟು ಆಮದು ಸುಂಕವನ್ನು ತೆಗೆಯುವುದರ ಮೂಲಕ ಅಗ್ಗದ ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತರಿಸಿಕೊಳ್ಳಲು ಮುಂದಾಗಿರುವುದು ರೈತ ವಿರೋಧಿ ಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್ ಕುಮಾರ್, ಮುಖಂಡರಾದ ಎನ್.ವೀರಪ್ಪರೆಡ್ಡಿ, ರಾಮಣ್ಣ, ವೇಣುಗೋಪಾಲ್, ನಾಗರಾಜ್, ನಾಗರಾಜರೆಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.