ADVERTISEMENT

ಸಿದ್ದನಹಳ್ಳಿ ಕೆರೆ ಸ್ವರೂಪ ನಾಶ: ಅಕ್ರಮವಾಗಿ ಮಣ್ಣು ಸಾಗಣೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 4:38 IST
Last Updated 19 ಡಿಸೆಂಬರ್ 2025, 4:38 IST
ಬಂಗಾರಪೇಟೆ ತಾಲ್ಲೂಕಿನ ಸಿದ್ದನಹಳ್ಳಿ ಕೆರೆಯಲ್ಲಿ ಜೆಸಿಬಿ ಮತ್ತು ಟ್ರ್ಯಾಕ್ಟರ್‌ ಮೂಲಕ ಅಕ್ರಮ ಮಣ್ಣು ಸಾಗಣೆ ಮಾಡುತ್ತಿರುವುದು
ಬಂಗಾರಪೇಟೆ ತಾಲ್ಲೂಕಿನ ಸಿದ್ದನಹಳ್ಳಿ ಕೆರೆಯಲ್ಲಿ ಜೆಸಿಬಿ ಮತ್ತು ಟ್ರ್ಯಾಕ್ಟರ್‌ ಮೂಲಕ ಅಕ್ರಮ ಮಣ್ಣು ಸಾಗಣೆ ಮಾಡುತ್ತಿರುವುದು   

ಬಂಗಾರಪೇಟೆ: ಕೆರೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಗಲು-ರಾತ್ರಿ ಮಣ್ಣು ಸಾಗಾಟ ಮಾಡಲಾಗುತ್ತಿದೆ. ಇದರಿಂದ ಕೆರೆ ಸ್ವರೂಪ ನಾಶವಾಗುತ್ತಿದೆ. ಅಂತರ್ಜಲ ಮಟ್ಟ ಕುಸಿಯುತ್ತಿದೆ. ಈ ನಿಟ್ಟಿನಲ್ಲಿ ಮಣ್ಣು ಸಾಗಾಟ ಮಾಡುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಜಾಣ ಮೌನ ವಹಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಾಲ್ಲೂಕಿನ ಸೂಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಿದ್ದನಹಳ್ಳಿ ಕೆರೆಯಲ್ಲಿ ಕಳೆದ ಕೆಲವು ದಿನಗಳಿಂದ ಜೆಸಿಬಿ ಮತ್ತು ಟ್ರ್ಯಾಕ್ಟರ್ ಮೂಲಕ ಅವೈಜ್ಞಾನಿಕವಾಗಿ ಮಣ್ಣು ತೆಗೆಯಲಾಗುತ್ತಿದೆ. ಇದರಿಂದ ಕೆರೆ ಒಡ್ಡು ಮತ್ತು ತಳಭಾಗಕ್ಕೆ ಹಾನಿಯಾಗುತ್ತಿದ್ದು, ಸಾರ್ವಜನಿಕ ಆಸ್ತಿಗೆ ಧಕ್ಕೆ ಉಂಟಾಗುತ್ತಿದೆ.

ಕೆರೆಯಲ್ಲಿ ಮಣ್ಣು ತೆಗೆಯುತ್ತಿರುವ ಆಳವು ವೈಜ್ಞಾನಿಕ ಮಿತಿಯನ್ನು ಮೀರಿದೆ. ಇದರಿಂದ ಕೆರೆ ನೈಸರ್ಗಿಕ ಜಲಮೂಲ ನಾಶವಾಗುತ್ತಿದೆ ಮತ್ತು ಸುತ್ತಮುತ್ತಲಿನ ರೈತರ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಇದು ಪರಿಸರಕ್ಕೆ ಸರಿಪಡಿಸಲಾಗದ ಹಾನಿಯನ್ನುಂಟು ಮಾಡುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದರು.

ADVERTISEMENT

ಕಂದಾಯ ಇಲಾಖೆ ನಿಯಮಗಳ ಪ್ರಕಾರ ಕೆರೆಗಳಲ್ಲಿ 3 ರಿಂದ 4 ಅಡಿಗಿಂತಲೂ ಹೆಚ್ಚು ಆಳವಾಗಿ ಹಾಗೂ ನೇರವಾಗಿ ಮಣ್ಣು ತೆಗೆಯುವಂತಿಲ್ಲ. ಸರ್ಕಾರದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಅನುಮತಿ ಹಾಗೂ ಪರವಾನಗಿ ಪಡೆಯದೆ ಮಣ್ಣು ತೆಗೆಯುವಂತಿಲ್ಲ. ಜೆಸಿಬಿಯಂತಹ ಭಾರಿ ಯಂತ್ರಗಳನ್ನು ಕೆರೆಗಳಿಗೆ ಇಳಿಸುವಂತಿಲ್ಲ. ಇಷ್ಟೆಲ್ಲ ನಿಯಮಗಳಿದ್ದರೂ ಕೆಲ ಪ್ರಭಾವಿಗಳಿಂದ ಅವ್ಯಾಹತವಾಗಿ ಮಣ್ಣು ದಂಧೆ ನಡೆಯುತ್ತಿದೆ.

ಕೆಲವರು ಹಣಕ್ಕಾಗಿ ಕೆರೆಗಳಲ್ಲಿ ಮಣ್ಣು ತೆಗೆದು ಮಾರಾಟ ಮಾಡುವ ದಂಧೆ ನಡೆಸುತ್ತಿದ್ದಾರೆ. ಇದು ಪರಿಸರಕ್ಕೆ ಹಾನಿಕರ ಮಾತ್ರವಲ್ಲದೆ ಕೆರೆಗಳ ನಾಶಕ್ಕೆ ಕಾರಣವಾಗಿದೆ. ಈ ಅಕ್ರಮ ಚಟುವಟಿಕೆ ತಡೆಯಲು ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮಣ್ಣು ಸಾಗಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಕೆರೆಗಳು ಗ್ರಾಮೀಣ ಭಾಗದ ಜನರ ಜೀವನಾಡಿ. ಆದರೆ, ಮಣ್ಣು ಅವೈಜ್ಞಾನಿಕವಾಗಿ ಕೆರೆಗಳಿಂದ ತೆಗೆಯಲಾಗುತ್ತಿದೆ. ಹೆಚ್ಚಿನ ಆಳದವರೆಗೂ ಮಣ್ಣು ತೆಗೆದಿರುವುದರಿಂದ ಮೂಕ ಪ್ರಾಣಿಗಳು ಹಾಗೂ ಜಾನುವಾರು ಕೆರೆಗಳಲ್ಲಿ ನೀರು ಕುಡಿಯಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ನೀರು ಕುಡಿಯಲು ಕೆರೆಗೆ ಇಳಿದರೆ ಪ್ರಾಣಿಗಳು ಸಾವಿಗೆ ಸಿಲುಕುವ ಸಾಧ್ಯತೆ ಇದೆ. ಮಕ್ಕಳು, ಯುವಕರು ಯಾರಾದರೂ ಕೆರೆ ಪಾಲಾದರೆ ಅವರ ಶವ ಹುಡುಕಲು ಕಷ್ಟವಾಗುತ್ತದೆ ಎಂದರು.

ಮಣ್ಣು ಸಾಗಿಸಿ ಮಾರಾಟ ಮಾಡುವ ದಂಧೆ ಅವ್ಯಾಹತವಾಗಿ ನಡೆದಿದ್ದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿ, ಸಿಬ್ಬಂದಿ ಇದನ್ನು ತಡೆಯಲು ಯಾವುದೇ ಕ್ರಮಕೈಗೊಳ್ಳದೆ ಕಂಡೂ ಕಾಣದಂತೆ ಕಣ್ಣು ಮುಚ್ಚಿಕೊಂಡು ಕುಳಿತಿದ್ದಾರೆ. ಈ ಅಕ್ರಮ ಚಟುವಟಿಕೆ ತಡೆಯಲು ಅಧಿಕಾರಿಗಳು ಕಠಿಣ ಕ್ರಮಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮಣ್ಣು ಸಾಗಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆರೋಪಿಸಿದರು.

ಕೆರೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಗಲು-ರಾತ್ರಿ ಮಣ್ಣು ಸಾಗಾಟ ಮಾಡಲಾಗುತ್ತಿದೆ. ಇದರಿಂದ ಕೆರೆ ಸ್ವರೂಪ ನಾಶವಾಗುತ್ತಿದ್ದು, ಅಂತರ್ಜಲ ಮಟ್ಟ ಕುಸಿಯುತ್ತಿದೆ ಎನ್ನುತ್ತಾರೆ ದಲಿತ ಸಮಾಜ ಸೇನೆ ರಾಜ್ಯಾಧ್ಯಕ್ಷ ಸೂಲಿಕುಂಟೆ ಆನಂದ್. 

ಕೆರೆಯಲ್ಲಿ ಮಾಫಿಯಾದಂತೆ ಅಕ್ರಮವಾಗಿ ಮಣ್ಣು ದಂಧೆ ನಡೆಯುತ್ತಿದೆ. ಇದರಿಂದ ಕೆರೆ ಸ್ವರೂಪ ಬದಲಾಗಿ ಅಂತರ್ಜಲ ಕುಸಿಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎನ್ನುತ್ತಾರೆ ಸಿದ್ದನಹಳ್ಳಿ ಗ್ರಾಮದ ನಿವಾಸಿ ಸುರೇಶ್. 

ಕೆರೆಯಲ್ಲಿ ಅಕ್ರಮ ಮತ್ತು ಅವೈಜ್ಞಾನಿಕವಾಗಿ ಮಣ್ಣು ತೆಗೆಯುತ್ತಿರುವುದು ಕೇವಲ ಕೆರೆಗೆ ಮಾತ್ರವಲ್ಲ. ಆ ಭಾಗದ ಇಡೀ ಪರಿಸರ ಮತ್ತು ರೈತರ ಬದುಕಿಗೆ ದೊಡ್ಡ ಹೊಡೆತ ನೀಡುತ್ತಿದೆ ಎನ್ನುತ್ತಾರೆ ನಿರ್ದೇಶಕಿ ಚಿಗುರು ಸಂಸ್ಥೆ ಪ್ರಭಾವತಿ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.