ADVERTISEMENT

ಸಂಪನ್ಮೂಲ ಕೇಂದ್ರದ ಕಾಮಗಾರಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2020, 10:46 IST
Last Updated 21 ಜನವರಿ 2020, 10:46 IST
ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಸೋಮವಾರ ಸಂಪನ್ಮೂಲ ಕೇಂದ್ರ ಕಟ್ಟಡದ ಕಾಮಗಾರಿ ಪರಿಶೀಲಿಸಿದರು.
ಕೋಲಾರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌ ಸೋಮವಾರ ಸಂಪನ್ಮೂಲ ಕೇಂದ್ರ ಕಟ್ಟಡದ ಕಾಮಗಾರಿ ಪರಿಶೀಲಿಸಿದರು.   

ಕೋಲಾರ: ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸಂಪನ್ಮೂಲ ಕೇಂದ್ರ ಕಟ್ಟಡದ ಕಾಮಗಾರಿಯನ್ನು ಜಿ.ಪಂ ಅಧ್ಯಕ್ಷ ಸಿ.ಎಸ್.ವೆಂಕಟೇಶ್‌ ಸೋಮವಾರ ಪರಿಶೀಲನೆ ಮಾಡಿದರು.

‘ಕಟ್ಟಡ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕಾಮಗಾರಿ ಕಳಪೆಯಾದರೆ ಸಂಬಂಧಪಟ್ಟ ಎಂಜಿನಿಯರ್‌ಗಳ ಮುಲಾಜಿಲ್ಲದೆ ವಿರುದ್ಧ ಶಿಸ್ತುಕ್ರಮ ಜರುಗಿಸಿ. ಆಗ ಗುತ್ತಿಗೆದಾರರು ದಾರಿಗೆ ಬರುತ್ತಾರೆ. ನಿಗದಿತ ಕಾಲಮಿತಿಯೋಗೆ ಕಾಮಗಾರಿ ಮುಗಿಸಬೇಕು’ ಎಂದು ವೆಂಕಟೇಶ್‌ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷರು, ‘ಸುಮಾರು ಒಂದು ವರ್ಷದಿಂದ ಸಂಪನ್ಮೂಲ ಕೇಂದ್ರ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ಕಾಮಗಾರಿ ಗುಣಮಟ್ಟ ಪರಿಶೀಲಿಸಿ, ಶೀಘ್ರವೇ ಕೆಲಸ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇನೆ’ ಎಂದರು.

ADVERTISEMENT

‘₹ 1.10 ವೆಚ್ಚದಲ್ಲಿ ಕಟ್ಟಡದ ಕಾಮಗಾರಿ ನಡೆಸಲಾಗುತ್ತಿದೆ. ನೆಲ ಮಹಡಿ ಸೇರಿದಂತೆ 4 ಅಂತಸ್ತಿನ ಕಟ್ಟಡದ ಕೆಲಸ ನಡೆಯುತ್ತಿದೆ. ಜಿ.ಪಂ ಸದಸ್ಯರು ಮತ್ತು ಅಧಿಕಾರಿಗಳಿಗೆ ತರಬೇತಿ ನೀಡಲು, ಕೆಲ ವಿಭಾಗಗಳಿಗೆ ಇಲ್ಲಿ ಕಚೇರಿ ವ್ಯವಸ್ಥೆ ಮಾಡಲಾಗುವುದು. ಕಟ್ಟಡ ಕಾಮಗಾರಿ ಗುತ್ತಿಗೆಯನ್ನು ಭೂಸೇನಾ ನಿಗಮಕ್ಕೆ ನೀಡಲಾಗಿದ್ದು, ನಿಗಮದ ಸಿಬ್ಬಂದಿ ಗುಣಮಟ್ಟ ಕಾಪಾಡುವುದಿಲ್ಲ ಎಂಬ ದೂರುಗಳಿವೆ. ಕಾಮಗಾರಿಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸುತ್ತಿದ್ದೇವೆ’ ಎಂದು ಮಾಹಿತಿ ನೀಡಿದರು.

ಆಡಳಿತ ಸುಧಾರಣೆ: ‘ಜಿ.ಪಂ ಅಧ್ಯಕ್ಷನಾದ ನಂತರ ಪಿಡಿಒ, ಹಾಸ್ಟೆಲ್ ವಾರ್ಡನ್‌, ಅಧಿಕಾರಿಗಳ ಸಭೆ ನಡೆಸಿದ್ದೇನೆ. ಆಡಳಿತ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಕೆಲ ಗ್ರಾಮಗಳಿಗೆ, ಹಾಸ್ಟೆಲ್‌ಗಳಿಗೆ ಭೇಟಿ ನೀಡಿದಾಗ ಸಮಸ್ಯೆ ಕಂಡುಬಂದಿವೆ. ಸಮಸ್ಯೆ ನಿವಾರಣೆ ಮಾಡುವಂತೆ ಸೂಚಿಸಿದಾಗ ಅಧಿಕಾರಿಗಳು ಸ್ಪಂದಿಸಿ ಕೆಲಸ ಮಾಡಿದ್ದಾರೆ’ ಎಂದು ವಿವರಿಸಿದರು.

ಭೂಸೇನಾ ನಿಗಮದ ಎಂಜಿನಿಯರ್‌ಗಳಾದ ಭಾಸ್ಕರ್, ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.