ಕೋಲಾರ: ‘ಜಿಲ್ಲೆಯಲ್ಲಿನ ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ಧಾರಾಕಾರ ಮಳೆಯಿಂದ ಶಿಥಿಲಗೊಂಡಿರುವುದು ಜಿಲ್ಲಾಡಳಿತಕ್ಕೆ ಮತ್ತು ಜನಪ್ರತಿನಿಧಿಗಳಿಗೆ ಗೊತ್ತಿದೆ. ಶಿಥಿಲ ಶಾಲಾ ಕಟ್ಟಡಗಳ ದುರಸ್ತಿಗೆ ಹಾಗೂ ಪರ್ಯಾಯವಾಗಿ ಹೊಸ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹೇಳಿದರು.
ತಾಲ್ಲೂಕಿನ ಸೀಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡಕ್ಕೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಹೊಸ ಶಾಲಾ ಕಟ್ಟಡಗಳ ನಿರ್ಮಾಣದ ಪ್ರಸ್ತಾವಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದರೆ ಶೀಘ್ರವೇ ಈ ಕಾರ್ಯ ಕೈಗೆತ್ತಿಕೊಂಡು ಪೂರ್ಣಗೊಳಿಸಲಾಗುತ್ತದೆ’ ಎಂದು ಭರವಸೆ ನೀಡಿದರು.
‘ಸೀಪುರ ಶಾಲೆಯ ಒಂದೇ ಕಟ್ಟಡದಲ್ಲಿ ಬಹುತೇಕ ತರಗತಿಗಳು ನಡೆಯುತ್ತಿವೆ. ಇಲಾಖೆ ಅಥವಾ ತಮ್ಮ ಅನುದಾನದಲ್ಲಿ ಆದಷ್ಟು ಬೇಗನೆ ಶಾಲೆಗೆ ಹೆಚ್ಚುವರಿ ಕೊಠಡಿಗಳ ವ್ಯವಸ್ಥೆ ಮಾಡುತ್ತೇವೆ. ಹಲವೆಡೆ ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡಿರುವುದರಿಂದ ಮಕ್ಕಳಿಗೆ ಶಿಕ್ಷಣ ನೀಡಲು ತೊಂದರೆಯಾಗುತ್ತಿದೆ. ಶಿಕ್ಷಣದ ಜತೆಗೆ ಭೌತಿಕ ಸೌಲಭ್ಯಗಳು ಮುಖ್ಯ. ಆದ್ದರಿಂದ ಜಿಲ್ಲಾಡಳಿತ ಸಾಧ್ಯವಾದಷ್ಟು ಬೇಗನೆ ಶಿಥಿಲ ಶಾಲಾ ಕಟ್ಟಡಗಳ ದುರಸ್ತಿ ಅಥವಾ ಹೊಸ ಕಟ್ಟಡಗಳನ್ನು ನಿರ್ಮಾಣ ಮಾಡಬೇಕು’ ಎಂದರು.
‘ಶಾಲಾ ಕಟ್ಟಡದ ಪಕ್ಕದಲ್ಲೇ ಇರುವ ಖಾಸಗಿ ಕಟ್ಟಡವನ್ನು ಶಾಲೆಗೆ ಬಾಡಿಗೆಗೆ ಪಡೆಯುವಂತೆ ಈಗಾಗಲೇ ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಂದು ತರಗತಿಯನ್ನು ಆ ಕಟ್ಟಡಕ್ಕೆ ಸ್ಥಳಾಂತರಿಸಿ. ಗ್ರಾಮದ ಪಕ್ಕದಲ್ಲಿ 2 ಎಕರೆ ಸರ್ಕಾರಿ ಜಮೀನು ಇದ್ದು, ಅದನ್ನು ಶಾಲೆಗೆ ಬಳಸಿಕೊಳ್ಳಬಹುದು. ಅದಕ್ಕೆ ಸಂಬಂಧಪಟ್ಟ ದಾಖಲೆಪತ್ರಗಳನ್ನು ಪಡೆಯಿರಿ’ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬಿಇಒ ಅಶೋಕ್, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಶಾಲೆಯ ಮುಖ್ಯಶಿಕ್ಷಕ ಅಶ್ವತ್ಥ್ ಹಾಗೂ ಸಿಬ್ಬಂದಿ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.