ಶ್ರೀನಿವಾಸಪುರ: ಕೇಂದ್ರ ಸರ್ಕಾರ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ದೆಹಲಿಯಲ್ಲಿ
ಸರ್ಕಾರದ ರೈತ ವಿರೋಧಿ ತಿದ್ದುಪಡಿಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ದೌರ್ಜನ್ಯ ನಡೆಸುವುದರ ಮೂಲಕ ತನ್ನ ರೈತ ವಿರೋಧಿ ನಿಲುವನ್ನು ಸಾಬೀತುಪಡಿಸಿದೆ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.
ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್ನಲ್ಲಿ ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ವಿರೋಧಿಸಿ ಶನಿವಾರ ರಸ್ತೆ ತಡೆ ನಡೆಸುತ್ತಿದ್ದ ರೈತ ಸಂಘಟನೆಗಳ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ರೈತ ದೇಶದ ಬೆನ್ನೆಲುಬು ಎಂಬುದನ್ನು ಮರೆತು, ಕಾರ್ಪೋರೇಟ್ ಕಂಪನಿಗಳ ಪರವಾಗಿ ಭೂ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸಿರುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ದೌರ್ಜನ್ಯ ಎಸಗಲಾಗಿದೆ. ಪೊಲೀಸ್ ಬಲ ಬಳಸಿ ಅನಾಗರಿಕವಾಗಿ ನಡೆಸಿಕೊಳ್ಳಲಾಗಿದೆ. ಇದು ಖಂಡನೀಯ ಕೃತ್ಯವಾಗಿದೆ. ಸಮಾಜದ ಎಲ್ಲ ವರ್ಗದ ಜನರು ಇದನ್ನು ಖಂಡಿಸಬೇಕು. ರೈತರ ಪರವಾಗಿ ಧ್ವನಿ ಎತ್ತಬೇಕು ಎಂದು ಹೇಳಿದರು.
ರಾಜ್ಯ ರೈತ ಸಂಘ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವಲ್ಲಿ ನಡೆದ ರಸ್ತೆ ತಡೆ ಕಾರ್ಯಕ್ರಮದಲ್ಲಿ ಮುಖಂಡರಾದ ವೀರಭಧ್ರಸ್ವಾಮಿ, ಬೈರಾರೆಡ್ಡಿ, ಶ್ರೀರಾಮರೆಡ್ಡಿ, ನವೀನ್ ಕುಮಾರ್, ಜಂಜಪ್ಪ, ಸೈಯದ್ ಫಾರೂಕ್, ರಮೇಶ್, ದೇವರಾಜ್, ವೀರಪ್ಪರೆಡ್ಡಿ, ನಾಗರಾಜ್ ಶ್ರೀಧರ್, ಶಶಿಧರ್ ರೆಡ್ಡಿ, ಅಸ್ಲಾಂ, ನಾರಾಯಣಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.