ಕೋಲಾರ: ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಕೊಟ್ಟಿರುವ ಮೊಟ್ಟೆಗೆ ಖರ್ಚು ಮಾಡಿರುವ ಹಣವನ್ನು ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮಹಾಮಂಡಳಿಯ ಜಿಲ್ಲಾ ಘಟಕದ ಅಧ್ಯಕ್ಷೆ ಎಂ. ಸರಸ್ಪತಮ್ಮ ತಿಳಿಸಿದ್ದಾರೆ.
ಸುಮಾರು 6 ತಿಂಗಳಿನಿಂದ ಮೊಟ್ಟೆ ಬಿಲ್ ಪಾವತಿ ಮಾಡಿಲ್ಲ. ಈ ಸಂಬಂಧ ಕಾರ್ಯಕರ್ತೆಯರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅನುದಾನವಿಲ್ಲವೆಂದು ಸಬೂಬು ಹೇಳುತ್ತಾರೆ. ಕಾರ್ಯಕರ್ತೆಯರು ಸ್ವಂತ ಹಣದಲ್ಲಿ ಮೊಟ್ಟೆ ಖರೀದಿಸಿ ಮಕ್ಕಳಿಗೆ ಕೊಡುವ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.
ಮಾಲೂರು ತಾಲ್ಲೂಕು ಹೊರತುಪಡಿಸಿ ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆಯ ಬಿಲ್ ಬಿಡುಗಡೆ ಮಾಡಿಲ್ಲ. ಡಿಸೆಂಬರ್ ಅಂತ್ಯದೊಳಗೆ ಬಾಕಿ ಹಣವನ್ನು ಖಾತೆಗೆ ಜಮಾ ಮಾಡದಿದ್ದರೆ ಫಲಾನುಭವಿಗಳಿಗೆ ಮೊಟ್ಟೆ ವಿತರಣೆ ಸ್ಥಗಿತಗೊಳಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಬಿಲ್ ಬಾಕಿ ಉಳಿಸಿಕೊಂಡಿರುವ ಬಗ್ಗೆ ಗಮನ ಹರಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಾಣ ಮಾಡಬೇಕು. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಪರಿಹಾರಕ್ಕೆ ಸ್ಪಂದಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.