ADVERTISEMENT

8ಕ್ಕೆ ಎಸ್‌.ಸಿ, ಎಸ್‌.ಟಿ ಐಕ್ಯತಾ ಸಮಾವೇಶ

ಚಿತ್ರದುರ್ಗದಲ್ಲಿ ಕಾಂಗ್ರೆಸ್‌ನಿಂದ ಆಯೋಜನೆ– 5 ಲಕ್ಷ ಜನ ಸೇರುವ ನಿರೀಕ್ಷೆ: ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 5 ಜನವರಿ 2023, 6:43 IST
Last Updated 5 ಜನವರಿ 2023, 6:43 IST
ಕೋಲಾರದಲ್ಲಿ ಬುಧವಾರ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಐಕ್ಯತಾ ಸಮಾವೇಶದ ಪೋಸ್ಟರ್‌ ಬಿಡುಗಡೆ ಮಾಡಿದರು.
ಕೋಲಾರದಲ್ಲಿ ಬುಧವಾರ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್‌ ಐಕ್ಯತಾ ಸಮಾವೇಶದ ಪೋಸ್ಟರ್‌ ಬಿಡುಗಡೆ ಮಾಡಿದರು.   

ಕೋಲಾರ: ‘ಕಾಂಗ್ರೆಸ್‌ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯಮಟ್ಟದ ಐಕ್ಯತಾ ಸಮಾವೇಶ ಜ.8ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ಆಯೋಜಿಸಲಾಗಿದೆ’ ಎಂದು ಕೇಂದ್ರ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

‘ಸಮಾವೇಶದಲ್ಲಿ 5 ಲಕ್ಷ ಮಂದಿ ಭಾಗಿಯಾಗುವ ನಿರೀಕ್ಷೆ ಇದ್ದು, ಕಾಂಗ್ರೆಸ್‌ಗೆ ಶಕ್ತಿ ತುಂಬುವ ಕಾರ್ಯಕ್ರಮ ಇದಾಗಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ ರಾಜ್ಯದ ಹಲವು ಮುಖಂ ಡರು ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ನಾಯಕರಾದ ಡಾ.ಜಿ. ಪರಮೇಶ್ವರ, ಸತೀಶ ಜಾರಕಿಹೊಳಿ, ನಾನು ಸಮಾ ವೇಶದ ನೇತೃತ್ವ ವಹಿಸಿದ್ದೇವೆ’ ಎಂದು ಪತ್ರಕರ್ತರ ಭವನದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು‌.

‘ಸಂವಿಧಾನ ಆಶಯದಂತೆ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುತ್ತಾ ಬಂದಿದ್ದು, ಗಾಂಧೀಜಿ ತೋರಿದ ಮಾರ್ಗದಲ್ಲಿ ದೇಶ ಕಟ್ಟುವ ಕೆಲಸ ಮಾಡಿದೆ. ಭಯೋತ್ಪಾದನೆ ಬೆಂಬಲಿಸಿ ದೇಶ ಒಡೆಯುವ ಕೆಲಸ ಎಂದೂ ಮಾಡಿಲ್ಲ. ಆದರೆ, ಬಿಜೆಪಿ ದೇಶ, ಧರ್ಮ, ಜಾತಿಗಳನ್ನು ಒಡೆದು, ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಈ ಬಗ್ಗೆ ಸಮಾವೇಶದಲ್ಲಿ ಚರ್ಚಿಸಲಾಗುವುದು’ ಎಂದರು.

ADVERTISEMENT

ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಊರುಬಾಗಿಲು ಶ್ರೀನಿವಾಸ್‌, ಕಾಂಗ್ರೆಸ್ ನಗರ ಬ್ಲಾಕ್‌ ಅಧ್ಯಕ್ಷ ಪ್ರಸಾದ್‌ ಬಾಬು, ಗ್ರಾಮೀಣ ಅಧ್ಯಕ್ಷ ಉದಯ್‌ಶಂಕರ್, ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ಕೆ.ಜಯದೇವ್, ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ನಾಗರಾಜ್‌, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸೀತಿಹೊಸೂರು ಮುರಳಿ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಯಕ್ಬಾಲ್ ಆಹ್ಮದ್, ಹಿಂದುಳಿದ ಘಟಕದ ಅಧ್ಯಕ್ಷ ನಾಗರಾಜ್, ಮಹಿಳಾ ಘಟಕ ಜಿಲ್ಲಾಧ್ಯಕ್ಷೆ ರತ್ನಮ್ಮ, ಕಾರ್ಮಿಕ ಘಟಕ ಅಧ್ಯಕ್ಷ ಯಲ್ಲಪ್ಪ, ಮುಖಂಡರಾದ ಜೆ.ಕೆ. ಜಯಕೃಷ್ಣ, ರಾಮಯ್ಯ, ನಾಗರಾಜ್, ಕೋಡಿಯಪ್ಪ, ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.