ಕೋಲಾರ: ನಗರದ ಕೋಟೆ ಬಡಾವಣೆಯಲ್ಲಿನ ಶ್ರೀ ಸೋಮೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವವು ಶುಕ್ರವಾರ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.
ಬ್ರಹ್ಮ ರಥೋತ್ಸವದ ಅಂಗವಾಗಿ ಸೋಮೇಶ್ವರ ಸ್ವಾಮಿಗೆ ವಿಶೇಷ ಪೂಜೆ, ಅಭಿಷೇಕ, ಹೂವಿನ ಅಲಂಕಾರ ಮಾಡಲಾಗಿತ್ತು. ಮಧ್ಯಾಹ್ನ ರಥಶಾಂತಿ, ರಥಬಲಿ, ಆಚಾರ್ಯ ಪೂಜೆ ನಡೆದು ಮಂಗಳ ವಾದ್ಯಗಳೊಂದಿಗೆ ಉತ್ಸವ ಮೂರ್ತಿಯನ್ನು ತರಲಾಯಿತು. ನಂತರ ಸಂಸದ ಎಸ್.ಮುನಿಸ್ವಾಮಿ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು.
ಬೃಹತ್ ಹೂವಿನ ಹಾರಗಳಿಂದ ಅಲಂಕೃತವಾಗಿದ್ದ ರಥ ಹೊರಡುತ್ತಿದ್ದಂತೆ ಭಕ್ತರು ಸೋಮೇಶ್ವರ ಸ್ವಾಮಿಯ ಸ್ಮರಣೆಯೊಂದಿಗೆ ಹಣ್ಣು ದವಳ ಎಲೆ ಅರ್ಪಿಸಿ ಕೃತಾರ್ಥರಾದರು. ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ದೇವಾಲಯದ ಮುಂಭಾಗದಿಂದ ಆರಂಭವಾದ ಬ್ರಹ್ಮ ರಥೋತ್ಸವದಲ್ಲಿ ಭಕ್ತರು ಕಾಲೇಜು ವೃತ್ತದವರೆಗೆ ತೇರು ಎಳೆದರು. ದೇವರನ್ನು ಹೊತ್ತ ತೇರು ಶಂಕರ ಮಠ ಮುಂಭಾಗದ ರಸ್ತೆ, ಕಾಲೇಜು ವೃತ್ತ ಸೇರಿದಂತೆ ಪ್ರಮುಖರಸ್ತೆಗಳಲ್ಲಿ ಸಂಚರಿಸಿತು.
ಹಿಂದಿನ ವರ್ಷದ ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರಳವಾಗಿ ಬ್ರಹ್ಮ ರಥೋತ್ಸವ ಆಚರಿಸಿ ಚಿಕ್ಕ ತೇರನ್ನು ಬಳಸಲಾಗಿತ್ತು. ಈ ಬಾರಿ ಅದ್ಧೂರಿಯಾಗಿ ದೊಡ್ಡ ತೇರಿನಲ್ಲಿ ರಥೋತ್ಸವ ನಡೆಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.