ಕೋಲಾರ: ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 75ನ್ನು ಷಟ್ಪಥ ರಸ್ತೆಯಾಗಿ ಮಾಡುವಂತೆ ಸಂಸದ ಎಸ್.ಮುನಿಸ್ವಾಮಿ ಅವರು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿಯಾದ ಮುನಿಸ್ವಾಮಿ, ‘ಬೆಂಗಳೂರಿನ ಕೆ.ಆರ್.ಪುರದಿಂದ ಹೊಸಕೋಟೆ ಮಾರ್ಗವಾಗಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75 ಕೋಲಾರ ಮತ್ತು ಮುಳಬಾಗಿಲು ಮೂಲಕ ಹಾದು ಹೋಗುತ್ತದೆ. ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಈ ಹೆದ್ದಾರಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ವಾಹನ ದಟ್ಟಣೆ ಹೆಚ್ಚಿದೆ’ ಎಂದು ತಿಳಿಸಿದರು.
‘4 ಪಥದ ರಸ್ತೆಯಾಗಿರುವ ಹೆದ್ದಾರಿ 75ನ್ನು 2013ರಲ್ಲಿ ನಿರ್ಮಿಸಲಾಯಿತು. ಆಗ ಈ ಭಾಗದಲ್ಲಿ ವಾಹನ ದಟ್ಟಣೆ ಕಡಿಮೆಯಿತ್ತು. ಆದರೆ, ಈಗಿನ ಪರಿಸ್ಥಿತಿ ಭಿನ್ನವಾಗಿದೆ. ಆಂಧ್ರಪ್ರದೇಶ, ತಿರುಪತಿಗೆ ಹೋಗುವ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಹೆದ್ದಾರಿ ಮೂಲಕ ಸಂಚರಿಸುತ್ತಿವೆ. ಹೆದ್ದಾರಿಯನ್ನು ಷಟ್ಪಥ ರಸ್ತೆಯಾಗಿ ಮೇಲ್ದೆರ್ಜೆಗೆ ಏರಿಸಿದರೆ ಸಂಚಾರ ವ್ಯವಸ್ಥೆ ಸುಧಾರಿಸಲಿದೆ’ ಎಂದು ಹೇಳಿದರು.
‘ಬೆಂಗಳೂರಿನ ಕೆ.ಆರ್.ಪುರದಿಂದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ನಂಗಲಿ ಗಡಿವರೆಗೆ ಹೆದ್ದಾರಿಯನ್ನು ಷಟ್ಪಥ ರಸ್ತೆಯಾಗಿ ಮಾಡಬೇಕು’ ಎಂದು ಕೋರಿದರು. ಮನವಿಗೆ ಸಚಿವ ಗಡ್ಕರಿ ಸಕರಾತ್ಮಕವಾಗಿ ಸ್ಪಂದಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಂಸದ ಪ್ರತಾಪ್ ಸಿಂಹ, ರಾಜ್ಯ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.