ADVERTISEMENT

ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 15:13 IST
Last Updated 15 ಸೆಪ್ಟೆಂಬರ್ 2020, 15:13 IST
ಶಾಸಕ ಕೆ.ಶ್ರೀನಿವಾಸಗೌಡ ಕೋಲಾರದಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಕುಂದು ಕೊರತೆ ಸಭೆ ನಡೆಸಿದರು.
ಶಾಸಕ ಕೆ.ಶ್ರೀನಿವಾಸಗೌಡ ಕೋಲಾರದಲ್ಲಿ ಮಂಗಳವಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಕುಂದು ಕೊರತೆ ಸಭೆ ನಡೆಸಿದರು.   

ಕೋಲಾರ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ನರೇಗಾ ಯೋಜನೆ ಸಮರ್ಪಕವಾಗಿ ಬಳಿಸಿಕೊಳ್ಳಿ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳ ಕುಂದು ಕೊರತೆ ಸಭೆಯಲ್ಲಿ ಮಾತನಾಡಿ, ‘ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಾರದು. ಅಧಿಕಾರಿಗಳು ಸಮಸ್ಯೆ ವರದಿಯಾದರೆ ತಕ್ಷಣ ಸ್ಪಂದಿಸಬೇಕು’ ಎಂದು ತಿಳಿಸಿದರು.

‘ಕ್ಷೇತ್ರದ ಹಲವೆಡೆ ಸರ್ಕಾರಿ ಜಮೀನುಗಳ ಒತ್ತುವರಿ ಆಗಿದೆ. ಈ ಒತ್ತುವರಿ ತೆರವು ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯಬೇಡಿ. ನಿರ್ದಾಕ್ಷಿಣ್ಯವಾಗಿ ಒತ್ತುವರಿ ತೆರವುಗೊಳಿಸಿ ಸರ್ಕಾರಿ ಜಮೀನು ರಕ್ಷಿಸಿ. ಗ್ರಾಮೀಣ ಭಾಗದ ರಸ್ತೆ, ಚರಂಡಿ, ರಾಜೀವ್‌ಗಾಂಧಿ ಸೇವಾ ಕೇಂದ್ರ ಹಾಗೂ ಅಂಗನವಾಡಿ ಕಟ್ಟಡ ನಿರ್ಮಾಣ ಕಾರ್ಯವನ್ನು ನರೇಗಾ ಅಡಿ ನಿರ್ವಹಿಸಿ’ ಎಂದು ಹೇಳಿದರು.

ADVERTISEMENT

‘ಚಿನ್ನಾಪುರ ಕೆರೆ ಅಂಗಳದಲ್ಲಿನ ಜಾಲಿ ಮರಗಳನ್ನು ಶೀಘ್ರವೇ ತೆರವುಗೊಳಿಸಿ. ಉಪಯುಕ್ತ ಗಿಡ ಮರ ಬೆಳೆಸಲು ಆದ್ಯತೆ ನೀಡಿ. ತಾಲ್ಲೂಕಿನಲ್ಲಿ ಖಾಲಿ ಸರ್ಕಾರಿ ಜಮೀನುಗಳನ್ನು ಗುರುತಿಸಿ ಗಿಡ ನೆಡಬೇಕು. ಮುಂದಿನ ಒಂದು ವರ್ಷದೊಳಗೆ ಅರಣ್ಯ ಸಂಪತ್ತು ಸಾಧ್ಯವಾದಷ್ಟು ವೃದ್ಧಿ ಆಗಿರಬೇಕು’ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎನ್.ವಿ ಬಾಬು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.