ADVERTISEMENT

ಬಾಕಿ ವೇತನ ಬಿಡುಗಡೆಗೆ ಆಗ್ರಹ

ಜಿ.ಪಂ ಎದುರು ಗ್ರಾಮ ಪಂಚಾಯಿತಿ ನೌಕರರ ಸಂಘದ ಧರಣಿ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 15:14 IST
Last Updated 15 ಜುಲೈ 2021, 15:14 IST
ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಕೋಲಾರ ಜಿಲ್ಲಾ ಪಂಚಾಯಿತಿ ಎದುರು ಗುರುವಾರ ಧರಣಿ ನಡೆಸಿದರು
ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಸದಸ್ಯರು ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಕೋಲಾರ ಜಿಲ್ಲಾ ಪಂಚಾಯಿತಿ ಎದುರು ಗುರುವಾರ ಧರಣಿ ನಡೆಸಿದರು   

ಕೋಲಾರ: ಬಾಕಿ ವೇತನ ಬಿಡುಗಡೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘ ಸದಸ್ಯರು ಸಿಐಟಿಯು ನೇತೃತ್ವದಲ್ಲಿ ಇಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಎದುರು ಧರಣಿ ನಡೆಸಿದರು.

‘ಗ್ರಾ.ಪಂ ನೌಕರರನ್ನು ಸೌಕರ್ಯಗಳಿಂದ ವಂಚಿಸಲಾಗುತ್ತಿದೆ. ಸಕಾಲಕ್ಕೆ ವೇತನ ನೀಡದೆ ಶೋಷಿಸಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಗ್ರಾ.ಪಂ ನೌಕರರ ಬಗ್ಗೆ ಸ್ವಲ್ಪವೂ ಕಾಳಜಿಯಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯ ಬಹುಪಾಲು ಗ್ರಾ.ಪಂ ನೌಕರರಿಗೆ 2017ರಿಂದ ಸಂಬಳ ಕೊಟ್ಟಿಲ್ಲ. ಪಿಡಿಒಗಳು ನೌಕರರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಈ ಶೋಷಣೆ ಪ್ರಶ್ನಿಸಿದರೆ ಕೆಲಸದಿಂದ ವಜಾಗೊಳಿಸುವುದಾಗಿ ಬೆದರಿಸುತ್ತಾರೆ. ಕಡಿಮೆ ವೇತನ ನೀಡಿ ಹೆಚ್ಚಿನ ಅವಧಿವರೆಗೆ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಸಿಐಟಿಯು ಜಿಲ್ಲಾ ಘಟಕದ ಗೌರವಾಧ್ಯಕ್ಷ ಗಾಂಧಿನಗರ ನಾರಾಯಣಸ್ವಾಮಿ ದೂರಿದರು.

ADVERTISEMENT

‘ದೇಶದೆಲ್ಲೆಡೆ ಕೋವಿಡ್‌ ಭೀತಿ ಹೆಚ್ಚಿದೆ. ಆತಂಕದ ನಡುವೆಯೂ ಗ್ರಾ.ಪಂ ನೌಕರರು ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. ಆದರೆ, ಅಧಿಕಾರಿಗಳಿಗೆ ನೌಕರರ ಕಷ್ಟದ ಅರಿವಿಲ್ಲ. ವೇತನ ನೀಡದ ಕಾರಣ ನೌಕರರು ಬಡ್ಡಿ ಸಾಲ ಮಾಡಿ ಜೀವನ ಸಾಗಿಸುತ್ತಿದ್ದಾರೆ. ವೇತನ ಕೇಳಿದರೆ ಅಧಿಕಾರಿಗಳು ಖಜಾನೆಯಿಂದ ಹಣ ಬಿಡುಗಡೆಯಾಗಿಲ್ಲ ಎಂದು ಸಬೂಬು ಹೇಳುತ್ತಾರೆ’ ಎಂದು ಕಿಡಿಕಾರಿದರು.

ದುರ್ಬಳಕೆ: ‘ನೌಕರರನ್ನು ಹಗಲಿರುಳು ದುಡಿಸಿಕೊಳ್ಳುವ ಅಧಿಕಾರಿಗಳು ಮೂಲಸೌಕರ್ಯ ಕಲ್ಪಿಸದೆ ಶೋಷಿಸುತ್ತಿದ್ದಾರೆ. ಮೂಲಸೌಕರ್ಯವಿಲ್ಲದೆ ಕಾರ್ಯ ನಿರ್ವಹಿಸಲು ನೌಕರರಿಗೆ ಕಷ್ಟವಾಗಿದೆ. ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ವೇತನ ನೀಡಿ ನೌಕರರನ್ನು ವಂಚಿಸುತ್ತಿದ್ದಾರೆ. ಅಧಿಕಾರಿಗಳು ನೌಕರರ ವೇತನದ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಧರಣಿನಿರತರು ಆರೋಪಿಸಿದರು.

‘ಸರ್ಕಾರ 14ನೇ ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಸಂಬಳ ಕೊಡುವಂತೆ ಆದೇಶಿಸಿದೆ. ಪಿಡಿಒಗಳು ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡದೆ ಸಂಬಳ ಬಾಕಿ ಉಳಿಸಿಕೊಂಡಿದ್ದಾರೆ. ಸಂಬಳ ನೀಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.

ಬಡ್ತಿ ನೀಡಬೇಕು: ‘ಸುಪ್ರೀಂ ಕೋರ್ಟ್ ಆದೇಶದಂತೆ ನೌಕಕರಿಗೆ ಪಿಡಿಒ ಹುದ್ದೆಗೆ ಬಡ್ತಿ ನೀಡಬೇಕು. ಪ್ರತಿ ತಿಂಗಳ 5ನೇ ತಾರೀಖಿನೊಳಗೆ ವೇತನ ಪಾವತಿಸಬೇಕು. ವಿಮೆ ಸೌಲಭ್ಯ ಕಲ್ಪಿಸಬೇಕು. ಗ್ರಾ.ಪಂ ನೌಕರರಿಗೆ ಸಂಬಳ ನೀಡದ ಪಿಡಿಒಗಳನ್ನು ಅಮಾನತು ಮಾಡಬೇಕು. ಸರ್ಕಾರದ ಆದೇಶದಂತೆ ಸ್ಥಳೀಯ ತೆರಿಗೆ ಸಂಗ್ರಹದಲ್ಲಿ ಶೇ 40ರಷ್ಟು ಹಣವನ್ನು ಕಡ್ಡಾಯವಾಗಿ ಸಿಬ್ಬಂದಿಯ ವೇತನಕ್ಕೆ ಮೀಸಲಿಡಬೇಕು’ ಎಂದು ಒತ್ತಾಯಿಸಿದರು.

‘ನಿವೃತ್ತ ಸಿಬ್ಬಂದಿಗೆ ಗ್ರಾಚ್ಯೂಟಿ ಪಾವತಿಸಬೇಕು. ಕೊರೊನಾ ಸೋಂಕಿನಿಂದ ಮೃತಪಟ್ಟ ಗ್ರಾ.ಪಂ ನೌಕರರಿಗೆ ₹ 30 ಲಕ್ಷ ಪರಿಹಾರ ಮತ್ತು ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡಬೇಕು. ಸೇವೆಯಲ್ಲಿ ಮೃತಪಟ್ಟ ನೌಕರರ ಕುಟುಂಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷ ಅಮರನಾರಾಯಣ, ಕಾರ್ಯದರ್ಶಿ ಯಲ್ಲಪ್ಪ, ಖಜಾಂಚಿ ಕೇಶವರಾವ್, ಸದಸ್ಯರಾದ ಶ್ರೀನಿವಾಸ್, ರಾಮಚಂದ್ರಪ್ಪ, ಕೃಷ್ಣಪ್ಪ, ವೆಂಕಟರಾಮೇಗೌಡ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.