ADVERTISEMENT

ಲೈಂಗಿಕ ಕಿರುಕುಳ: ದೂರು ನೀಡಿ

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಅನಿತಾ ಕಿವಿಮಾತು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 13:17 IST
Last Updated 7 ಅಕ್ಟೋಬರ್ 2021, 13:17 IST

ಕೋಲಾರ: ‘ಮಹಿಳೆಯರಿಗೆ ಕರ್ತವ್ಯ ನಿರ್ವಹಣೆ ಸ್ಥಳದಲ್ಲಿ ಲೈಂಗಿಕ ಕಿರುಕುಳ ಅಥವಾ ದೌರ್ಜನ್ಯವಾದರೆ ಭಯಪಡಬೇಡಿ. ಆತ್ಮಸ್ಥೈರ್ಯದಿಂದ ಸವಾಲು ಎದುರಿಸಿ ಪೊಲೀಸರಿಗೆ ಅಥವಾ ಕಾನೂನು ಸೇವಾ ಪ್ರಾಧಿಕಾರಕ್ಕೆ ದೂರು ನೀಡಿ’ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಎನ್.ಪಿ.ಅನಿತಾ ಕಿವಿಮಾತು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ತಾಲ್ಲೂಕಿನ ಬೆಳ್ಳಂಬರಿ ಗ್ರಾಮದಲ್ಲಿ ಕಾರ್ಖಾನೆ ಮಹಿಳಾ ಕಾರ್ಮಿಕರಿಗೆ ಗುರುವಾರ ಹಮ್ಮಿಕೊಂಡಿದ್ದ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನಡೆದರೆ ಅದರಿಂದ ಆಗುವ ಪರಿಣಾಮಗಳು ಗಂಭೀರ ಸ್ವರೂಪದ್ದು. ಲೈಂಗಿಕ ಕಿರುಕುಳವು ಮಹಿಳೆಯರ ಕಾರ್ಯಕ್ಷಮತೆ ಕುಂಠಿತಗೊಳಿಸುವುದರ ಜತೆಗೆ ಮಾನಸಿಕ ಸಮತೋಲನ ಹದೆಗೆಡುತ್ತದೆ’ ಎಂದರು.

ADVERTISEMENT

‘ಸಂವಿಧಾನವು ಮಹಿಳೆಯರು ಮತ್ತು ಪುರುಷರಿಗೆ ಸಮಾನ ಹಕ್ಕುಗಳನ್ನು ನೀಡಿ ಮಹಿಳೆಯರಿಗೆ ಹೊಸ ದಿಕ್ಸೂಚಿ ತೋರಿಸಿದೆ. ಆದರೂ ವಿವಿಧ ಧರ್ಮಗಳ ವೈಯಕ್ತಿಕ ಕಾನೂನಿನಲ್ಲಿ ಸ್ತ್ರೀ ಪುರುಷರ ಹಕ್ಕುಗಳಲ್ಲಿ ತಾರತಮ್ಯ ಮುಂದುವರಿಯುತ್ತಿದೆ. ಸ್ತ್ರೀಯರು ಪುರುಷರು ಸಂವಿಧಾನಾತ್ಮಕವಾಗಿ ಸಮಾನರಾದರೂ ಕೆಲವೆಡೆ ಅಸಮಾನತೆ ಇದೆ’ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಶ್ರೀಧರ್ ಕಳವಳ ವ್ಯಕ್ತಪಡಿಸಿದರು.

ಸದುಪಯೋಗ ಪಡೆಯಿರಿ: ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಆಯೋಜಿಸಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಜಾಗೃತಿ ಕಾರ್ಯಕ್ರಮವನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕು’ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಚ್‌.ಗಂಗಾಧರ್ ಮನವಿ ಮಾಡಿದರು.

ಜಿಲ್ಲಾ ಕಾರ್ಮಿಕರ ಅಧಿಕಾರಿ ಶ್ರೀಕಾಂತ್ ಬಿ.ಪಾಟಿಲ್ ಅವರು ಮಹಿಳಾ ಕಾರ್ಮಿಕರಿಗೆ ಸಂಬಂಧಿಸಿದ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ವಕೀಲ ಕೆ.ಆರ್.ಧನರಾಜ್ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೋದ್ದೇಶಗಳ ಬಗ್ಗೆ ಮತ್ತು ವಕೀಲ ಸೋಮಶೇಖರ್ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ರಘುಪತಿಗೌಡ, ವೃತ ಕಾರ್ಮಿಕ ನಿರೀಕ್ಷಕಿ ರಾಜೇಶ್ವರಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.