
ನವದೆಹಲಿಯ ಕರ್ತವ್ಯಪಥದಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್
ಪಿಐಬಿ ಚಿತ್ರ
ಕೋಲಾರ: ಜಿಲ್ಲಾಡಳಿತದಿಂದ ಜ.26 ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಣರಾಜ್ಯೋತ್ಸವವನ್ನು ನಗರದ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಬೆಳಿಗ್ಗೆ 7ಕ್ಕೆ ನಗರದ ಕ್ಲಾಕ್ ಟವರ್ನಲ್ಲಿ ಧ್ವಜಾರೋಹಣ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುವರು. ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಅಧಿಕಾರಿಗಳು ಸಿಬ್ಬಂದಿ ಜೊತೆ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಸೂಚಿಸಿದರು.
ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಛತೆ, ಕಚೇರಿಗಳಲ್ಲಿ ಹಾಗೂ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.
ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ. ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಕವಾಯತು ತಂಡಗಳ ಪಥ ಸಂಚಲನಕ್ಕೆ ವ್ಯವಸ್ಥೆ ಮಾಡಿಕೊಳ್ಳಿ ಎಂದರು.
ಸಂಜೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ. ಬಾಗೇವಾಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಜಯ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.