ADVERTISEMENT

ಕೌಶಲ ತರಬೇತಿಯಿಂದ ಸ್ವಾವಲಂಬಿ ಜೀವನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2019, 10:51 IST
Last Updated 5 ಅಕ್ಟೋಬರ್ 2019, 10:51 IST
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವು ಕೋಲಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೌಶಲ ಸಾಧಕರನ್ನು ಸನ್ಮಾನಿಸಲಾಯಿತು.
ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವು ಕೋಲಾರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕೌಶಲ ಸಾಧಕರನ್ನು ಸನ್ಮಾನಿಸಲಾಯಿತು.   

ಕೋಲಾರ: ‘ಯುವಕ ಯುವತಿಯರಿಗೆ ಶಿಕ್ಷಣದ ಜತೆಗೆ ಕೌಶಲ ತರಬೇತಿ ನೀಡಿದರೆ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಸಹಾಯವಾಗುತ್ತದೆ’ ಎಂದು ರಾಜ್ಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಟಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ಅಂತರರಾಷ್ಟ್ರೀಯ ಸಾಕ್ಷರತಾ ಮತ್ತು ಕೌಶಲ ದಿನಾಚರಣೆ ಅಂಗವಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವು ಇಲ್ಲಿ ಶುಕ್ರವಾರ ಕೌಶಲ ಸಾಧಕರಿಗೆ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿ, ‘ಭಾರತವು ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ಜಾಗತಿಕವಾಗಿ 131ನೇ ಸ್ಥಾನದಲ್ಲಿದೆ’ ಎಂದರು.

‘ಯುವ ಶಕ್ತಿಯ ಸಾಮರ್ಥ್ಯ ಬಳಕೆಯಾಗದೆ ದೇಶದ ಆರ್ಥಿಕತೆಯ ಮಟ್ಟ ದಿನೇದಿನೇ ಕುಸಿಯುತ್ತಿದೆ. ಶಿಕ್ಷಣ, ಆರೋಗ್ಯ ಹಾಗೂ ಸಾಕ್ಷರತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಗತ್ತಿನ ಅನಕ್ಷರಸ್ಥ ಜನಸಂಖ್ಯೆಯಲ್ಲಿ ಭಾರತದ ಪ್ರಮಾಣ ಶೇ 37ರಷ್ಟಿದೆ. ಅನಕ್ಷರತೆ ಕಾರಣಕ್ಕೆ ದೇಶದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ. ಸರ್ಕಾರವು ಸಾಕ್ಷರತೆ ಪ್ರಮಾಣ ಹೆಚ್ಚಿಸಿ ನಿರುದ್ಯೋಗ ಸಮಸ್ಯೆ ಬಗೆಹರಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ವಿದ್ಯಾರ್ಥಿಗಳು ಪದವಿ ಪಡೆದರಷ್ಟೇ ಸಾಲದು. ಸಂವಹನ ಮತ್ತು ಕೌಶಲ ತರಬೇತಿಯು ಉದ್ಯೋಗ ಪಡೆಯಲು ಸಹಕಾರಿ. ವಿದ್ಯಾರ್ಥಿಗಳಿಗೆ ಗುರಿ ಇರಬೇಕು. ಆಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಂ.ಜಿ.ಪಾಲಿ ಕಿವಿಮಾತು ಹೇಳಿದರು.

ಸರ್ಕಾರಿ ಮಹಿಳಾ ಕಾಲೇಜು ಪ್ರಾಂಶುಪಾಲ ಪ್ರೊ.ರಾಜೇಂದ್ರ, ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಉಪಾಧ್ಯಕ್ಷೆ ವಿ.ಗೀತಾ, ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರದ ನಿರ್ದೇಶಕ ಎಂ.ವಿ.ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.